
ಮೂಡಿಗೆರೆ: ಬಡತನ ರೇಖೆಗಿಂತ ಕೆಳಗಿನ ಪಡಿತರ ಚೀಟಿಗಿರುವ ಸರ್ಕಾರದ ಮಾನದಂಡಗಳನ್ನು ಪ್ರತಿ ನ್ಯಾಯಬೆಲೆ ಅಂಗಡಿಗಳಲ್ಲಿ ಅಳವಡಿಸಬೇಕು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಸ್. ಜಯರಾಂ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿಯ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಸಭಾಂಗಣದಲ್ಲಿ ಶನಿವಾರ ನಡೆದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ ಒಟ್ಟು 18,212 ಬಿಪಿಎಲ್ ಪಡಿತರ ಚೀಟಿಗಳಿವೆ. ಇದರಲ್ಲಿ 843 ಬಿಪಿಎಲ್ ಕಾರ್ಡ್ ರದ್ದುಗೊಂಡಿದ್ದು, ತಾಂತ್ರಿಕ ಸಮಸ್ಯೆಯಿಂದ ಎಪಿಎಲ್ ಕಾರ್ಡಿಗೆ ವರ್ಗಾಯಿಸುವ ಪ್ರಕ್ರಿಯೆ ವಿಳಂಬವಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ 3 ಹಂತಗಳಿದ್ದು, ಎಲ್ಲದಕ್ಕೂ ಬಿಲ್ ಆದಲ್ಲಿ ಮಾತ್ರ ಪಡಿತರ ವಿತರಣೆಯಾಗಲಿದೆ. ನ್ಯಾಯಬೆಲೆ ಅಂಗಡಿ ಮುಂದೆ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಕುರಿತು ಸರ್ಕಾರದ ಮಾನದಂಡದ ಫಲಕ ಹಾಕಬೇಕು. ವಿವಾಹವಾದ ಹೆಣ್ಣುಮಕ್ಕಳ ಹಾಗೂ ಹೊರ ಹೋದವರ ಹೆಸರು ಪಡಿತರ ಚೀಟಿಯಲ್ಲಿದೆ. ಅಂತಹ ಕುಟುಂಬದ ವಾರ್ಷಿಕ ಆದಾಯವನ್ನು ಪರಿಗಣಿಸಿ ಬಿಪಿಎಲ್ ಕಾರ್ಡ್ ರದ್ದುಪಡಿಸಲಾಗಿದೆ ಎಂದರು.
ಮಲೆನಾಡು ಭಾಗದಲ್ಲಿ ಕೂಲಿ ಕಾರ್ಮಿಕರು ಹೆಚ್ಚಾಗಿದ್ದು, ಒಟ್ಟಾಗಿ ಕೆಲಸಕ್ಕೆ ಹೋಗಲು ಹಳೆಯ 4 ಚಕ್ರದ ವಾಹನವನ್ನು ಖರೀದಿಸಿಕೊಂಡಿದ್ದಾರೆ. ಅಂತಹ ಕುಟುಂಬದ ಬಿಪಿಎಲ್ ಪಡಿತರ ಚೀಟಿ ರದ್ದುಪಡಿಸಲಾಗಿದೆ. ಇವರುಗಳು ಬಿಪಿಎಲ್ ಕಾರ್ಡಿಗೆ ಅರ್ಹರಾಗಿದ್ದು, ಇಂತಹ ಪ್ರಕರಣವನ್ನು ಸರ್ಕಾರದ ಗಮನಕ್ಕೆ ತಂದು ವಿನಾಯಿತಿ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಬೇಕು ಎಂದು ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.
ತಾಲ್ಲೂಕಿನಲ್ಲಿ 29,032 ಗೃಹಲಕ್ಷ್ಮಿ ಫಲಾನುಭವಿಗಳಿದ್ದು, 28,654 ಫಲಾನುಭವಿಗಳಿಗೆ ಯೋಜನೆಯ ಮಾಸಿಕ ಹಣ ಸಂದಾಯವಾಗುತ್ತಿದೆ. ಎನ್ಪಿಸಿಐ 24, ತೆರಿಗೆ ಪಾವತಿದಾರರ 210, ತಿದ್ದುಪಡಿ 144 ಹಾಗೂ ಮರಣ 378 ಬಿಪಿಎಲ್ ಪಡಿತರ ಚೀಟಿದಾರರಿಗೆ ಹಣ ಸಂದಾಯವಾಗದೆ ಹಾಗೆ ಉಳಿದಿದೆ ಎಂದು ಶಿಶು ಅಭಿವೃದ್ಧಿ ಅಧಿಕಾರಿ ಮಹೇಶ್ ಭಜಂತ್ರಿ ತಿಳಿಸಿದರು.
ತಾಲ್ಲೂಕಿನಲ್ಲಿ 21,990 ಗೃಹಜ್ಯೋತಿ ಫಲಾನುಭವಿಗಳಿದ್ದು, ಸರ್ಕಾರದಿಂದ ₹83 ಲಕ್ಷ ಅನುದಾನ ಬಿಡುಗಡೆಯಾಗಿದೆ. 128 ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಅಧಿಕ ವಿದ್ಯುತ್ ಬಳಸಿರುವ 6,589 ಫಲಾನುಭವಿಗಳಿಂದ ₹20 ಲಕ್ಷ ವಸೂಲಿ ಮಾಡಲಾಗಿದೆ. ವಿವಿಧ ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಿಯಾಯೋಜನೆ ರೂಪಿಸಲಾಗಿದ್ದು, ಅಂಗನವಾಡಿ ಕೇಂದ್ರಗಳನ್ನು ಗೃಹಜ್ಯೋತಿ ಯೋಜನೆಗೆ ಒಳಪಡಿಸಲು ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ. ಬಿದರಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಕುಶಾಲನಗರದಲ್ಲಿ ಕಾಂಕ್ರೀಟ್ ರಸ್ತೆಗೆ ₹25 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿ ನಡೆಸಲು ಅಡ್ಡಲಾಗಿರುವ ವಿದ್ಯುತ್ ಕಂಬವನ್ನು ತೆರವುಗೊಳಿಸುವಂತೆ ಸೂಚಿಸಲಾಗಿದೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದರು.
ತಾಲ್ಲೂಕಿನಲ್ಲಿ 25 ಸಾವಿರ ಮಹಿಳಾ ಫಲಾನುಭವಿಗಳು ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣಿಸಿದ್ದು, ₹1.15 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಕೆಎಸ್ಆರ್ಟಿಸಿ ಘಟಕ ವ್ಯವಸ್ಥಾಪಕ ಮಂಜುನಾಥ್ ಸಭೆಗೆ ತಿಳಿಸಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಎಚ್.ಪಿ. ರಮೇಶ್, ನಾರಾಯಣ, ಶ್ರೀನಿವಾಸ್, ನವೀನ್, ಜಯಮ್ಮ, ಅರುಣ್, ಉಮೇಶ್, ತಾ.ಪಂ. ಇಒ ದಯಾವತಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.