
ಚಿಕ್ಕಮಗಳೂರು: ಮಾಹಿತಿ ನೀಡುವಲ್ಲಿ ವಿಳಂಬ ಮತ್ತು ಸರಿಯಾದ ಮಾಹಿತಿ ನೀಡದ ಕಾರಣಕ್ಕೆ ಕಳೆದ 10 ವರ್ಷಗಳಲ್ಲಿ ಮಾಹಿತಿ ಆಯೋಗವು ₹10 ಕೋಟಿ ದಂಡವನ್ನು ಅಧಿಕಾರಿಗಳಿಗೆ ವಿಧಿಸಿದೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತ ಹರೀಶ್ಕುಮಾರ್ ತಿಳಿಸಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ, ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳಿಗೆ ಆಯೋಜಿಸಿದ್ದ ಮಾಹಿತಿ ಹಕ್ಕು ಕಾಯ್ದೆ ಕುರಿತ ಜಾಗೃತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮಾಹಿತಿ ಕೋರಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಕಾಲಮಿತಿಯಲ್ಲಿ ಉತ್ತರ ಒದಗಿಸಬೇಕು. ಇಲ್ಲದಿದ್ದರೆ ದಂಡ ಬೀಳಲಿದೆ’ ಎಂದರು.
ರಾಜ್ಯದಲ್ಲಿ 2005ರಿಂದ ಈ ಕಾಯ್ದೆ ಜಾರಿಯಲ್ಲಿದೆ. ಆಯೋಗವು ಆಡಳಿತದಲ್ಲಿ ಪಾರದರ್ಶಕತೆ ಮತ್ತು ಬದ್ಧತೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಪ್ರತಿ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆಯ ಅಧ್ಯಯನ ಮತ್ತು ಸಾಮಾನ್ಯ ತಿಳಿವಳಿಕೆ ಇರಬೇಕು. ಮಾಹಿತಿ ಬಯಸಿ ಸಲ್ಲಿಕೆಯಾಗುವ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಕಾಯ್ದೆಯಲ್ಲಿ ಲಭ್ಯವಿರುವ ಸೆಕ್ಷನ್ಗಳ ಆಧಾರದ ಮೇಲೆ ಉತ್ತರ ಮತ್ತು ಮಾಹಿತಿ ಒದಗಿಸಬೇಕು ಎಂದು ತಿಳಿಸಿದರು.
ಮಾಹಿತಿ ಕೇಳಿ ಯಾವುದೇ ವ್ಯಕ್ತಿ ಸರ್ಕಾರದ ಉದ್ಯೋಗ, ಸೌಲಭ್ಯಗಳ ಬಗ್ಗೆ ಮಾಹಿತಿ ಕೇಳಿ ಅರ್ಜಿ ಸಲ್ಲಿಸಿದ್ದಲ್ಲಿ 30 ದಿನಗಳಲ್ಲಿ ಮಾಹಿತಿ ನೀಡಬೇಕಾಗುತ್ತದೆ. ಯಾವುದೇ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಅಥವಾ ತನಿಖೆ ಮುಕ್ತಾಯವಾಗಿ ಅಂತಿಮ ವರದಿ ಸಲ್ಲಿಸದಿರುವ ಪ್ರಕರಣಗಳಲ್ಲಿ ಮಾಹಿತಿ ನೀಡುವ ಅಗತ್ಯವಿಲ್ಲ. ತನಿಖೆ ಮುಕ್ತಾಯವಾದ ಬಗ್ಗೆ ಸಂಬಂಧಿಸಿದ ಅಧಿಕಾರಿ ಅಥವಾ ಸಂಸ್ಥೆ ದೃಢೀಕರಣ ನೀಡದ ಹೊರತು ಯಾವುದೇ ಮಾಹಿತಿಯನ್ನು ನೀಡುವಂತಿಲ್ಲ. ಸಾರ್ವಜನಿಕ ಮಾಹಿತಿ ಅಧಿಕಾರಿಗೆ ಕಾಯ್ದೆ ಮತ್ತು ಕಾನೂನುಗಳ ಸಾಮಾನ್ಯ ಜ್ಞಾನ ಅಗತ್ಯ ಎಂದು ಅವರು ಹೇಳಿದರು.
ಮಾಹಿತಿ ಆಯುಕ್ತ ಬದ್ರುದ್ದೀನ್ ಕೆ. ಮಾತನಾಡಿ, ‘ಮಾಹಿತಿ ಕೋರಿ ಬಂದ ಅರ್ಜಿಗಳಿಗೆ ಕಾಯ್ದೆಯ ಅನ್ವಯ ವಿಲೇವಾರಿ ಮಾಡಬೇಕು. ಅರ್ಜಿಗಳ ವಿಲೇವಾರಿಯಲ್ಲಿ ಜಿಲ್ಲೆ ಪ್ರಥಮ ಸ್ಥಾನಕ್ಕೆ ಬರುವಂತೆ ನೋಡಿಕೊಳ್ಳಬೇಕು. ಯಾವ ಮಾಹಿತಿ ನೀಡಲು ಅವಕಾಶವಿದೆ ಮತ್ತು ಅವಕಾಶವಿಲ್ಲ ಎಂಬುದರ ಬಗ್ಗೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ತಿಳಿವಳಿಕೆ ಇರಬೇಕು’ ಎಂದು ಹೇಳಿದರು.
ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಪ್ರಾಸ್ತಾವಿಕ ಮಾತನಾಡಿ, ‘ಮಾಹಿತಿ ಹಕ್ಕು ಕಾಯ್ದೆ. ಸ್ವತಂತ್ರ ಭಾರತದಲ್ಲಿ ಹೆಚ್ಚು ಪರಿಣಾಮಕಾರಿ ಹಾಗೂ ಹೆಚ್ಚು ಅವಶ್ಯಕತೆ ಇರುವ ಕಾಯ್ದೆ. ಸರ್ಕಾರಿ ದಾಖಲೆಗಳನ್ನು ಅಷ್ಟು ಸುಲಭವಾಗಿ ಯಾರಿಗೂ ನೀಡುತ್ತಿರಲಿಲ್ಲ. ಕಾಲ ಕ್ರಮೇಣ ಸಾಕಷ್ಟು ಬದಲಾವಣೆ ಆಗಿದ್ದು, ಈ ವಿಷಯದಲ್ಲಿ ಕರ್ನಾಟಕ ಮುಂಚೂಣಿಯಲ್ಲಿ ಇತ್ತು. ಮಾಹಿತಿ ಹಕ್ಕು ಕಾಯ್ದೆ 2005ರಲ್ಲಿ ಜಾರಿಗೆ ಬರುವುದಕ್ಕೆ ಮುನ್ನವೇ ಕರ್ನಾಟಕದಲ್ಲಿ ಸಾರ್ವಜನಿಕರಿಗೆ ದಾಖಲೆಗಳನ್ನು ಯಾವುದೇ ರಹಸ್ಯವಿಲ್ಲದೆ ಮುಕ್ತವಾಗಿ ನೀಡಬೇಕು ಎಂದು ತೀರ್ಮಾನವಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಕಾಯ್ದೆ ಜಾರಿಗೆ ಬಂದಿತ್ತು. ಬೇರೆ ರಾಜ್ಯಗಳು ಸಹ ಈ ದಿಸೆಯಲ್ಲಿ ಕೆಲವು ಪ್ರಯತ್ನ ಮಾಡಿದ್ದವು ಎಂದರು.
ಮಾಹಿತಿ ಹಕ್ಕು ಕಾಯ್ದೆ ಸಮರ್ಪಕ ಅನುಷ್ಠಾನದ ಜವಾಬ್ದಾರಿ ಪ್ರತಿಯೊಬ್ಬ ಅಧಿಕಾರಿಯ ಮೇಲಿದೆ. ಕಾಯ್ದೆ ಬಂದ ನಂತರ 20 ವರ್ಷಗಳಲ್ಲಿ ಕ್ರಾಂತಿಕಾರಕ ಬದಲಾವಣೆ ಆಗಿದೆ ಎಂದು ಹೇಳಿದರು.
ಸಭೆಯಲ್ಲಿ ಮಾಹಿತಿ ಆಯುಕ್ತರಾದ ಮಹೇಶ್ ವಾಳ್ವೇಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಹೆಚ್ಚುವರಿ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.