
ತರೀಕೆರೆ: ಪೌರಕಾರ್ಮಿಕರು, ಸಫಾಯಿ ಕರ್ಮಚಾರಿಗಳಿಗೆ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ವಸತಿ ನಿರ್ಮಿಸಿ ಹಕ್ಕುಪತ್ರ ನೀಡಬೇಕು ಎಂದು ಉಪವಿಭಾಗಾಧಿಕಾರಿ ಎನ್.ವಿ.ನಟೇಶ್ ಸೂಚಿಸಿದರು.
ಪಟ್ಟಣದ ಉಪ ವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಉಪವಿಭಾಗ ಮಟ್ಟದ ಸಫಾಯಿ ಕರ್ಮಚಾರಿಗಳ ಪುನರ್ವಸತಿ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ತರೀಕೆರೆ ಎನ್. ವೆಂಕಟೇಶ್ ಮಾತನಾಡಿ, ಪೌರಕಾರ್ಮಿಕರಿಗೆ ಹಾಗೂ ಸಫಾಯಿ ಕರ್ಮಚಾರಿಗಳು ವಾಸವಾಗಿರುವ ಕೊಳಚೆ ಪ್ರದೇಶಗಳಲ್ಲಿ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ವಸತಿ ವ್ಯವಸ್ಥೆ ಮಾಡಿಲ್ಲ ಎಂದು ದೂರಿದರು. ಈ ಕುರಿತು ಪ್ರತಿಕ್ರಿಯಿಸಿದ ಉಪ ವಿಭಾಗಾಧಿಕಾರಿ ನ್.ವಿ.ನಟೇಶ್, ಪಟ್ಟಣದ ಅಂಬೇಡ್ಕರ್ ನಗರ, ಬಾಪೂಜಿ ಕಾಲೊನಿ, ಕಡೂರು ಅಂಬೇಡ್ಕರ್ ನಗರ ಮತ್ತು ಸುಭಾಷ್ ನಗರ ಹಾಗೂ ಅಜ್ಜಂಪುರ, ಎನ್.ಆರ್.ಪುರ, ಬೀರೂರು ಪೌರಕಾರ್ಮಿಕರಿಗೆ ವಸತಿ ವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಕೊಳಚೆ ಅಭಿವೃದ್ಧಿ ಮಂಡಳಿಯ ಎಂಜಿನಿಯರ್ ಯಶವಂತ್ ಅವರಿಗೆ ಸೂಚಿಸಿದರು.
ಉಪ ವಿಭಾಗ ಮಟ್ಟದ ಆಸ್ಪತ್ರೆಯ ಸ್ವಚ್ಛತಾ ಕರ್ಮಚಾರಿಗಳಿಗೆ ಸುರಕ್ಷತಾ ಪರಿಕರ ನೀಡಬೇಕು. ವಿಶ್ರಾಂತಿ ಗೃಹ ವ್ಯವಸ್ಥೆ ಮತ್ತು ಪ್ರತಿ ತಿಂಗಳು ಐದನೇ ತಾರೀಖಿನೊಳಗೆ ವೇತನ ಪಾವತಿಸಬೇಕು. ಎಲ್ಲಾ ಸರ್ಕಾರಿ ರಜೆಗಳನ್ನು ನೀಡಬೇಕು ಎಂದು ವೆಂಕಟೇಶ್ ಒತ್ತಾಯಿಸಿದರು.
ಸಭೆಯಲ್ಲಿ ಸದಸ್ಯರಾದ ಜಿ.ಟಿ.ರಮೇಶ್, ಸಚಿನ್, ಎಂ.ವಿ.ಭವಾನಿ, ತರೀಕೆರೆ ತಹಶೀಲ್ದಾರ್ ವಿಶ್ವಜಿತ್ ಮೆಹ್ತಾ, ಅಜ್ಜಂಪುರ ತಹಶೀಲ್ದಾರ್ ವಿನಾಯಕ ಸಾಗರ್, ಕಡೂರು ತಹಶೀಲ್ದಾರ್ ಪೂರ್ಣಿಮಾ, ಎನ್.ಆರ್.ಪುರ ತಹಶೀಲ್ದಾರ್ ನೂರುಲ್ಲಾ ಹುದಾ, ಮುಖ್ಯಾಧಿಕಾರಿಗಳಾದ ರಂಜನ್, ಪ್ರಕಾಶ್, ಮಂಜುನಾಥ್, ರಮೇಶ್, ವೈದ್ಯಾಧಿಕಾರಿಗಳಾದ ಚಂದ್ರಶೇಖರ್, ಮುಖಂಡ ಎಸ್.ಕೆ. ಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಮಂಜುನಾಥ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.