
ಚಿಕ್ಕಮಗಳೂರು: ಉಕ್ಕಿನ ಮನುಷ್ಯ ಎಂದೇ ಖ್ಯಾತಿ ಪಡೆದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ದೇಶದ ಏಕತೆಗೆ ಕಾರಣಕರ್ತರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ಹೇಳಿದರು.
ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಜಿಲ್ಲಾ ಪೊಲೀಸ್ ಕಚೇರಿ ಮುಂಭಾಗದ ಸರ್ಕಲ್ ಬಳಿ ಶುಕ್ರವಾರ ಆಯೋಜಿಸಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನ-ರಾಷ್ಟ್ರೀಯ ಏಕತಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಭಾರತದ ಏಕೀಕರಣಕ್ಕೆ ಅವರು ನೀಡಿರುವ ಕೊಡುಗೆ ಪರಿಗಣಿಸಿ ಅವರನ್ನು ‘ಭಾರತದ ಏಕೀಕರಣದ ರೂವಾರಿ’ ಎಂದು ಕರೆಯಲಾಗುತ್ತದೆ. ಅವರಲ್ಲಿನ ದೇಶಪ್ರೇಮ ಮಾದರಿಯಾಗಿದೆ ಎಂದರು.
ರಾಷ್ಟ್ರದ ಏಕತೆ ಮತ್ತು ಸಾರ್ವಭೌಮತೆಯನ್ನು ಕಾಪಾಡಿದ ಹಾಗೂ ಅವುಗಳನ್ನು ತಮ್ಮ ಕಾರ್ಯಗಳ ಮೂಲಕವೇ ಎತ್ತಿ ಹಿಡಿದ ದೇಶದ ಮೊದಲ ಉಪಪ್ರಧಾನಿ ಹಾಗೂ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲರ ಜೀವನ ಮತ್ತು ಆದರ್ಶಗಳು ಈ ಕಾಲಕ್ಕೂ ಪ್ರಸ್ತುತ ಮತ್ತು ಅನುಕರಣೀಯ ಎಂದು ಹೇಳಿದರು.
ಸ್ವಾತಂತ್ರ್ಯ ನಂತರ ಹರಿದು ಹಂಚಿಹೋಗಿದ್ದ ಸಂಸ್ಥಾನಗಳನ್ನು ಭಾರತದ ಒಕ್ಕೂಟದಲ್ಲಿ ಸೇರಿಸಿ ಒಗ್ಗೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು. ಅದು ಸುಲಭದ ಕೆಲಸವಾಗಿರಲಿಲ್ಲ ಎಂದರು.
ಸಂಸ್ಥಾನಗಳ ರಾಜ ಮಹಾರಾಜರೊಂದಿಗೆ ಮಾತುಕತೆ ನಡೆಸುವ ಹೊಣೆಗಾರಿಕೆಯನ್ನು ಪಟೇಲ್ ಹಾಗೂ ಭಾರತದ ಕೊನೆಯ ವೈಸರಾಯ್ ಮೌಂಟ್ ಬ್ಯಾಟನ್ರ ರಾಜಕೀಯ ಸಲಹೆಗಾರ ವಿ.ಪಿ.ಮೆನನ್ ಅವರಿಗೆ ಪ್ರಧಾನಿ ಜವಾಹರಲಾಲ್ ನೆಹರು ಅವರು ವಹಿಸಿದರು. ಪರಿಣಾಮಕಾರಿ ಕಾರ್ಯತಂತ್ರ ಮತ್ತು ದೂರದೃಷ್ಟಿಯೊಂದಿಗೆ ಈ ಕೆಲಸಕ್ಕೆ ಅಣಿಯಾದ ಪಟೇಲರು ತಮ್ಮ ಜಾಣ್ಮೆ ಮತ್ತು ಕಠಿಣ ನಿಲುವುಗಳಿಂದಲೇ ಅನೇಕ ಜಟಿಲ ಪರಿಸ್ಥಿತಿಗಳನ್ನು ತಿಳಿಗೊಳಿಸಿದರು ಎಂದು ಹೇಳಿದರು.
ಗುಜರಾತಿನ ಏಕಥಾನ್ ಎಂಬ ನಗರದಲ್ಲಿ ಪ್ರಧಾನ ಮಂತ್ರಿ ಅವರು ರಾಷ್ಟ್ರೀಯ ಏಕತಾ ದಿನವನ್ನು ಆಚರಿಸುತ್ತಾರೆ. ದೊಡ್ಡ ಮಟ್ಟದಲ್ಲಿ ಪೊಲೀಸ್ ಪೆರೇಡ್ ನಡೆಯುತ್ತದೆ ಎಂದು ತಿಳಿಸಿದರು.
ಅನಂತರ ತಾಲ್ಲೂಕು ಕಚೇರಿ ತನಕ ನಡೆದ ಮ್ಯಾರಥಾನ್ ನಡೆಯಿತು. ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್, ಡಿವೈಎಸ್ಪಿ ಶೈಲೇಂದ್ರ, ಪೊಲೀಸರು, ವಿವಿಧ ಇಲಾಖೆ ಅಧಿಕಾರಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.