
ಮುತ್ತಿನಕೊಪ್ಪ(ನರಸಿಂಹರಾಜಪುರ): ಏಳು ವರ್ಷಗಳಿಂದ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆಯಿಂದ ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಹಲವಾರು ಕೊಡುಗೆ ನೀಡಲಾಗಿದೆ ಎಂದು ಸಂಸ್ಥೆಯ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎಸ್.ಜಗದೀಶ್ ಹೇಳಿದರು.
ತಾಲ್ಲೂಕಿನ ಮುತ್ತಿನಕೊಪ್ಪ ಗ್ರಾಮದಲ್ಲಿರುವ ಸಂಜೀವಿನಿ ವಿದ್ಯಾಸಂಸ್ಥೆ ವಾರ್ಷಿಕೋತ್ಸವದಲ್ಲಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅವರು ಮಾತನಾಡಿದರು.
ಈಗಾಗಲೇ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆಯಿಂದ ಗ್ರಾಮೀಣ ಭಾಗದ ಕನ್ನಡ ಶಾಲೆಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ಹಾಗೂ ಅನಾರೋಗ್ಯಕ್ಕೆ ತುತ್ತಾದವರಿಗೆ ಗಾಲಿಕುರ್ಚಿ ನೀಡಲಾಗಿದೆ. ಮುತ್ತಿನಕೊಪ್ಪದಂತಹ ಗ್ರಾಮೀಣ ಪ್ರದೇಶದಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.
ಸೀನಿಯರ್ ಚೇಂಬರ್ ಉಪಾಧ್ಯಕ್ಷ ಪಿ.ಎಸ್.ವಿದ್ಯಾನಂದ ಕುಮಾರ್ ಮಾತನಾಡಿದರು. ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆಯ ಕಾರ್ಯದರ್ಶಿ ಎಂ.ಕೆ.ಕೃಷ್ಣಮೂರ್ತಿ, ಎಂ.ಟಿ.ಆರ್ ಸಂಸ್ಥೆ ಜನರಲ್ ಮ್ಯಾನೇಜರ್ ಎಸ್.ಪುಟ್ಟಸ್ವಾಮಿ, ಸೀನಿಯರ್ ಚೇಂಬರ್ ಪದಾಧಿಕಾರಿಗಳಾದ ಎಸ್.ಎಸ್.ಗಿರಿ, ಬಿ.ಎನ್. ದಕ್ಷಿಣ ಮೂರ್ತಿ, ಎಚ್.ಟಿ.ಧನಂಜಯ, ಡಾ.ಮಹೇಶ್ ಭಂಡಾರಿ, ಕುಮಾರ್ ಜಿ.ಶೆಟ್ಟಿ, ಎನ್.ಟಿ.ಶೇಷಾಚಲ, ಸತೀಶ್ ಇದ್ದರು.
ಸಂಜೀವಿನಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಎಂ.ಕೆ.ಕೃಪಾಲ್ ದಂಪತಿಯನ್ನು ಸನ್ಮಾನಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.