ಚಿಕ್ಕಮಗಳೂರು: ‘ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಅಪಮಾನ ಅನುಭವಿಸಿದ್ದರು. ಬಾದಾಮಿಯಲ್ಲೂ ಸೋತಿದ್ದರೆ ಪರಿಸ್ಥಿತಿ ಏನಾಗುತ್ತಿತ್ತು ಎಂಬುದು ಅವರಿಗೂ ಗೊತ್ತು. ಈಗ ಜೆಡಿಎಸ್ ವಿರುದ್ಧ ಸೇಡು ತೀರಿಸಿಕೊಳ್ಳಲು ಸಿದ್ದರಾಮಯ್ಯ ಸಿದ್ಧರಾಗಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
‘ಚುನಾವಣೆ ಪ್ರಚಾರಕ್ಕೆ ಸಿದ್ದರಾಮಯ್ಯ, ಎಚ್.ಡಿ.ದೇವೇಗೌಡ, ಕುಮಾರಸ್ವಾಮಿ ಹೆಲಿಕಾಪ್ಟರ್ನಲ್ಲಿ ಒಟ್ಟಾಗಿ ಹೋದರೆ ಒಗ್ಗಟ್ಟಿನ ಮಂತ್ರ ಎಂದು ಹೇಳಲಾಗದು. ಅದೆಲ್ಲ ಹೆಲಿಕಾಪ್ಟರ್ನಲ್ಲಿ ಕುಳಿತಿರುವವರೆಗೆ ಮಾತ್ರ. ಮಂಡ್ಯದಲ್ಲಿ ಪರಸ್ಪರ ಆರೋಪ ಪ್ರತ್ಯಾರೋಪ ಯಾಕೆ ನಡೆಯುತ್ತಿದೆ? ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಮುಂದುವರಿಯುವ ಸಾಧ್ಯತೆ ಇಲ್ಲ’ ಎಂದು ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಮಾಧ್ಯಮದವರ ಮೇಲೆ ದಾಳಿಯಾದರೆ ಅದಕ್ಕೆ ನಾವು ಜವಾಬ್ದಾರರಲ್ಲ ಎಂದು ಮಂಡ್ಯದ ಕೆಆರ್ಎಸ್ನಲ್ಲಿ ರೋಡ್ ಶೋ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಮಾಧ್ಯಮದವರ ಬಗ್ಗೆ ಹಗುರವಾಗಿ ಮಾತಾಡಿರುವುದು ಮತ್ತು ತಾನು ಹೇಳಿದಂತೆ ಮಾಧ್ಯಮದವರು ನಡೆದುಕೊಳ್ಳಬೇಕೆಂಬ ಅಪೇಕ್ಷೆ ಖಂಡನೀಯ. ಕುಮಾರಸ್ವಾಮಿ ಕ್ಷಮೆಯಾಚಿಸಬೇಕು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.