
ಚಿಕ್ಕಮಗಳೂರು: ಸಣ್ಣ ಕೈಗಾರಿಕೆಗಳ ಸ್ಥಾಪನೆಯಿಂದ ಆರ್ಥಿಕ ಅಭಿವೃದ್ಧಿಯ ಜೊತೆಗೆ ಉದ್ಯೋಗ ಸೃಷ್ಟಿಗೂ ನೆರವಾಗುತ್ತದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಪ್ರಭಾರ ಜಂಟಿ ನಿರ್ದೇಶಕ ಸಿ.ಎಂ.ಮಹೇಶ್ ಕುಮಾರ್ ಹೇಳಿದರು.
ಬುಧವಾರ ನಗರದ ಆದ್ರಿಕಾ ಹೋಟೆಲ್ನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಸಹಯೋಗದಲ್ಲಿ ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಮತ್ತು ವೇಗಗೊಳಿಸುವ ಯೋಜನೆಯಡಿ ಲೀನ್ ಯೋಜನೆ ಮತ್ತು ಝಡ್.ಇ.ಡಿ. ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದ್ದು, ಕಾಸಿಯಾ ಸೇರಿದಂತೆ ವಿವಿಧ ಕೈಗಾರಿಕಾ ಸಂಸ್ಥೆಗಳ ಸಮಸ್ಯೆಗಳನ್ನು ಸರ್ಕಾರದ ಇತಿಮಿತಿಯಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಉದ್ದಿಮೆದಾರರಿಗೆ ರಫ್ತು ಕುರಿತು ತರಬೇತಿ ಸಹ ನೀಡಿ ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದರು.
ಸರ್ಕಾರ ಕೈಗಾರಿಕೆಗೆ ಸಂಬಂಧಿಸಿದ ವಿವಿಧ ಚಟುವಟಿಕೆ ಕೈಗೊಳ್ಳುವುದರಿಂದ ಯುವಕರು ಉದ್ಯಮ ಸ್ಥಾಪಿಸಲು ಒಂದು ಉತ್ತಮ ಅವಕಾಶವಾಗುತ್ತದೆ. ರೈತರು, ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಬೇಕು. ಸರ್ಕಾರದಿಂದ ಸಣ್ಣ ಗುಡಿ ಕೈಗಾರಿಕೆ ಸ್ಥಾಪಿಸಲು ಸಬ್ಸಿಡಿ ವ್ಯವಸ್ಥೆ ಇದ್ದು, ಇದರ ಸೌಲಭ್ಯ ಪಡೆದು ನಿರುದ್ಯೋಗಿಗಳಿಗೆ ಕೆಲಸವನ್ನು ನೀಡಬೇಕು ಎಂದು ಹೇಳಿದರು.
ಕಾಸಿಯ ಅಧ್ಯಕ್ಷ ಬಿ.ಆರ್.ಗಣೇಶ್ರಾವ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಭಿವೃದ್ಧಿಯಲ್ಲಿ ಕೃಷಿ ಮತ್ತು ಕೈಗಾರಿಕೆಗಳು ಪ್ರಧಾನ ಪಾತ್ರ ವಹಿಸುತ್ತವೆ. ಸಣ್ಣ ಪ್ರಮಾಣದ ಕೈಗಾರಿಕೆಗಳಿಂದ ಗ್ರಾಮೀಣ ಜನರಿಗೆ ಉದ್ಯೋಗ ಸಿಗುತ್ತದೆ. ವಿದ್ಯಾರ್ಥಿಗಳು ಮತ್ತು ಉದ್ಯಮದಾರರು ಸಾಧನೆ ಮಾಡಲು ಈ ಯೋಜನೆಯು ಉತ್ತಮವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಮಹೇಶ್ ಎಚ್.ಎನ್., ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕ ಶ್ರೀಪ್ರಸಾದ್ ಕೃಷ್ಣತ್ ಶೇಟ್, ಜಿಲ್ಲಾ ಪಂಚಾಯಿತಿ ಗ್ರಾಮೀಣ ಕೈಗಾರಿಕೆ ಉಪನಿರ್ದೇಶಕ ಎನ್.ಚಂದ್ರಶೇಖರ್, ಕೆಎಸ್ಎಫ್ಸಿ ಶಾಖಾ ವ್ಯವಸ್ಥಾಪಕಿ ಪ್ರಮೀಳಾ ಎಚ್, ಜಂಟಿ ಕಾರ್ಯದರ್ಶಿ ದಿನೇಶ್ ಕುಮಾರ್ ವಿ, ಪ್ಯಾನಲ್ ಅಧ್ಯಕ್ಷ ಸುಭಾಷ್ ಚಂದ್ರ ಭಟ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಮ್ಮ ದೇಶದಲ್ಲಿ ಅತೀ ಹೆಚ್ಚಾಗಿ ಕಂಡು ಬರುವ ಸಣ್ಣ ಕೈಗಾರಿಕೆಗಳು ರೈತರಿಂದ ಬೆಳವಣಿಗೆಯಾಗಿವೆ ಉದ್ಯಮಗಳು ಕೂಡ ಅವರಿಂದಲೇ ಬೆಳೆಯುತ್ತಿವೆ.– ಬಿ.ಆರ್.ಗಣೇಶ್ರಾವ್, ಕಾಸಿಯಾ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.