ಅಜ್ಜಂಪುರ: ‘ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹ ಮತ್ತು ಗ್ರಾಮೀಣ ಯುವ ಕ್ರೀಡಾಪಟುಗಳ ಉತ್ತೇಜನಕ್ಕಾಗಿ ಆಯೋಜಿಸುವ ಗ್ರಾಮೀಣ ಕ್ರೀಡಾಕೂಟದಲ್ಲಿ ಭಾಗವಹಿಸಲು ಯುವ ಸಮೂಹ ಹೆಚ್ಚು ಉತ್ಸಾಹ ತೋರಬೇಕು’ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಾಲ್ಲೂಕು ಯುವ ಸಮನ್ವಯಾಧಿಕಾರಿ ಮಲ್ಲಿದೇವಿಹಳ್ಳಿ ಶ್ರೀನಿವಾಸ್ ಮನವಿ ಮಾಡಿದರು.
ತಾಲ್ಲೂಕಿನ ಗಡೀಹಳ್ಳಿ ಗ್ರಾಮದಲ್ಲಿ ಕ್ಲಸ್ಟರ್ ಮಟ್ಟದ ಗ್ರಾಮೀಣ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗಡೀಹಳ್ಳಿ ಪಂಚಾಯಿತಿ ಅಧ್ಯಕ್ಷೆ ಕವಿತಾ ಮೌನೇಶ್ ಮಾತನಾಡಿ, ಯುವಕರು ಮೊಬೈಲ್ ಗೀಳಿನಿಂದ ಹೊರಬರಬೇಕು. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಪೂರಕವಾದ ಕ್ರೀಡಾ ಚಟುವಟಿಕೆಯಲ್ಲಿ ಭಾಗಿಯಾಗಬೇಕು ಎಂದು ಸಲಹೆ ನೀಡಿದರು.
ವಿವಿಧ ಪಂಚಾಯಿತಿ ಅಧ್ಯಕ್ಷರಾದ ಪಿಡಿಒ ಹರ್ಷವರ್ಧನ್, ಕುಮಾರ್, ರಮೇಶ್, ಹುಲ್ಲಪ್ಪ ಹಳ್ಳಿಕೇರಿ, ಅಮೀರ್ ಇದ್ದರು. ಗಡೀಹಳ್ಳಿ, ಕಲ್ಲೇನಹಳ್ಳಿ, ತ್ಯಾಗದಕಟ್ಟೆ, ಬೇಗೂರು, ಸೊಲ್ಲಾಪುರ ಪಂಚಾಯಿತಿ ವ್ಯಾಪ್ತಿಯ 19 ವರ್ಷ ಮೇಲ್ಪಟ್ಟ ಕ್ರೀಡಾಪಟುಗಳು ಕಬಡ್ಡಿ, ವಾಲಿಬಾಲ್, ಕೋಕೊ ಪಂದ್ಯಾವಳಿ ಮತ್ತು ಯೋಗ ಪ್ರದರ್ಶನದಲ್ಲಿ ಪಾಲ್ಗೂಂಡರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರ್ಯಕ್ರಮ ಆಯೋಜಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.