ಚಿಕ್ಕಮಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಶನಿವಾರ ಜಿಲ್ಲೆಯ ಎಲ್ಲ 58 ಕೇಂದ್ರಗಳಲ್ಲಿ ಸುಗಮವಾಗಿ ಪರೀಕ್ಷೆ ನಡೆದಿದೆ. 12,622 ಪರೀಕ್ಷಾರ್ಥಿಗಳ ಪೈಕಿ 149 ಮಂದಿ ಗೈರು ಹಾಜರಾಗಿದ್ದರು.
ಶನಿವಾರ ಗಣಿತ ಪರೀಕ್ಷೆ ಇತ್ತು. ಬೆಳಿಗ್ಗೆ 10.30ರಿಂದ 1.30ರವರೆಗೆ ಪರೀಕ್ಷೆ ನಡೆಯಿತು. 12473 ಪರೀಕ್ಷಾರ್ಥಿಗಳು ಹಾಜರಾಗಿದ್ದರು. ಅನಾರೋಗ್ಯವಿದ್ದ 20 ಪರೀಕ್ಷಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಕಂಟೈನ್ಮೆಂಟ್ ಪ್ರದೇಶಗಳ 12 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 553 ವಲಸೆ ಪರೀಕ್ಷಾರ್ಥಿಗಳ ಪೈಕಿ ನಾಲ್ವರು ಗೈರು ಹಾಜರಾಗಿದ್ದರು.
ಬಹಳಷ್ಟು ಪರೀಕ್ಷಾರ್ಥಿಗಳು ಬೆಳಿಗ್ಗೆ 9 ಗಂಟೆ ಹೊತ್ತಿಗೆ ಕೇಂದ್ರಗಳಿಗೆ ಬಂದಿದ್ದರು. ಪ್ರವೇಶ ದ್ವಾರದಲ್ಲೇ ಥರ್ಮಲ್ ಸ್ಕ್ಯಾನರ್ ತಪಾಸಣೆ ನಡೆಸಲಾಯಿತು. ಸಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು. ಅಂತರ ನಿರ್ವಹಣೆಗೆ ಎಲ್ಲ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷೆ ಮುಗಿದ ನಂತರ ಅಂತರ ನಿರ್ವಹಿಸಿಯೇ ವಿದ್ಯಾರ್ಥಿಗಳನ್ನು ಹೊರಕ್ಕೆ ಕಳಿಸಲಾಯಿತು.
ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾರ್ಥಿಗಳನ್ನು ಕರೆ ತರಲು ಬಸ್ ವ್ಯವಸ್ಥೆ ಇತ್ತು. ಪರೀಕ್ಷೆ ಮುಗಿದ ನಂತರ ಬಸ್ಗಳಲ್ಲಿ ವಾಪಸ್ ಕರೆದೊಯ್ಯಲಾಯಿತು.
ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿಯೂ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಪರೀಕ್ಷೆ ಯಶಸ್ವಿಯಾಗಿ ನಡೆದಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ನಂಜಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.