ADVERTISEMENT

ಸಾರಿಗೆ ವ್ಯವಸ್ಥೆ, ಕೇಂದ್ರಗಳಲ್ಲಿ ಸುರಕ್ಷತೆಗೆ ಸೂಚನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿದ್ಧತೆ ಪ್ರಗತಿ ಪರಿಶೀಲನಾ ಸಭೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2021, 4:52 IST
Last Updated 10 ಜುಲೈ 2021, 4:52 IST
ಚಿಕ್ಕಮಗಳೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ರಮೇಶ್‌ ಮಾತನಾಡಿದರು.
ಚಿಕ್ಕಮಗಳೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ರಮೇಶ್‌ ಮಾತನಾಡಿದರು.   

ಚಿಕ್ಕಮಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷಾ ದಿನಗಳಂದು ಮಾರ್ಗದ ಎಲ್ಲ ಬಸ್‍ಗಳನ್ನು ಓಡಾಡಿಸಬೇಕು. ಸಾರಿಗೆ ವ್ಯವಸ್ಥೆಗೆ ಸಂಬಂಧಿಸಿದಂತೆ ಕ್ರಿಯಾ ಯೋಜನೆ ಸಿದ್ಧಪಡಿಸಿ ತುರ್ತಾಗಿ ಸಾರಿಗೆ ಘಟಕಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿದ್ಧತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಪರೀಕ್ಷಾರ್ಥಿಗಳು ಸಕಾಲದಲ್ಲಿ ಕೇಂದ್ರಗಳಿಗೆ ತಲುಪುವಂತೆ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ಕೈಗೊಳ್ಳಬೇಕು ಎಂದು ತಿಳಿಸಿದರು.

ಕೇಂದ್ರಗಳಲ್ಲಿ ಎಲ್ಲ ಮೂಲಸೌಲಭ್ಯ ಕಲ್ಪಿಸಿರುವ ಬಗ್ಗೆ ಪರಿಶೀಲಿಸಬೇಕು. ಪ್ರತಿ ಬ್ಲಾಕ್‌ಗೆ ಒಂದೊಂದು ಆಂಬುಲೆನ್ಸ್ ಮೀಸಲು ಇಡಬೇಕು. ಥರ್ಮಲ್ ಸ್ಕ್ಯಾನರ್, ಪಲ್ಸ್ ಆಕ್ಸಿಮೀಟರ್, ಮಾಸ್ಕ್, ಸ್ಯಾನಿಟೈಸರ್ ಎಲ್ಲ ವ್ಯವಸ್ಥೆ ಕಲ್ಪಿಸಬೇಕು ಎಂದರು.

ADVERTISEMENT

ಪರೀಕ್ಷಾರ್ಥಿಗಳಿಗೆ ಮುಂಚಿತವಾಗಿಯೇ ಕೇಂದ್ರದಲ್ಲಿನ ಅವರ ಕೊಠಡಿ ಮಾಹಿತಿ ತಿಳಿಸಬೇಕು. ಅಂತರ ಪಾಲನೆಗೆ ಕ್ರಮ ವಹಿಸಬೇಕು. ಸೋಂಕು ನಿವಾರಣ ದ್ರಾವಣ ಸಿಂಪಡಿಸಿ ಕೇಂದ್ರವನ್ನು ಶುಚಿಗೊಳಿಸಲು ಸ್ಥಳೀಯ ಸಂಸ್ಥೆಗಳಿಗೆ ಮನವಿ ಸಲ್ಲಿಸಬೇಕು. ಕೇಂದ್ರದ ಸಿಬ್ಬಂದಿ, ಅಗತ್ಯವಿರುವ ಮಕ್ಕಳಿಗೆ ಫೇಸ್‌ಶೀಲ್ಡ್‌ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರದ ಸಿಬ್ಬಂದಿಗಳಿಗೆ ವ್ಯಾಕ್ಷಿನೇಷನ್ ಆಗಿರುವ ಬಗ್ಗೆ ಮಾಹಿತಿ ಪಡೆದು, ಎಲ್ಲರಿಗೂ ಕನಿಷ್ಠ ಒಂದು ಡೋಸ್ ಆದರೂ ಪಡೆಯಲು ತುರ್ತು ಕ್ರಮವಹಿಸಬೇಕು. ಪರೀಕ್ಷಾ ಸಿಬ್ಬಂದಿ ಇದೇ 16ರಂದು ಕೋವಿಡ್‌ ತಪಾಸಣೆ ಮಾಡಿಸಿಕೊಳ್ಳಬೇಕು. ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ವ್ಯಾಟ್ಸಪ್‌ ಗ್ರೂಪ್‌ ರಚಿಸಿಕೊಂಡು ತುರ್ತು ಮಾಹಿತಿಗಳ ರವಾನೆಗೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಜಯಣ್ಣ ಮಾತನಾಡಿ, ಜಿಲ್ಲೆಯಲ್ಲಿ 86 ಪರೀಕ್ಷಾ ಕೇಂದ್ರಗಳಿವೆ, 14109 ಪರೀಕ್ಷಾರ್ಥಿಗಳು ಇದ್ದಾರೆ. 1,300 ಪರೀಕ್ಷಾ ಕೊಠಡಿಗಳು, 14,109 ಡೆಸ್ಕುಗಳನ್ನು ಸಜ್ಜುಗೊಳಿಸಲಾಗಿದೆ. ಪರೀಕ್ಷಾ ಕಾರ್ಯಕ್ಕೆ ಒಟ್ಟು 2,795 ಸಿಬ್ಬಂದಿ ಅಗತ್ಯ ಇದೆ. ಒಂದು ಡೆಸ್ಕ್‌ಗೆ ಒಬ್ಬರು, ಡೆಸ್ಕ್‌ನಿಂದ ಡೆಸ್ಕ್‌ 6 ಅಡಿ ಅಂತರ ಕಾಪಾಡಿ ಆಸನ ವ್ಯವಸ್ಥೆಗೆ ಕ್ರಮ ವಹಿಸಲಾಗಿದೆ ಎಂದು ವಿವರ ನೀಡಿದರು.

ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅಕ್ಷಯ್‌ ಎಂ.ಹಾಕೆ, ಡಿಡಿಪಿಐ ಬಿ.ವಿ.ಮಲ್ಲೇಶಪ್ಪ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ನಾಗರಾಜ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್‌.ಎನ್‌.ಉಮೇಶ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.