
ಬಾಳೆಹೊನ್ನೂರು: ವಿದ್ಯಾರ್ಥಿಗಳು ಕನ್ನಡಾಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡ ಉಳಿಸಿ ಬೆಳೆಸುವ ಮಹತ್ತರ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣೇಶ್ ತಿಳಿಸಿದರು.
ಮೇಲ್ಪಾಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿದ್ದ ಕನ್ನಡಾಧಿಪತಿ ಮಕ್ಕಳು ಎಂಬ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಾಲೆಗಳಲ್ಲಿ ಪಠ್ಯದ ಜತೆಗೆ ರಸಪ್ರಶ್ನೆ, ಸಾಮಾನ್ಯ ಜ್ಞಾನ ಹಾಗೂ ಕೌಶಲಾಭಿವೃದ್ಧಿಯಂಥ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ವಿದ್ಯಾರ್ಥಿಗಳು ಜ್ಞಾನವಂತರಾಗುತ್ತಾರೆ ಎಂದರು.
ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಾರ್ತಿಕ್ ಕಾರ್ಗದ್ದೆ ಮಾತನಾಡಿ, ನಾಡಗೀತೆಗೆ ನೂರು ವರ್ಷ ತುಂಬಿದ ಕಾರಣ ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಕನ್ನಡದ ಉಳಿವಿಗಾಗಿ ಸಾಹಿತ್ಯ ಪರಿಷತ್ತು ದತ್ತಿ ಉಪನ್ಯಾಸ, ಸಾಹಿತ್ಯ ಸಮ್ಮೇಳನದಂಥ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.
ಶಾಲೆಯ ಅಭಿವೃದ್ದಿಗೆ ವಿಶೇಷ ಕೊಡುಗೆ ನೀಡಿದ ಮುಖ್ಯಶಿಕ್ಷಕ ಎಚ್.ವಿ.ಸುರೇಶ್ ಅವರನ್ನು ಗೌರವಿಸಲಾಯಿತು. ರಸಪ್ರಶ್ನೆಯಲ್ಲಿ ವಿಜೇತರಾದ ಅನಿಶ್, ನಿಶಾಂತ್, ಆತ್ಮಿಕ, ಸುಜಯ್ ಅವರಿಗೆ ‘ಕನ್ನಡಾಧಿಪತಿ ಮಕ್ಕಳು’ ಎಂಬ ಬಿರುದಿನ ಜೊತೆಗೆ ಬಹುಮಾನ ವಿತರಿಸಲಾಯಿತು.
ನೌಕರರ ಸಂಘದ ಅಧ್ಯಕ್ಷ ರಾಘವೇಂದ್ರ, ಶಿಕ್ಷಕ ವಿಶ್ವನಾಥ್ ರಾಮಣ್ಣನವರ್, ರೇಖಾಗಣಿ, ವೆಂಕಟೇಶ್ ಮೂರ್ತಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಮಮತಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.