ರಂಭಾಪುರಿ ಪೀಠ (ಬಾಳೆಹೊನ್ನೂರು): ‘ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಗೌರವಾಧ್ಯಕ್ಷರನ್ನಾಗಿ ರಂಭಾಪುರಿ ಪೀಠದ ಎಡೆಯೂರು ಶಾಖಾ ಮಠದ ರೇಣುಕ ಶಿವಾಚಾರ್ಯ ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಗಿದೆ’ ಎಂದು ಎಸಳೂರು ತೆಂಕಲಗೋಡು ಬೃಹನ್ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಘೋಷಿಸಿದರು.
‘ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ಶಿವಾಚಾರ್ಯ ಸಂಸ್ಕೃತಿ ಪುನಶ್ಚೇತನ ಚಿಂತನಾ ಸಮಾವೇಶದಲ್ಲಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ನಿರ್ಣಯಿಸಿದಂತೆ ಸೋಮವಾರ ಇಲ್ಲಿನ ರಂಭಾಪುರಿ ವೀರಸೋಮೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಈ ಘೋಷಣೆ ಮಾಡಲಾಗಿದೆ. ಈ ಮೊದಲು 8 ವರುಷಗಳ ಕಾಲ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಅವರಿಗಿದ್ದು, ಶಿವಾಚಾರ್ಯ ಸಂಸ್ಥೆ ಇನ್ನಷ್ಟು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುವ ಹಾಗೂ ಶಿವಾಚಾರ್ಯ ಸಮೂಹದ ಸಂಘಟನೆ ಹಿನ್ನೆಲೆಯಲ್ಲಿ ಗೌರವಾಧ್ಯಕ್ಷ ಸ್ಥಾನ ಕಲ್ಪಿಸಿ ಕಾರ್ಯೋನ್ಮುಖರಾಗಲು ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಎಸಳೂರು ಸ್ವಾಮೀಜಿ ತಿಳಿಸಿದರು.
ರೇಣುಕ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಸಂಸ್ಥೆಯ ಆದರ್ಶ, ಧ್ಯೇಯ ಉಳಿಸಿ ಬೆಳೆಸಲು ಪ್ರಯತ್ನಿಸುವೆ. ರಂಭಾಪುರಿ ಸ್ವಾಮೀಜಿಯ ಮಾರ್ಗದರ್ಶನದಲ್ಲಿ ಸಂಸ್ಥೆಯನ್ನು ಇನ್ನಷ್ಟು ಬಲಗೊಳಿಸುವ ಹಾಗೂ ಸಂಘಟನಾ ಶಕ್ತಿಯನ್ನು ಬೆಳೆಸಲಾಗುವುದು. ನಾವೆಲ್ಲರೂ ಒಂದೇ ಬೇರಿನ ಹೂಗಳು. ಒಗ್ಗಟ್ಟಿನಿಂದ ಎಲ್ಲರೂ ಮುನ್ನಡೆದು ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ಶ್ರಮಿಸೋಣ’ ಎಂದರು.
30ಕ್ಕೂ ಹೆಚ್ಚು ಮಠಾಧೀಶರು ಈ ಸಮಾರಂಭಕ್ಕೆ ಸಾಕ್ಷಿಯಾದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.