ADVERTISEMENT

ರಾಜ್ಯ ಸರ್ಕಾರದ ಮಲತಾಯಿ ಧೋರಣೆ: ರಾಜೇಗೌಡ ಟೀಕೆ

ಕ್ಷೇತ್ರಕ್ಕೆ ಅನುದಾನ ಬಿಡುಗಡೆಯಾಗಿಲ್ಲ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2021, 2:15 IST
Last Updated 17 ನವೆಂಬರ್ 2021, 2:15 IST
ಟಿ.ಡಿ.ರಾಜೇಗೌಡ
ಟಿ.ಡಿ.ರಾಜೇಗೌಡ   

ಕೊಪ್ಪ: ‘ಶೃಂಗೇರಿ ಕ್ಷೇತ್ರದ ಮೂರು ತಾಲ್ಲೂಕುಗಳನ್ನು ಅತಿವೃಷ್ಟಿ ಬಾಧಿತ ತಾಲ್ಲೂಕುಗಳೆಂದು ಸರ್ಕಾರ ಘೊಷಿಸಿದ್ದರೂ, ಈವರೆಗೆ ಅನುದಾನ ಬಿಡುಗಡೆ ಮಾಡಿಲ್ಲ. ಬಿಜೆಪಿ ಸರ್ಕಾರ ಬಂದ ನಂತರ ಶೃಂಗೇರಿ ಕ್ಷೇತ್ರಕ್ಕೆ ಮಲತಾಯಿ ಧೋರಣೆ ತೋರಿದೆ’ ಎಂದು ಶಾಸಕ ಟಿ.ಡಿ.ರಾಜೇಗೌಡ ಆರೋಪಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ‘ಮಳೆಯಿಂದ ಎನ್.ಆರ್.ಪುರ ತಾಲ್ಲೂಕಿನಲ್ಲಿ ದೊಡ್ಡ ಮಟ್ಟದಲ್ಲಿ ಹಾನಿ ಸಂಭವಿಸಿತ್ತು, ಸೇತುವೆಗಳು ಕೊಚ್ಚಿ ಹೋಗಿವೆ. ಕ್ಷೇತ್ರದಲ್ಲಿ ಕೃಷಿ, ತೋಟಗಾರಿಕೆ ಬೆಳೆಗಳು ನಷ್ಟವಾಗಿದೆ. ಸಚಿವ ಆರಗ ಜ್ಞಾನೇಂದ್ರ ಅವರು ಭೇಟಿ ನೀಡಿ ಪರಿಶೀಲಿಸಿ, ಸರ್ಕಾರದ ಗಮನ ಸೆಳೆದಿದ್ದಾರೆ. ಈವರೆಗೂ ಹಣ ಅನುದಾನ ಬಿಡುಗಡೆಯಾಗಿಲ್ಲ’ ಎಂದರು.

‘ಮಾಗುಂಡಿ, ಖಾಂಡ್ಯದ ಕೆಲವು ಭಾಗ, ಬಸರೀಕಟ್ಟೆ ಭಾಗದಲ್ಲಿ ಹೆಚ್ಚು ಹಾನಿ ಸಂಭವಿಸಿದೆ. 4.9 ಸಾವಿರ ಹೆಕ್ಟೇರ್ ತೋಟದ ಪ್ರದೇಶ ಹಾನಿಯಿಂದ ಅಂದಾಜು ₹ 6.83 ಕೋಟಿ, 175 ಎಕರೆ ಕೃಷಿ ಭೂಮಿ ಹಾನಿಯಿಂದ ಅಂದಾಜು ಸುಮಾರು ₹ 3.50 ಕೋಟಿ ನಷ್ಟ ಸಂಭವಿಸಿದೆ. 12 ಮನೆಗಳು ಪೂರ್ಣ ಹಾನಿ, 31 ಮನೆಗಳು ತೀವ್ರ ಹಾನಿ, 87 ಮನೆಗಳು ಭಾಗಶ ಹಾನಿಯಾಗಿದೆ. ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ರಸ್ತೆ ₹ 17 ಕೋಟಿಯಷ್ಟು ಹಾನಿಯಾಗಿದೆ. ಪಿ.ಆರ್.ಇ.ಡಿ ಗೆ ಸೇರಿದ ರಸ್ತೆ ₹ 157 ಕೋಟಿಯಷ್ಟು ಹಾನಿ ಸಂಭವಿಸಿದೆ’ ಎಂದು ವಿವರಿಸಿದರು.

ADVERTISEMENT

‘ನರೇಗಾ ಯೋಜನೆ ಹೊರತುಪಡಿಸಿ ಯಾವುದೇ ಅನುದಾನ ಗ್ರಾಮ ಪಂಚಾಯಿತಿಗೆ ಬಿಡುಗಡೆ ಮಾಡಿಲ್ಲ. ಪಂಚಾಯಿತಿ ಬ್ಯಾಂಕ್ ಖಾತೆಗೆ ಸಂಬಂಧಿಸಿದ ಹಣಕ್ಕೆ ಸಿಗುವ ಬಡ್ಡಿ ಮೊತ್ತವನ್ನು ಸರ್ಕಾರ ಪಂಚಾಯಿತಿಯ ಬಳಕೆಗೆ ನೀಡದೆ ವಾಪಸ್ ಪಡೆದಿದ್ದು ನಾಚಿಕೆ ಗೇಡಿನ ಸಂಗತಿಯಾಗಿದೆ’ ಎಂದು ಟೀಕಿಸಿದರು.

‘ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಬೇಕಿರುವುದು ಸರ್ಕಾರದ ಜವಾಬ್ದಾರಿ. ಪ್ರಸ್ತುತ ಬಿಜೆಪಿ ಸರ್ಕಾರ ಆರೋಗ್ಯ ಕ್ಷೇತ್ರವನ್ನು ಕಡೆಗಣಿಸಿದೆ. ಪ್ರತಿ ತಿಂಗಳು ಅತ್ಯಗತ್ಯ ಔಷಧಿ ಖರೀದಿಗೆ ನೀಡಬೇಕಿದ್ದ ಮೊತ್ತವನ್ನು ಸರ್ಕಾರ ನೀಡುತ್ತಿಲ್ಲ’ ಎಂದರು.

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನುಗ್ಗಿ ಮಂಜುನಾಥ್, ಮುಖಂಡರಾದ ಬರ್ಕತ್ ಆಲಿ, ಸಂದೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.