
ಮೂಡಿಗೆರೆ: ಬಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಾರತೀಬೈಲ್ ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ ಅಳವಡಿಸಿದ್ದ ಕ್ಯಾಮೆರಾದಲ್ಲಿ ಹುಲಿಯ ಚಲನವಲನ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಅರಣ್ಯ ಇಲಾಖೆಯ ಮೂಡಿಗೆರೆ ಉಪವಿಭಾಗದ ಮೂಡಿಗೆರೆ ವಲಯದ ಭಾರತೀಬೈಲು ಶಾಖೆ ವ್ಯಾಪ್ತಿಯ ಬಿ. ಹೊಸಹಳ್ಳಿ ಗ್ರಾಮದ ಸರ್ವೆ ನಂ. 212ರಲ್ಲಿ ಕಾಡು ಪ್ರಾಣಿಯ ದಾಳಿಯಿಂದ ಹಸು ಮೃತಪಟ್ಟಿತ್ತು. ಘಟನೆ ನಡೆದ ಹಿನ್ನೆಲೆ ಇಲಾಖೆ ಸ್ಥಳ ಪರಿಶೀಲನೆ ನಡೆಸಿದ್ದು, ಭಾರತೀಬೈಲ್ ಸಮೀಪದ ಅರಣ್ಯ ಪ್ರದೇಶದಲ್ಲಿ ಕ್ಯಾಮೆರಾ ಅಳವಡಿಸಿತ್ತು.
ಟ್ರ್ಯಾಪ್ ಕ್ಯಾಮೆರಾದಲ್ಲಿ ಹುಲಿಯ ಚಲನವಲನ ಸೆರೆಯಾಗಿದ್ದು, ಈ ದೃಶ್ಯಗಳು ಬಹಿರಂಗವಾದ ಬಳಿಕ ಗ್ರಾಮಸ್ಥರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ. ಹಸುಗಳ ಮೇಲೆ ನಿರಂತರ ದಾಳಿ ನಡೆಯುತ್ತಿರುವುದರಿಂದ ಗ್ರಾಮಸ್ಥರು ಭಯದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಹುಲಿಯ ಜೊತೆಗೆ ಇತರೆ ಕಾಡುಪ್ರಾಣಿಗಳ ಸಂಚಲನ ಕೂಡ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಹಿನ್ನೆಲೆ ಹುಲಿಯನ್ನು ಕೂಡಲೇ ಸೆರೆ ಹಿಡಿದು ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಬೇಕು ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಹುಲಿ ಕಾಣಿಸಿಕೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಭಾರತೀಬೈಲ್, ಬಿ. ಹೊಸಹಳ್ಳಿ, ಹೊಕ್ಕಳ್ಳಿ, ಪಾಂಡವರತಟ್ಟ, ದೊಡ್ಡಳ್ಳ, ಹೆಬ್ಬಾಳಗದ್ದೆ, ತಳವಾರ ಮುಂತಾದ ಪ್ರದೇಶಗಳಲ್ಲಿ ತೋಟಗಳಿಗೆ ತೆರಳಲು ಕಾರ್ಮಿಕರು ಭಯಗೊಂಡಿದ್ದು ಕೃಷಿ ಚಟುವಟಿಕೆಗಳು ಸ್ತಬ್ಧಗೊಂಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.