ADVERTISEMENT

ಸರ್ಕಾರಕ್ಕೆ ಮೇ 2ರವರೆಗೆ ಕಾಲಾವಕಾಶ ನೀಡಬೇಕು: ಸಿ.ಟಿ. ರವಿ ಮನವಿ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2021, 11:13 IST
Last Updated 8 ಏಪ್ರಿಲ್ 2021, 11:13 IST
   

ಚಿಕ್ಕಮಗಳೂರು: ‘ಕೆಎಸ್‌ಆರ್‌ಟಿಸಿ ನೌಕರರು ಬೇಡಿಕೆ ಈಡೇರಿಕೆಗೆ ಮೇ 2ರವರೆಗೆ ಸರ್ಕಾರಕ್ಕೆ ಕಾಲಾವಕಾಶ ನೀಡಬೇಕು. ಆಗಲೂ ಈಡೇರದಿದ್ದರೆ ನೌಕರರ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡುತ್ತೇವೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶಾಸಕ ಸಿ.ಟಿ.ರವಿ ತಿಳಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಷ್ಕರದಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಸರ್ಕಾರವು ಪರ್ಯಾಯವಾಗಿ ಖಾಸಗಿ ಬಸ್‌ಗಳನ್ನು ವ್ಯವಸ್ಥೆ ಮಾಡಿದ್ದರೂ ಮಾಮೂಲಿಯಂತೆ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ನೌಕರರು ಯಾರ ರಾಜಕೀಯ ದಾಳವೂ ಆಗಬಾರದು. ಹಠಮಾರಿ ಧೋರಣೆ ತಳೆಯಬಾರದು’ ಎಂದು ಮನವಿ ಮಾಡಿದರು.

‘ಸಿದ್ದರಾಮಯ್ಯ ಅವರಿಗೆ ಆಡಳಿತ ಎಂದರೆ ಜಾತಿಗಳನ್ನು ಒಡೆಯುವುದು. ವೀರಶೈವ ಮತ್ತು ಲಿಂಗಾಯತ ಸಮುದಾಯಗಳನ್ನು ಒಡೆಯುವ ಕೆಲಸ ಮಾಡಿದ್ದು ಅವರ ಆಡಳಿತ ಅವಧಿಯಲ್ಲೇ. ರುದ್ರೇಶ್‌, ರಾಜು, ಪ್ರಶಾಂತ್‌ಪೂಜಾರಿ ಸಹಿತ 46 ಜನರ ಕೊಲೆಗಳು ನಡೆದದ್ದು ಅವರ ಅವಧಿಯಲ್ಲೇ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

‘ವಿದ್ಯಮಾನಗಳನ್ನು ಹೈಕಮಾಂಡ್‌ ಗಮನಿಸುತ್ತಿದೆ’
‘ಸಚಿವ ಕೆ.ಎಸ್‌.ಈಶ್ವರಪ್ಪ ಅವರು ರಾಜ್ಯಪಾಲರಿಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಹಳಷ್ಟು ಚರ್ಚೆಗಳು ನಡೆದಿವೆ. ವಿಚಾರ ಗಮನಕ್ಕೆ ತರುವ ಕೆಲಸ ಮಾಡಿದ್ದೇನೆ, ಯಡಿಯೂರಪ್ಪ ನಮ್ಮ ನಾಯಕ ಎಂದು ಈಶ್ವರಪ್ಪ ಅವರೇ ಸ್ಪಷ್ಟಪಡಿಸಿದ್ದಾರೆ’ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಪ್ರತಿಕ್ರಿಯಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷಕ್ಕೆ ಮುಜುಗರ ಉಂಟುಮಾಡುವ ಕೆಲ ವಿದ್ಯಮಾನಗಳು ಈಚೆಗೆ ನಡೆದಿವೆ. ಎಲ್ಲವನ್ನು ವರಿಷ್ಠರು ಗಮನಿಸುತ್ತಿದ್ದು, ಸಂದರ್ಭ ಬಂದಾಗ ತಕ್ಕ ನಿರ್ಧಾರಗಳನ್ನು ಕೈಗೊಳ್ಳುತ್ತಾರೆ’ ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.