ಮೂಡಿಗೆರೆ: ಮಂಗಳೂರು ಬಜಪೆ ಸಮೀಪ ಹಿಂದುತ್ವವಾದಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ವಿವಿಧ ಚೆಕ್ಪೋಸ್ಟ್ಗಳಲ್ಲಿ ಪೊಲೀಸರು ವಾಹನ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ.
ತಾಲ್ಲೂಕಿನಿಂದ ಕರಾವಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯಾದ ವಿಲ್ಲುಪುರಂ – ಮಂಗಳೂರು ಹೆದ್ದಾರಿಯಲ್ಲಿ ಕೊಟ್ಟಿಗೆಹಾರ ಚೆಕ್ಪೋಸ್ಟ್ನಲ್ಲಿ ತಪಾಸಣೆ ಚುರುಕುಗೊಳಿಸಲಾಗಿದ್ದು, ಕರಾವಳಿ ಭಾಗದಿಂದ ಜಿಲ್ಲೆಯನ್ನು ಪ್ರವೇಶಿಸುವ ವಾಹನಗಳ ತಪಾಸಣೆ ಹಾಗೂ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಇದೇ ಹೆದ್ದಾರಿಯ ಮುತ್ತಿಗೆಪುರದ ಬಳಿಯೂ ವಾಹನ ತಪಾಸಣೆ ಮಾಡಲಾಗುತ್ತಿದೆ. ಹೆದ್ದಾರಿಯಲ್ಲಿ ಪೊಲೀಸ್ ಗಸ್ತು ವಾಹನಗಳು ತಿರುಗುತ್ತಿದ್ದು, ಘಾಟಿ ಪ್ರದೇಶದಲ್ಲೂ ವಾಹನಗಳ ಮೇಲೆ ನಿಗಾ ಇರಿಸಲಾಗಿದೆ. ತಾಲ್ಲೂಕಿನ ಕನ್ನಾಪುರ ಗ್ರಾಮದ ಬಳಿಯೂ ವಾಹನ ತಪಾಸಣೆ ಮಾಡಲಾಗುತ್ತಿದ್ದು, ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ನಿಗಾವಹಿಸಿದೆ.
‘ನಮ್ಮ ಗಡಿಭಾಗವು ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಮಾದರಿ ಆಗಬೇಕು. ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು ಜಿಲ್ಲೆಗೆ ಪ್ರವೇಶಿಸದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದ್ದು, ಮೇಲಧಿಕಾರಿಗಳ ನಿರ್ದೇಶನದಂತೆ ವಾಹನಗಳ ತಪಾಸಣೆ ಮಾಡಲಾಗುತ್ತಿದೆ’ ಎಂದು ಬಣಕಲ್ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರೇಣುಕಾ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.