ವಿನಯ್ ಹಳೆಕೋಟೆ
ಮೂಡಿಗೆರೆ: ‘ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ರೂಪಿಸಬೇಕು’ ಎಂದು ಬಿಜೆಪಿ ತಾಲ್ಲೂಕು ಘಟಕದ ವಕ್ತಾರ ವಿನಯ್ ಹಳೆಕೋಟೆ ಒತ್ತಾಯಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ರೈತರು ಬೆಳೆದ ಬೆಳೆಯನ್ನು ನಾಶ ಪಡಿಸುತ್ತಿವೆ. ರಾತ್ರಿ ವೇಳೆ ಜನರು ತಿರುಗಾಡದ ಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಕೂಡಲೇ ಕ್ರಮ ವಹಿಸಬೇಕು’ ಎಂದರು.
ತಾಲ್ಲೂಕಿನ ಜಿ.ಹೊಸಳ್ಳಿ, ಹೊಸಪುರ, ಕಸ್ಕೇಬೈಲ್ ವ್ಯಾಪ್ತಿಯಲ್ಲಿ 40ಕ್ಕೂ ಅಧಿಕ ಹಾಗಾ ಕುಂದೂರು ಭಾಗದಲ್ಲಿ 20ಕ್ಕೂ ಅಧಿಕ ಕಾಡಾನೆಗಳು ಸಂಚರಿಸುತ್ತಿವೆ. ಗುರುವಾರ ಎರಡು ಕಾಡಾನೆಗಳು ದುಂಡುಗ ಬಳಿ ಭತ್ತದ ಗದ್ದೆ ನಾಶಪಡಿಸಿ, ಟಿಲ್ಲರನ್ನು ಧ್ವಂಸಗೊಳಿಸಿವೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕುತ್ತಿದ್ದು, ತೋಟದ ಕೆಲಸಕ್ಕೆ ತೆರಳುವ ಕಾರ್ಮಿಕರು ಜೀವ ಭಯದಲ್ಲಿ ಕೆಲಸ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ಈಗಾಗಲೇ ಕಾಡಾನೆಗಳ ಹಾವಳಿಯಿಂದ 2 ಸಾವಿರಕ್ಕೂ ಅಧಿಕ ಎಕರೆ ಕೃಷಿಭೂಮಿ ಪಾಳು ಬಿಡಲಾಗಿದೆ. ಸರ್ಕಾರದ ಆದೇಶ ಮೀರಿ ಅರಣ್ಯ ಇಲಾಖೆ ಯಾವುದೇ ಕ್ರಮ ವಹಿಸಲು ಸಾಧ್ಯವಿಲ್ಲ. ಹಾಗಾಗಿ ಜನರು ಯಾವ ಸಮಯದಲ್ಲಾದರೂ ಪ್ರಾಣ ಕಳೆದುಕೊಳ್ಳುವ ಸ್ಥಿತಿ ಎದುರಾಗಿದೆ. ಇಂತಹ ಗಂಭೀರ ವಿಚಾರವನ್ನು ಶಾಸಕರು ಸರ್ಕಾರದ ಗಮನ ಸೆಳೆದು ಕಾಡಾನೆಗಳಿಂದ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.