ಪಾವಗಡ: ಚುನಾವಣೆಯಲ್ಲಿ ಅಕ್ರಮ ನಡೆಯದಂತೆ ಕಾರ್ಯಕರ್ತರು ಎಚ್ಚರವಹಿಸಬೇಕು ಎಂದು ಶಾಸಕ ಕೆ.ಎಂ.ತಿಮ್ಮರಾಯಪ್ಪ ತಿಳಿಸಿದರು. ಪಟ್ಟಣದಲ್ಲಿ ಸೋಮವಾರ ನಡೆದ ಯುವ ಜನತಾದಳದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಚುನಾವಣೆ ವ್ಯವಸ್ಥೆಗೆ ಧಕ್ಕೆಯಾಗದಂತೆ ಪಕ್ಷದ ಕಾರ್ಯಕರ್ತರು ಎಚ್ಚರವಹಿಸಬೇಕು. ಮತದಾನದ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಿ, ವಿರೋಧಿಗಳ ಅವ್ಯವಹಾರಗಳಿಗೆ ಕಡಿವಾಣ ಹಾಕಿ ಎಂದು ತಿಳಿಸಿದರು.
ತಮಿಳುನಾಡು, ಕೇರಳ ಸೇರಿದಂತೆ ದೇಶದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಭವಿಷ್ಯವಿದೆ. ರಾಜ್ಯದಲ್ಲಿಯೂ ಜೆಡಿಎಸ್ ಪಕ್ಷದ ಬಗ್ಗೆ ಜನರು ಒಲವು ತೋರಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜನಪರ, ರೈತಪರ ಆಡಳಿತವನ್ನು ನಾಡಿನ ಜನರು ಮರೆಯುವುದಿಲ್ಲ ಎಂದರು.
ಆಡಳಿತಾವಧಿಯಲ್ಲಿ ತಾಲ್ಲೂಕಿನ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ತಾಲ್ಲೂಕಿನ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದರು.
ತುಮುಲ್ ನಿರ್ದೇಶಕ ಕೆ.ಆರ್.ಸುರೇಶ್ ಮಾತನಾಡಿ, ನಿಷ್ಠಾವಂತ ಕಾರ್ಯಕರ್ತರ ಪಡೆ ಪಕ್ಷದ ಶಕ್ತಿ ಹೆಚ್ಚಿಸಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ನಡುಕ ಆರಂಭವಾಗಿದೆ. ಕೆ.ಎಂ. ತಿಮ್ಮರಾಯಪ್ಪ ಅವರು ಉಪ ಮುಖ್ಯಮಂತ್ರಿ ಆಗುವ ಅವಕಾಶ ಇದೆ ಎಂದರು.
ಮುಖಂಡ ಆರ್.ಸಿ. ಅಂಜಿನಪ್ಪ, ಚಂದ್ರಶೇಖರ್, ಅಂಬಿಕಾ, ಪುರಸಭೆ ಸದಸ್ಯ ಜಿ.ಎ. ವೆಂಕಟೇಶ್, ಎನ್. ಈರಣ್ಣ, ಅಕ್ಕಲಪ್ಪ ಮಾತನಾಡಿದರು. ಯುವ ಘಟಕದ ಅಧ್ಯಕ್ಷ ಮಂಜುನಾಥ ಚೌಧರಿ, ತಾಲ್ಲೂಕು ಘಟಕದ ಅಧ್ಯಕ್ಷ ಬಲರಾಮರೆಡ್ಡಿ, ಗೋವಿಂದ ಬಾಬು, ತಿಮ್ಮಾರೆಡ್ಡಿ, ಪುರಸಭೆ ಸದಸ್ಯ ವಸಂತ್, ಗೋಪಾಲ್, ಮನು, ವಾಣಿ ಮಣಿ, ಕೋಟಗುಡ್ಡ ಅಂಜಪ್ಪ, ಚಿಂತಲರೆಡ್ಡಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.