ADVERTISEMENT

ಅಕ್ರಮ ಮರಳುಗಾರಿಕೆ; ಕಡಿವಾಣ ಹಾಕಲು ತೀರ್ಮಾನ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2011, 6:10 IST
Last Updated 19 ಫೆಬ್ರುವರಿ 2011, 6:10 IST

ಹಿರಿಯೂರು: ಜವಗೊಂಡನಹಳ್ಳಿ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಣಿಕೆಗೆ ಕಡಿವಾಣ ಹಾಕಬೇಕು ಎಂದು ತಾಲ್ಲೂಕಿನ  ಜವನಗೊಂಡನಹಳ್ಳಿ ಗ್ರಾಮ ಪಂಚಾಯ್ತಿ ವತಿಯಿಂದ ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ತಯಾರಿಕೆ ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನ ಕುರಿತಂತೆ ಶುಕ್ರವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.

ಅಧ್ಯಕ್ಷತೆ ವಹಿಸಿದ್ದ ಪಂಚಾಯ್ತಿ ಅಧ್ಯಕ್ಷ ಖಾಲಿದ್ ಹುಸೇನ್ ಮಾತನಾಡಿ, ಮರಳು ಸಾಗಣಿಕೆ ತಡೆಯದಿದ್ದರೆ, ಅಂತರ್ಜಲ ಸಂಪೂರ್ಣ ಕಾಣೆಯಾಗುತ್ತದೆ. ಇಲ್ಲಿನಮರಳನ್ನು ಅಕ್ರಮವಾಗಿ ಬೆಂಗಳೂರಿಗೆ ಸಾಗಿಸಲಾಗುತ್ತಿದೆ. ಬೆರಳೆಣಿಕೆಯಷ್ಟು ಜನರು ಲಾಭ ಮಾಡಿಕೊಳ್ಳಲು ಇಡೀ ಮರಳನ್ನು ದೋಚುತ್ತಾ, ಪರಿಸರವನ್ನು ಹಾಳುಮಾಡುತ್ತಿದ್ದಾರೆ. ಕಂದಾಯ ಇಲಾಖೆ ಅಧಿಕಾರಿಗಳ ನೆರವು ಪಡೆದು, ಮರಳು ದಂಧೆಗೆ ಕಡಿವಾಣ ಹಾಕಬೇಕು. ಇದಕ್ಕೆ ಎಲ್ಲಾ ಜನಪ್ರತಿನಿಧಿಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಜನರಿಗೆ ಅನುಕೂಲ ಹಾಗೂ ಅಗತ್ಯ ಇರುವ ಕಾಮಗಾರಿಗಳನ್ನು ಸೇರಿಸಿಕೊಳ್ಳಬೇಕು. ಗುಣಮಟ್ಟದ ಕಾಮಗಾರಿ ನಡೆಸಬೇಕು. ಶಿಕ್ಷಣ ಹಾಗೂ ಆರೋಗ್ಯ ಕಾರ್ಯಕ್ರಮಗಳಿಗೂ ಹೆಚ್ಚಿನ ಒತ್ತು ನೀಡಬೇಕು ಎಂದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳಿಗೆ ಅವರು ಸಲಹೆ ನೀಡಿದರು.ಜಿ.ಪಂ. ಸದಸ್ಯೆ ಕರಿಯಮ್ಮ, ಗ್ರಾ.ಪಂ. ಉಪಾಧ್ಯಕ್ಷೆ ರತ್ನಮ್ಮ ಹಾಗೂ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.