ADVERTISEMENT

ಅವ್ಯವಸ್ಥೆ ಖಂಡಿಸಿ ಹೆದ್ದಾರಿತಡೆ

ಕಾರು ಡಿಕ್ಕಿ: ಸುಗಮ ಸಂಚಾರಕ್ಕೆ ಆಗ್ರಹಿಸಿ ಸ್ಥಳೀಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2012, 6:24 IST
Last Updated 24 ಡಿಸೆಂಬರ್ 2012, 6:24 IST

ಭರಮಸಾಗರ:  ಇನ್ನೋವಾ ಮತ್ತು ಇಂಡಿಕಾ ಕಾರು ಅಪಘಾತಕ್ಕೀಡಾಗಿ ಇಂಡಿಕಾ ಕಾರಿನ ಪ್ರಯಾಣಿಕರು ಗಾಯಗೊಂಡ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಸಾರ್ವಜನಿಕರು ರಸ್ತೆ ಅವ್ಯವಸ್ಥೆ ಖಂಡಿಸಿ ಹಂಪನೂರು ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಭಾನುವಾರ ಸಂಜೆ ಪ್ರತಿಭಟನೆ ನಡೆಸಿದರು.

ಈ ಸ್ಥಳದಲ್ಲಿ ಹಿಂದೆ ಅನೇಕ ಬಾರಿ ಅಪಘಾತಗಳು ಸಂಭವಿಸಿ ಪ್ರಾಣಹಾನಿ ಪ್ರಕರಣಗಳು ಜರುಗಿವೆ. ಸುಗಮ ಸಂಚಾರಕ್ಕೆ ಸೇವಾ ರಸ್ತೆ, ಕೆಳಸೇತುವೆ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆಗಳನ್ನು ಕೂಡ ನಡೆಸಲಾಗಿದೆ. ಆದರೂ ಏನೂ ಪ್ರಯೋಜನವಾಗಿಲ್ಲ ಎಂದು ದೂರಿದರು.

ಈಚೆಗೆ ಜಿಲ್ಲಾಧಿಕಾರಿ, ಶಾಸಕರು, ಹೆದ್ದಾರಿ ಪ್ರಾಧಿಕಾರ ಮತ್ತು ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತಕ್ಷಣ ರಸ್ತೆ ಅವ್ಯವಸ್ಥೆ ಸರಿಪಡಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಇದುವರೆಗೆ ಕಾಮಗಾರಿ ಆರಂಭಗೊಂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಸುಮಾರು ಒಂದು ಗಂಟೆಕಾಲ ನಡೆದ ಹೆದ್ದಾರಿ ತಡೆಯಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು. ಡಿವೈಎಸ್‌ಪಿ ಗಂಗಯ್ಯ, ಎಸ್‌ಐ ಚೇತನ್ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಜತೆ ಮಾತನಾಡಿ, ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.