ADVERTISEMENT

ಉಚ್ಚಾಟನೆ ಆದೇಶ ಹಿಂಪಡೆಯಲು ಹೈಕಮಾಂಡ್ ಮನವೊಲಿಕೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2017, 8:50 IST
Last Updated 1 ಡಿಸೆಂಬರ್ 2017, 8:50 IST

ಚಿತ್ರದುರ್ಗ: ‘ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿರುವ ಆದೇಶವನ್ನು ಪಕ್ಷ ವಾಪಸು ಪಡೆಯುತ್ತದೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಿಸಲು ನನಗೇ ಟಿಕೆಟ್ ನೀಡುತ್ತದೆ’ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಉಚ್ಛಾಟನೆ ಮಾಡಿರುವ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯಾವುದೋ ಒತ್ತಡಗಳಿಂದಾಗಿ ನನ್ನನ್ನು ಪಕ್ಷದಿಂದ ಉಚ್ಚಾಟಿಸಿರಬಹುದು. ಆದರೆ, ಅದನ್ನು ವಾಪಸ್ ತೆಗೆದುಕೊಳ್ಳಬಾರದು ಎಂದೇನೂ ಇಲ್ಲವಲ್ಲ.

ನಾನು ಹೈಕಮಾಂಡ್ ಮನವೊಲಿಸುತ್ತೇನೆ. ಆದೇಶ ವಾಪಸ್ ಪಡೆಯುವಂತೆ ಮನವಿ ಮಾಡುತ್ತೇನೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಪ್ರಬಲ ಅಭ್ಯರ್ಥಿ ಎಂಬುದನ್ನು ವರಿಷ್ಠರಿಗೆ ಮನವರಿಕೆ ಮಾಡಿಕೊಡುತ್ತೇನೆ. ಇಲ್ಲಿಂದಲೇ →ಚುನಾವಣೆಗೆ →ಸ್ಪರ್ಧಿಸಲು ಟಿಕೆಟ್ ಕೇಳುತ್ತೇನೆ. ಪಕ್ಷ ನನಗೇ ಟಿಕೆಟ್ ಕೊಡುತ್ತದೆ’ ಎಂದು ವಿಶ್ವಾಸದ ಮಾತನಾಡಿದರು.

ADVERTISEMENT

‘ಚಿತ್ರದುರ್ಗ ಕ್ಷೇತ್ರವನ್ನು ಪಕ್ಷಕ್ಕೆ ಉಳಿಸಿಕೊಡಬೇಕು ಎಂಬುದು ನನ್ನ ಉದ್ದೇಶ. ಅಧಿಕಾರವಿದ್ದರೆ ಚುನಾವಣೆ ಎದುರಿಸುವುದಕ್ಕೆ ಸಹಾಯವಾಗುತ್ತದೆ. ಆ ಉದ್ದೇಶದಿಂದಲೇ ಚುನಾವಣೆವರೆಗೂ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಅವಕಾಶ ಕೊಡಿ ಎಂದು ಎಲ್ಲರಲ್ಲೂ ಮನವಿ ಮಾಡಿದ್ದೆ‌. ಈಗಲೂ ಅದನ್ನೇ ಕೇಳುತ್ತಿದ್ದೇನೆ.

ನಮ್ಮ ಮನೆಯಲ್ಲಿ ನನಗೆ ಅಥವಾ ನನ್ನ ಪತಿ ಬಸವರಾಜನ್ ಅವರಿಗೆ ಪಕ್ಷ ಟಿಕೆಟ್ ನೀಡಿದರೆ, ಚುನಾವಣೆ ನಂತರ ಅಧ್ಯಕ್ಷ ಸ್ಥಾನ ಬಿಟ್ಟುಕೊಡುತ್ತೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.