ADVERTISEMENT

ಕಟ್ಟಡ ತೆರವು: ರಸ್ತೆ ಅಭಿವೃದ್ಧಿ ಕಾರ್ಯ ಆರಂಭ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2011, 10:05 IST
Last Updated 13 ಸೆಪ್ಟೆಂಬರ್ 2011, 10:05 IST
ಕಟ್ಟಡ ತೆರವು: ರಸ್ತೆ ಅಭಿವೃದ್ಧಿ ಕಾರ್ಯ ಆರಂಭ
ಕಟ್ಟಡ ತೆರವು: ರಸ್ತೆ ಅಭಿವೃದ್ಧಿ ಕಾರ್ಯ ಆರಂಭ   

ಭರಮಸಾಗರ: ಇಲ್ಲಿನ ಬಿಳಿಚೋಡು ರಸ್ತೆ ವಿಸ್ತರಣೆಗೆ ಅಡ್ಡಿಯಾಗಿದ್ದ ಕಟ್ಟಡಗಳನ್ನು ಲೋಕೋಪಯೋಗಿ ಅಧಿಕಾರಿಗಳು ಸೋಮವಾರ ತೆರವುಗೊಳಿಸಿದರು. ಈ ಮೂಲಕ ಅನೇಕ ತಿಂಗಳುಗಳಿಂದ ಸ್ಥಗಿತಗೊಂಡಿದ್ದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಪುನಃ ಚಾಲನೆ ದೊರಕಿದೆ. ಇದು ಗ್ರಾಮದ ಪ್ರಮುಖ ವಾಣಿಜ್ಯ ರಸ್ತೆಯಾಗಿದ್ದು ಸದಾ ಜನದಟ್ಟಣೆಯಿಂದ ಕೂಡಿರುತ್ತದೆ.

ಹೀಗಾಗಿ ಮೊದಲಿದ್ದ ಕಿರಿದಾದ ರಸ್ತೆಯಲ್ಲಿ ವಾಹನಗಳ ಸಂಚಾರದಿಂದ ಪಾದಚಾರಿಗಳಿಗೆ ಮತ್ತು ಹೊಗೆ, ದೂಳು ರಸ್ತೆ ಪಕ್ಕದ ಅಂಗಡಿಗಳೊಳಗೆ ನುಗ್ಗಿ ವರ್ತಕರಿಗೆ ತೊಂದರೆಯಾಗುತ್ತಿತ್ತು. ಇದನ್ನೆಲ್ಲಾ ಗ್ರಾಮಸ್ಥರು ಸಂಬಂಧಪಟ್ಟ ಜನಪ್ರತಿನಿಧಿ, ಅಧಿಕಾರಿಗಳ ಗಮನಕ್ಕೆ ತಂದ ನಂತರ ಲೋಕೋಪಯೋಗಿ ಇಲಾಖೆ ರಸ್ತೆ ವಿಸ್ತರಣೆಗೆ ಹಸಿರು ನಿಶಾನೆ ತೋರಿ ಟೆಂಡರ್ ಪ್ರಕ್ರಿಯೆ ಮೂಲಕ ಸುಮಾರು  50 ಲಕ್ಷ  ಅಂದಾಜು ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಮಾ. 2011ರಂದು ಆರಂಭಿಸಿತ್ತು.

ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮನೆ ಕಳೆದುಕೊಂಡವರಿಗೆ ಆಶ್ರಯ ಯೋಜನೆಯಡಿ ನಿವೇಶನಗಳ ನೀಡಲಾಗಿದೆ. ಆದರೆ, ಈ ಒಪ್ಪಂದ ನಿರಾಕರಿಸಿದ ಜನಾರ್ದನ್‌ಶ್ರೇಷ್ಠಿ ಎಂಬುವರು ರಸ್ತೆ ವಿಸ್ತರಣೆಯಿಂದ ತಮ್ಮ ಮನೆಗೆ ತೊಂದರೆಯಾಗುತ್ತದೆ ಎಂದು ಇಲಾಖೆ ಕ್ರಮ ವಿರೋಧಿಸಿ ಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದ ಕಾರಣ ಕಾಮಗಾರಿ ಸ್ಥಗಿತಗೊಳಿಸಿಲಾಗಿತ್ತು.

ಸೋಮವಾರ ಬೆಳಿಗ್ಗೆ ಸ್ಥಳೀಯ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸರೊಂದಿಗೆ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ರಸ್ತೆ ವಿಸ್ತರಣೆಗೆ ಅಡ್ಡಿಯಾಗಿದ್ದ ಕಟ್ಟಡಗಳನ್ನು ತೆರವುಗೊಳಿಸುವ ಕೆಲಸ ಆರಂಭಿಸಿದರು.

ರಸ್ತೆ ವಿಸ್ತರಣೆಗೆ ಸಂಬಂಧಿಸಿದಂತೆ ಇಲ್ಲಿನ ನಿವಾಸಿಯೊಬ್ಬರು ಕೋರ್ಟಿನಲ್ಲಿ ಸಲ್ಲಿಸಿದ್ದ ಕೇಸು ಖುಲಾಸೆಯಾಗಿದ್ದು, ಕೋರ್ಟಿನ ಆದೇಶದಂತೆ ನಿಯಮಾನುಸಾರ ಇಲಾಖೆಗೆ ಸೇರಿದ ಸ್ಥಳದಲ್ಲಿರುವ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದ್ದೆ.

ಕಿರಿದಾಗಿದ್ದ ಬಿಳಿಚೋಡು ರಸ್ತೆಯನ್ನು 11 ಮೀ ಅಗಲ, 390 ಮೀ ಉದ್ದದ ಡಾಂಬರು ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಜನವರಿಯೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಇಲಾಖೆಯ ಎಇಇ ರಾಜಕುಮಾರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.