ADVERTISEMENT

ಕನಕದಾಸರ ಆದರ್ಶ ಅಳವಡಿಸಿಕೊಳ್ಳಲು ಕರೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2011, 10:05 IST
Last Updated 17 ಜನವರಿ 2011, 10:05 IST

ಚಳ್ಳಕೆರೆ: ಕನಕದಾಸರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದ ತತ್ವಾದರ್ಶಗಳನ್ನು ಇಂದಿನ ಯುವಪೀಳಿಗೆ ಮೈಗೂಡಿಸಿಕೊಳ್ಳುವ  ಮೂಲಕ ದಾಸರ ಹೆಸರನ್ನು ಉಳಿಸಬೇಕಿದೆ ಎಂದು ಜಾಜೂರು ಜಿಲ್ಲಾ ಪಂಚಾಯ್ತಿ ನೂತನ ಸದಸ್ಯ ಜೆ.ಪಿ. ಜಯಪಾಲಯ್ಯ ಅಭಿಪ್ರಾಯಪಟ್ಟರು.

ಚಳ್ಳಕೆರೆ ತಾಲ್ಲೂಕು ಪರಶುರಾಂಪುರ ಹೋಬಳಿ ಪಗಡಲಬಂಡೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕನಕದಾಸರ ಜಯಂತಿ ಆಚರಣೆಯ ಮೆರವಣಿಗೆ ಉದ್ಘಾಟಿಸಿ ಅವರು ಮಾತನಾಡಿದರು.

ದಾಸರು ಜೀವಿತ ಅವಧಿಯಲ್ಲಿ ನೊಂದವರ ಮತ್ತು ಕೆಳಸಮುದಾಯಗಳ ಪರವಾಗಿ ತಮ್ಮ ಚಿಂತನೆಗಳನ್ನು ಹರಿಯಬಿಡುವ ಮೂಲಕ ಇಡೀ ಸಮಾಜಕ್ಕೆ ಸಾಮಾಜಿಕ ಅರಿವನ್ನು ಮೂಡಿಸುವ ಕಾರ್ಯ ಮಾಡಿದ್ದಾರೆ. ಪ್ರತಿಯೊಬ್ಬರೂ ಕನಕದಾಸರ ಜೀವನ ಚರಿತ್ರೆಯನ್ನು ಅಧ್ಯಯನ ಮಾಡಬೇಕಾಗಿದೆ. ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಕನಕದಾಸರ  ಪರಿಚಯದ ದರ್ಶನ ಮಾಡಿಸಬೇಕು ಎಂದು ನುಡಿದರು.

ಇಡೀ ನಾಡಿಗೆ ಕೀರ್ತನೆಗಳ ಮೂಲಕ ಪ್ರಸಿದ್ಧಿಯಾಗಿರುವ ಕನಕದಾಸರು ಯಾವುದೇ ಒಂದು ಸಮುದಾಯಕ್ಕೆ ಸೀಮಿತಗೊಳಿಸದೇ. ಸಮಾಜದಲ್ಲಿರುವ ಎಲ್ಲಾ ಸಮುದಾಯದವರೂ ಇಂತಹ ಮಹಾಪುರುಷರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.

ಜಾಜೂರು ಜಿಲ್ಲಾ ಪಂಚಾಯ್ತಿ ಕ್ಷೇತ್ರದಿಂದ ಆರಿಸಿಬಂದ ನಂತರ ಮೊದಲ ಕಾರ್ಯಕ್ರಮ ಇದಾಗಿದೆ ಎಂದರು. ಕಾರ್ಯಕ್ರಮದಲ್ಲಿ  ಜಾಜೂರು ತಾಲ್ಲೂಕು ಪಂಚಾಯ್ತಿ ಸದಸ್ಯ ಯು. ಮಲ್ಲಿಕಾರ್ಜುನ ಮಾತನಾಡಿದರು. ಗ್ರಾಮ ಪಂಚಾಯ್ತಿ ಸದಸ್ಯ ಶಾಂತವೀರಯ್ಯ ಉಪಸ್ಥಿತರಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.