ಚಿತ್ರದುರ್ಗ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಪುತ್ರ ಜಯ್ ಷಾ ವಿರುದ್ಧ ಕೇಳಿ ಬಂದಿರುವ ಅಕ್ರಮ ಆಸ್ತಿ ಗಳಿಕೆ ಕುರಿತು ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ಆಗ್ರಹಿಸಿ ಭಾರತೀಯ ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದ ಅವರು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡದಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ತನಿಖೆ ಕೈಗೊಳ್ಳುವಂತೆ ಸೂಚನೆ ನೀಡಬೇಕು ಎಂದು ರಾಷ್ಟ್ರಪತಿ ಅವರಿಗೆ ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಜಯ್ ಷಾ ಕಂಪೆನಿಯ ವಹಿವಾಟು ನಷ್ಟದಲ್ಲಿದ್ದು, ಅಮಿತ್ ಷಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಒಂದೇ ವರ್ಷದಲ್ಲಿ ಅವರ ಪುತ್ರನ ಆಸ್ತಿ 16 ಸಾವಿರ ಪಟ್ಟು ಹೆಚ್ಚಾಗಿರುವುದು ನಿಜಕ್ಕೂ ಆಶ್ಚರ್ಯದ ಸಂಗತಿ. ಈ ಬಗ್ಗೆ ಕೂಲಂಕಷ ತನಿಖೆ ಆಗಬೇಕು ಎಂದು ಆಗ್ರಹಿಸಿದರು.
ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಮಧು ಪಾಲೇಗೌಡ, ಉಪಾಧ್ಯಕ್ಷ ಅಬ್ದುಲ್ ರೆಹಮಾನ್, ಚಿತ್ರದುರ್ಗ ವಿಧಾನಸಭಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶೋಕ್ ನಾಯ್ಡು, ಪ್ರಧಾನ ಕಾರ್ಯದರ್ಶಿಗಳಾದ ಆಜಾಮ್, ಎನ್.ಎಸ್.ವಿಕಾಸ್, ವಸೀಂ ಬಡಮಕಾನ್, ಎಂ.ಡಿ.ರಫೀ, ಎಂ.ಡಿ.ನಾಹಿದ್, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಮೀನಾಕ್ಷಮ್ಮ, ಉಪಾಧ್ಯಕ್ಷೆ ನಜ್ಮತಾಜ್ ಅವರೂ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.