ಹೊಸದುರ್ಗ: ತಾಲ್ಲೂಕಿನ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಆರೋಗ್ಯ ಪಾಲನೆ ಉದ್ದೇಶದಿಂದ ಶ್ರದ್ಧೆಯಿಂದ ಕಾರ್ಯ ನಿರ್ವಹಿಸಿದಲ್ಲಿ ಮಾತ್ರ ಮಕ್ಕಳ ಆರೋಗ್ಯ ಕಾಪಾಡಲು ಸಾಧ್ಯ ಎಂದು ತಹಶೀಲ್ದಾರ್ ಕೆ. ಏಕೇಶ್ಬಾಬು ತಿಳಿಸಿದರು.
ಸೋಮವಾರ ಪಟ್ಟಣದ ಶಾದಿ ಮಹಲ್ನಲ್ಲಿ ತಾಲ್ಲೂಕಿನ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಡೆಂಗೆ ಜ್ವರ ನಿವಾರಣೆಯ ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಆರೋಗ್ಯ ಜಾಗೃತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ ಈಗಾಗಲೇ ಡೆಂಗೆ ಜ್ವರಕ್ಕೆ ಸಂಬಂಧಿಸಿಂದಂತೆ 5 ಪ್ರಕರಣ ದಾಖಲಾಗಿದ್ದು, ಜನತೆಯಲ್ಲಿ ಭಯ ಉಂಟಾಗಿದೆ. ಇಂತಹ ಅಪಾಯಕಾರಿ ರೋಗದ ನಿವಾರಣೆಗೆ ತಾಲ್ಲೂಕಿನ ಎಲ್ಲಾ ಕಾರ್ಯಕರ್ತೆಯರು, ಶಿಕ್ಷಕರು, ಪಂಚಾಯ್ತಿ ಅಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿ ವರ್ಗದವರು ತಮ್ಮ ಗ್ರಾಮಗಳ ಪರಿಸರದ ಸ್ವಚ್ಛತೆಯ ದೃಷ್ಟಿಯಿಂದ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
`ಮಕ್ಕಳು ಈ ದೇಶದ ಆಸ್ತಿ ಆಗಿರುವುದರಿಂದ ಅವರ ಆರೋಗ್ಯ ವೃದ್ಧಿಗೆ ಪೂರಕ ಪರಿಸರ ನಿರ್ಮಿಸುವುದು ನಮ್ಮೆಲ್ಲರ ಹೊಣೆ. ಡೆಂಗೆ ಜ್ವರ ಚಿಕ್ಕಮಕ್ಕಳಿನಿಂದ ವೃದ್ಧರವರೆಗೆ ಬರುವ ಕಾಯಿಲೆಯಾಗಿದೆ ಈ ರೋಗ ನಿವಾರಿಸಲು ಜನಸ್ಪಂದನ ಕಾರ್ಯಕ್ರಮ ಹಾಗೂ ಮಾಹಿತಿ ಒದಗಿಸಲು ಕಾರ್ಯಾಗಾರ ಏರ್ಪಡಿಸಲಾಗುವುದು' ಎಂದು ವಿವರಿಸಿದರು.
ಕಾರ್ಯಾಗಾರದಲ್ಲಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಕಾಶಿ, ತಾ.ಪಂ. ಸಹಾಯಕ ಸಹ ನಿರ್ದೇಶಕ ತಿಪ್ಪೇಸ್ವಾಮಿ, ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.
ಮೊಳಕಾಲ್ಮುರು ವರದಿ
ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಹೊಂದಬೇಕು ಎಂದು ಸಹಾಯಕ ಆರೋಗ್ಯ ನಿರೀಕ್ಷಕ ಆರ್. ಲೋಕೇಶ್ವರಪ್ಪ ಹೇಳಿದರು.
ತಾಲ್ಲೂಕಿನ ಬಿ.ಜಿ.ಕೆರೆಯಲ್ಲಿ ಈಚೆಗೆ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿ, ಸ್ವಚ್ಛತೆ ಕಾಪಾಡುವ ಮೂಲಕ ಮಾತ್ರ ಮುಖ್ಯವಾಗಿ ಡೆಂಗೆ, ಚಿಕುನ್ಗುನ್ಯಾ ಮೊದಲಾದ ರೋಗ ಪರಿಣಾಮಕಾರಿಯಾಗಿ ನಿಯಂತ್ರಣ ಮಾಡಲು ಸಾಧ್ಯವಿದೆ.
ಇದಕ್ಕೆ ಸಮುದಾಯದ ಸಹಕಾರ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರು ಆರೋಗ್ಯ ಇಲಾಖೆಗೆ ಸಹಕಾರ ನೀಡಬೇಕು ಎಂದರು.
ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರಾಧಾ ಕಾರ್ಯಾಗಾರ ಉದ್ಘಾಟಿಸಿದರು. ಉಪಾಧ್ಯಕ್ಷ ತಿಪ್ಪೇಸ್ವಾಮಿ, ಶಿಕ್ಷಕಿ ಭಾಗ್ಯಮ್ಮ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.