ADVERTISEMENT

ನೀರಿನ ಸಮಸ್ಯೆ ನಿವಾರಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2012, 3:30 IST
Last Updated 18 ಅಕ್ಟೋಬರ್ 2012, 3:30 IST

ಚಿತ್ರದುರ್ಗ:  ನಗರದಲ್ಲಿ ಕಳೆದ ಹಲವಾರು ದಿನಗಳಿಂದ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಕರುನಾಡ ರಕ್ಷಣಾ ವೇದಿಕೆ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ನಗರದಲ್ಲಿ ಶಾಂತಿಸಾಗರದಿಂದ ನೀರು ಪೂರೈಕೆಯಾಗದೆ ಸುಮಾರು 20 ದಿನಗಳು ಕಳೆದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದಾಗಿ ಜನತೆ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಈ ಬಗ್ಗೆ ಸ್ಥಳೀಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ನಗರಸಭೆ ಅಧ್ಯಕ್ಷರು, ಸದಸ್ಯರು ಗಮನ ನೀಡಿಲ್ಲ ಎಂದು ಕಾರ್ಯಕರ್ತರು ದೂರಿದರು.

ಕುಡಿಯುವ ನೀರು ಪೂರೈಸುವ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ನಗರಸಭೆ ವಿಫಲವಾಗಿರುವುದರಿಂದ ಪದೇಪದೇ ಈ ಸಮಸ್ಯೆ ಉಂಟಾಗಿದೆ. ನಗರಸಭೆಯಿಂದ ಟ್ಯಾಂಕರ್‌ಗಳ ಮೂಲಕ ನೀರನ್ನು ಸರಬರಾಜು ಮಾಡುತ್ತಿದ್ದರೂ ಅದು ಸಾಕಾಗುತ್ತಿಲ್ಲ ಎಂದು ದೂರಿದರು.

ಕೆಲವು ಬಡಾವಣೆಗಳಲ್ಲಿ ನೀರಿಗಾಗಿ ನಾಗರಿಕರು ಕೊಳವೆಬಾವಿ ಇರುವ ಮನೆ ಮುಂದೆ ನಿಂತು ನೀರು ಪಡೆಯಬೇಕಾದ ಸ್ಥಿತಿ ಉಂಟಾಗಿದೆ. ಇನ್ನೂ ಕೆಲವೆಡೆ ದೂರದ ಸ್ಥಳಗಳಿಂದ ನೀರು ತರಬೇಕಾಗಿದೆ.

ನಗರದ ಜನತೆಗೆ ಕುಡಿಯುವ ನೀರಿಗಾಗಿ ರೊಚ್ಚಿಗೇಳುವ ಮೊದಲು ನಗರಸಭೆ ಎಚ್ಚೆತ್ತುಕೊಳ್ಳಬೇಕು. ತಕ್ಷಣ ಸಮರ್ಪಕವಾಗಿ ಮತ್ತು ವ್ಯವಸ್ಥಿತವಾಗಿ ನಾಗರಿಕರಿಗೆ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಧರಣಿಯಲ್ಲಿ ವೇದಿಕೆ ಸಂಸ್ಥಾಪಕ ರಾಜ್ಯ ಘಟಕದ ಅಧ್ಯಕ್ಷ ಸೈಯದ್ ಇಸ್ಮಾಯಿಲ್, ಜಿಲ್ಲಾ ಘಟಕದ ಅಧ್ಯಕ್ಷ ಚಿಕ್ಕಾಲಘಟ್ಟದ ಈ. ರಂಗಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜ್ಜಯ್ಯ ಇಟಗಿ, ಗೌರವಾಧ್ಯಕ್ಷ ಮರಳುಸಿದ್ದಪ್ಪ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ   ಹನೀಫ್, ನಯಾಜ್, ಹನುಮಂತಪ್ಪ, ನಗರ ಘಟಕದ ಅಧ್ಯಕ್ಷ ಅಹಮ್ಮದ್ ಸಾದತ್ ಬೇಗ್, ಗೌಸ್ ಬೇಗ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.