ಹಿರಿಯೂರು: ತಾಲ್ಲೂಕಿನ ಆದಿವಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಳ್ಳಿಗಳ ಸಮಗ್ರ ಅಭಿವೃದ್ಧಿಗೆ ಗ್ರಾಮ ವಿಕಾಸ ಯೋಜನೆಯಡಿ ₹ 1 ಕೋಟಿ ಅನುದಾನ ನೀಡಲಾಗುವುದು ಎಂದು ಶಾಸಕ ಡಿ. ಸುಧಾಕರ್ ಹೇಳಿದರು.
ತಾಲ್ಲೂಕಿನ ಆದಿವಾಲ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆಯಡಿ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಪಂಚಾಯ್ತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸುವ ಬಗ್ಗೆ ಎಲ್ಲ ಪಂಚಾಯ್ತಿ ಸದಸ್ಯರು ಸಾರ್ವಜನಿಕರ ಜತೆ ಚರ್ಚಿಸಿ ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸಬೇಕು. ಶುದ್ಧ ಕುಡಿಯುವ ನೀರು, ಚರಂಡಿ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು. ಆದಿವಾಲ ಗ್ರಾಮಕ್ಕೆ ಗಾಯತ್ರಿ ಜಲಾಶಯದಿಂದ ಕುಡಿಯುವ ನೀರು ಪೂರೈಕೆ ಮಾಡಲಾಗುವುದು ಎಂದರು.
ಸರ್ಕಾರದ ಸೌಲಭ್ಯಗಳನ್ನು ಎಲ್ಲ ವರ್ಗದವರಿಗೂ ತಲುಪುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಹಿಂದಿನ ಒಂಬತ್ತೂವರೆ ವರ್ಷದಲ್ಲಿ ಶಿಕ್ಷಣವೂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಸಹಿಸದ ವಿರೋಧ ಪಕ್ಷದವರು ವಿನಾಕಾರಣ ಟೀಕಿಸುತ್ತಿದ್ದಾರೆ.
ಚಳ್ಳಕೆರೆಗೆ ಕುಡಿಯುವ ನೀರು ಹರಿಸಿದ್ದರಲ್ಲಿ ನನ್ನ ಪಾತ್ರ ಇಲ್ಲ ಎನ್ನುವುದು ತಿಳಿದಿದ್ದರೂ ಜನರನ್ನು ಎತ್ತಿಕಟ್ಟುವ ಕೆಲಸ ನಡೆಯುತ್ತಿದೆ’ ಎಂದರು.ನಾನು ಶಾಸಕನಾದ ನಂತರ ದೌರ್ಜನ್ಯ ಪ್ರಕರಣಗಳು, ಜಾತಿ ಹಾಗೂ ಕೋಮು ಗಲಭೆಗಳು ಇಲ್ಲವೆನ್ನುವಷ್ಟು ಕಡಿಮೆಯಾಗಿವೆ ಎಂದು ಸುಧಾಕರ್ ಹೇಳಿದರು.
ಜಿಲ್ಲಾ ಪಂಚಾಯ್ತಿ ಸದಸ್ಯ ಆರ್. ನಾಗೇಂದ್ರನಾಯ್ಕ್, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಉಮಾದೇವಿ ಮಾತನಾಡಿದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಚಂದ್ರಪ್ಪ, ವಿನೋದ, ಶ್ರೀಪತಿ, ಕೆ. ಓಂಕಾರಪ್ಪ, ಮುಕುಂದ, ತಾಲ್ಲೂಕು ಪಂಚಾಯ್ತಿ ಇಒ ಡಾ. ಶ್ರೀಧರ್ ಬಾರಿಕೇರ್, ರಾಜಪ್ಪ, ನಾಗರತ್ನ, ಸಿದ್ದಮ್ಮ, ಮುಬಾರಕ್, ಶ್ರೀರಂಗಪ್ಪ, ಮುನೀರ್, ಚಮನ್ ಷರೀಫ್, ಮಹಮದ್ ಆಲಿ, ದಿಂಡಾವರ ಮಹೇಶ್, ಶ್ರೀನಿವಾಸ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.