ADVERTISEMENT

ಬರಪರಿಹಾರಕ್ಕೆ ವಿಶೇಷ ಪ್ಯಾಕೇಜ್ ಚಿಂತನೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2011, 6:10 IST
Last Updated 12 ಅಕ್ಟೋಬರ್ 2011, 6:10 IST

ಹೊಳಲ್ಕೆರೆ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ರೈತರಿಗೆ ಪರಿಹಾರ ನೀಡಲು ವಿಶೇಷ ಪ್ಯಾಕೇಜ್ ಒದಗಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ ಆಸ್ನೋಟಿಕರ್ ತಿಳಿಸಿದರು.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂಧ್ರ ಪ್ರದೇಶದಲ್ಲಿ ಬರ ಪರಿಹಾರಕ್ಕಾಗಿ ರೈತರಿಗೆ ವಿಶೇಷ ಪ್ಯಾಕೇಜ್ ನೀಡಿರುವ ಬಗ್ಗೆ ಮಾಹಿತಿ ಬಂದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆಯಲು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಸೂಚನೆ ನೀಡಿದ್ದೇನೆ. ಬರ ಪರಿಹಾರ ಕಾರ್ಯಗಳಿಗೆ ಕೇಂದ್ರಸರ್ಕಾರ ಆರ್ಥಿಕ ನೆರವು ನೀಡಬೇಕು. ರಾಜ್ಯಸರ್ಕಾರ ್ಙ 5 ಕೋಟಿ ಬಿಡುಗಡೆ ಮಾಡಿದ್ದು, ಈಗಾಗಲೇ ್ಙ  3 ಕೋಟಿ ವೆಚ್ಚದಲ್ಲಿ ಗೋಶಾಲೆ ಮತ್ತಿತರ ತುರ್ತು ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ವಿವರಿಸಿದರು.

ಕೇವಲ ಗೋಶಾಲೆ ಆರಂಭಿಸುವುದರಿಂದ ರೈತರ ಕಷ್ಟ ತೀರುವುದಿಲ್ಲ. ಕಳೆದ ಬಾರಿ ಅತಿವೃಷ್ಟಿಯಿಂದ ಬೆಳೆ ಹಾನಿಯಾದಾಗ ಎಕರೆಗೆ ಕೇವಲ ್ಙ  400 ಪರಿಹಾರ ನೀಡಲಾಯಿತು. ಒಂದು ಪ್ಯಾಕೆಟ್ ಮೆಕ್ಕೆಜೋಳದ ಬೀಜದ ಬೆಲೆಯೇ ್ಙ  600ರಿಂದ 700 ಇದೆ. ಆದ್ದರಿಂದ ಈ ಬಾರಿ ಪರಿಹಾರ ಧನದ ಮೊತ್ತ ಹೆಚ್ಚಿಸುವಿರಾ? ಎಂಬ ಪತ್ರಕರ್ತರ ಪ್ರಶ್ನೆಗೆ, ತಾಲ್ಲೂಕಿನಲ್ಲಿ ಆರಂಭದಲ್ಲಿ ಬಿದ್ದ ಮುಂಗಾರು ಮಳೆಗೆ ಹೆಚ್ಚಿನ ರೈತರು ಬಿತ್ತನೆ ಮಾಡಿದ್ದು, ತೆನೆಯಾಗುವ ಹಂತದಲ್ಲಿ ಮಳೆ ಕೈಕೊಟ್ಟಿದೆ. ಇದರಿಂದ ರೈತರಿಗೆ ಲಕ್ಷಾಂತರ ್ಙ ನಷ್ಟ ಸಂಭವಿಸಿದ್ದು,  ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ಪರಿಹಾರಧನ ಹೆಚ್ಚಿಸುವ ಕುರಿತು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಆಸ್ನೋಟಿಕರ್ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.