ಮೊಳಕಾಲ್ಮುರು: ‘ಹಲವು ಕ್ಷೇತ್ರಗಳಲ್ಲಿ ಅತ್ಯಂತ ಹಿಂದುಳಿದಿರುವ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿ ಮಾಡುವ ಕನಸು ಇಟ್ಟುಕೊಂಡಿದ್ದೇನೆ’ ಎಂದು ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಹೇಳಿದರು.
ತಾಲ್ಲೂಕಿನ ರಾಂಪುರದಲ್ಲಿ ಗುರುವಾರ ನಡೆದ ಬಹಿರಂಗ ಸಭೆ ಹಾಗೂ ರೋಡ್ ಷೋನಲ್ಲಿ ಭಾಗವಹಿಸಿ ಅವರು ಮಾತನಾಡಿದರು.
‘ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ಯಾವುದೇ ಲಾಭವಿಲ್ಲ. ಮೋದಿ ಸರ್ಕಾರ ಹತ್ತಾರು ಯೋಜನೆಗಳನ್ನು ಜಾರಿ ಮಾಡಿದೆ. ವಿಶ್ವದಲ್ಲೇ ಮಾದರಿ ಪ್ರಧಾನಿಯಾಗಿ ಮೋದಿ ಹೊರಹೊಮ್ಮಿದ್ದಾರೆ. ರಾಜ್ಯದಲ್ಲೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಮಾದರಿ ರಾಜ್ಯವನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ಹೇಳಿದರು.
ಮಾಜಿ ಶಾಸಕ ಎನ್.ವೈ. ಗೋಪಾಲಕೃಷ್ಣ ಮಾತನಾಡಿ, ‘ಶ್ರೀರಾಮುಲು ರಾಜಕೀಯವಾಗಿ ದೂರವಿದ್ದರೂ ಹಲವು ವರ್ಷಗಳಿಂದ ನಮ್ಮ ಕುಟುಂಬ ಸದಸ್ಯರಾಗಿದ್ದಾರೆ. ಕಷ್ಟ ಸುಖಕ್ಕೆ ಸ್ಪಂದಿಸಿಕೊಂಡು ಬಂದಿರುವ ಅವರು ಈಗ ಕಾಂಗ್ರೆಸ್ ನನ್ನನ್ನು ನಡು ನೀರಲ್ಲಿ ಕೈ ಬಿಟ್ಟಾಗ ಬಿಜೆಪಿಗೆ ಸೇರ್ಪಡೆ ಮಾಡಿಕೊಂಡು ಕೂಡ್ಲಿಗಿ ಕ್ಷೇತ್ರದ ಟಿಕೆಟ್ ಕೊಡಿಸಿದ್ದಾರೆ’ ಎಂದು ಹೇಳಿದರು.
ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎಚ್.ಟಿ. ನಾಗರೆಡ್ಡಿ, ಪರಮೇಶ್ವರಪ್ಪ, ಜಿಂಕಲು ಬಸವರಾಜ್, ವಸಂತಕುಮಾರ್, ಆರ್. ಜಯಕುಮಾರ್, ಡಾ.ಪಿ.ಎಂ. ಮಂಜುನಾಥ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.