ADVERTISEMENT

ರೈತರ ಸಮಸ್ಯೆಗೆ ಸ್ಪಂದಿಸಲು ಸಿದ್ಧ: ಚಂದ್ರಪ್ಪ

ಹೊಳಲ್ಕೆರೆ: ರೋಡ್‌ ಷೋಗೆ ಮೊದಲು ಪಂಡಿತಾರಾಧ್ಯ ಶ್ರೀಗಳ ಭೇಟಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2018, 8:20 IST
Last Updated 23 ಏಪ್ರಿಲ್ 2018, 8:20 IST

ಸಿರಿಗೆರೆ: ‘ನಾನು ಶಾಸಕನಾದ ಸಂದರ್ಭದಲ್ಲಿ ಕ್ಷೇತ್ರದ ಹಾಗೂ ರೈತರ ಸಂಕಷ್ಟಗಳಿಗೆ ಸ್ಪಂದಿಸಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ ಜನಪರ ಕೆಲಸಗಳನ್ನು ಮಾಡಲು ಅವಕಾಶ ಕಲ್ಪಿಸಿ’ ಎಂದು ಹೊಳಲ್ಕೆರೆ ಕ್ಷೇತ್ರದ ಬಿಜೆಪಿ ‍ಅಭ್ಯರ್ಥಿ ಎಂ.ಚಂದ್ರಪ್ಪ ಮನವಿ ಮಾಡಿದರು.

ಸಾಣೇಹಳ್ಳಿಯ ತರಳಬಾಳು ಜಗದ್ಗುರು ಶಾಖಾ ಮಠದಲ್ಲಿ ಭಾನುವಾರ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ ಪಡೆದ ಬಳಿಕ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಗ್ರಾಮದಲ್ಲಿ ರೋಡ್‌ ಷೋ ನಡೆಸಿ ಅವರು ಮಾತನಾಡಿದರು.

ರೈತರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಅಲ್ಪಸಂಖ್ಯಾತ ಸಮುದಾಯಗಳಲ್ಲಿಯ ಅನಕ್ಷರತೆ, ಬಡತನ, ನಿರುದ್ಯೋಗದಂತಹ ಸಮಸ್ಯೆಗಳಿಗೆ ಸ್ಪಂದಿಸಿ, ಬಡವರು, ವಿದ್ಯಾರ್ಥಿಗಳು, ಯುವಜನತೆ ಆರ್ಥಿಕವಾಗಿ ಸಬಲರಾಗಲು ಬಿಜೆಪಿ ಹತ್ತು ಹಲವು ಯೋಜನೆಗಳಿಗೆ ಒತ್ತು ನೀಡುತ್ತಿದೆ. ವಿದ್ಯುತ್‌ ಕೊರತೆ ನೀಗಿಸಲು, ಅಡಿಕೆ, ತೆಂಗು, ದಾಳಿಂಬೆ ಬೆಳೆಗಾರ ಸಮಸ್ಯೆಗಳಿಗೆ ಸ್ಪಂದಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.

ADVERTISEMENT

ಈ ಬಾರಿ ಬಿಜೆಪಿ ಪರ ಉತ್ತಮ ವಾತಾವರಣ ನಿರ್ಮಾಣಗೊಂಡಿದೆ. ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಹಾಗೂ ಮೊಳಕಾಲ್ಮುರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಲು ಬಿಜೆಪಿಯನ್ನು ಬೆಂಬಲಿಸಿ ಎಂದು ಅವರು ಮನವಿ ಮಾಡಿದರು.

ಲೋಲಾಕ್ಷಮ್ಮ ಮಾತನಾಡಿ, ‘ದೇಶದಲ್ಲಿ ಮಹಿಳೆಯರ ಹಿತಕಾಯುವ ನೂರಾರು ಕಾನೂನುಗಳು ಇದ್ದರೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು ಆಗುತ್ತಿಲ್ಲ. ಹೆಣ್ಣು ಮಕ್ಕಳ ಪೋಷಣೆಗೆ ವಿಶೇಷ ಒತ್ತು ನೀಡಲಾಗಿದ್ದರೂ, ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ನಡೆಯುತ್ತಿವೆ. ಇದು ಇಡೀ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ’ ಎಂದರು.

ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಕೆ.ಎನ್‌.ಬಸವಂತಪ್ಪ ಹಾಗೂ ಶರಣಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಮಂಜಣ್ಣ, ಬಿಜೆಪಿ ಸ್ಥಳೀಯ ಘಟಕದ ಅಧ್ಯಕ್ಷ ಶಿವಣ್ಣ, ಇಫ್ಕೊ ಸಂಸ್ಥೆಯ ನಿರ್ದೇಶಕ ಕೋಗುಂಡೆ ಮಂಜಣ್ಣ, ಕಾರ್ಯದರ್ಶಿ ಸಿರಿಗೆರೆ ಮೋಹನ್‌, ಬಸವರಾಜು, ವಿರೂಪಾಕ್ಷಪ್ಪ, ಪಂಚಾಕ್ಷರಯ್ಯ ಹಾಗೂ ಹಳವುದರ, ಹಳೇರಂಗಾಪುರ, ಓಬವ್ವನಾಗ್ತಿಹಳ್ಳಿ, ಚಿಕ್ಕೇನಹಳ್ಳಿ, ಸೀಗೇಹಳ್ಳಿ ಗ್ರಾಮದ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.