ADVERTISEMENT

ಲೋಕಪಾಲ್ ಮಸೂದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2011, 5:45 IST
Last Updated 22 ಅಕ್ಟೋಬರ್ 2011, 5:45 IST

ಹೊಸದುರ್ಗ: ಲೋಕಪಾಲ್ ಮಸೂದೆ ಜಾರಿ ಹಾಗೂ ಲೋಕಾಯುಕ್ತರು ಸಲ್ಲಿಸಿರುವ ಅಕ್ರಮ ಗಣಿ ವರದಿಯಲ್ಲಿನ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ತಾಲ್ಲೂಕು ಭಾರತ್ ಕಮ್ಯುನಿಷ್ಟ್ ಪಕ್ಷದ ಕಾರ್ಯಕರ್ತರು ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ನೇತೃತ್ವವಹಿಸಿದ್ದ ಭಾರತ್ ಕಮ್ಯುನಿಷ್ಟ್ ಪಕ್ಷದ ಕಾರ್ಯದರ್ಶಿ ಕೆ.ಎನ್. ರಮೇಶ್ ಮಾತನಾಡಿ, ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ಹೆಗಡೆ ನಿವೃತ್ತಿಗೂ ಮುನ್ನ ನೀಡಿದ ಅಕ್ರಮ ಗಣಿ ವರದಿಯಲ್ಲಿ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ನಡೆಸಿರುವ ಭ್ರಷ್ಟಾಚಾರದ ಬಗ್ಗೆ ದಾಖಲೆಗಳನ್ನು ನೀಡಿದ್ದರೂ ಸರ್ಕಾರ ತಪ್ಪಿತಸ್ಥರ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಭ್ರಷ್ಟಾಚಾರ ತಡೆಗೆ ಜನಲೋಕಪಾಲ್ ಮಸೂದೆ ಜಾರಿಗೆ ತರುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ.  ಇದೇ ನಿರ್ಲಕ್ಷ್ಯ ಮುಂದುವರಿದಲ್ಲಿ ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.

ಭದ್ರಾ ಮೇಲ್ದಂಡೆ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು ಸರ್ಕಾರ ಕಾಮಗಾರಿ ಚುರುಕುಗೊಳಿಸಲು ಅಗತ್ಯ ಕ್ರಮ ಕೈಗೊಂಡು ಬರಪೀಡಿತ ಜಿಲ್ಲೆಯ ಜನತೆಯ ಸಮಸ್ಯೆಗಳನ್ನು ಪರಿಹರಿಬೇಕು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ತಾಲ್ಲೂಕು ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಎನ್.ಸಿ. ಕುಮಾರಸ್ವಾಮಿ, ಮುಖಂಡರಾದ ನಂಜಪ್ಪ, ಚನ್ನವೀರಪ್ಪ, ಗುರುಸಿದ್ದಪ್ಪ, ಮೈಲಾರಪ್ಪ, ಸವಿತಾ, ಭಾರತಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ನೇಮಕ: ಅಖಿಲ ಭಾರತ ಮಹಿಳಾ ಒಕ್ಕೂಟದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಬಾಗೂರು ಗ್ರಾಮದ ಸವಿತಾ ಹಾಗೂ ಕಾರ್ಯದರ್ಶಿಯಾಗಿ ಭಾರತಿ ಅವರನ್ನು ನೇಮಕ ಮಾಡಲಾಗಿದೆ ಎಂದು ಭಾರತ್ ಕಮ್ಯುನಿಷ್ಟ್ ಪಕ್ಷದ ಕಾರ್ಯದರ್ಶಿ ಕೆ.ಎನ್. ರಮೇಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.