ADVERTISEMENT

ಶಿಕ್ಷಣದಲ್ಲಿ ತಾಂತ್ರಿಕತೆ ಬಳಕೆ ಅಗತ್ಯ.

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2011, 9:30 IST
Last Updated 4 ಫೆಬ್ರುವರಿ 2011, 9:30 IST

ಹೊಳಲ್ಕೆರೆ: ಶಿಕ್ಷಣ ಕ್ಷೇತ್ರದಲ್ಲಿ ತಾಂತ್ರಿಕತೆಯ ಬಳಕೆ ಅತ್ಯಗತ್ಯ ಎಂದು ಬೆಂಗಳೂರಿನ ಪ್ರಾಗಂ ಸಂಸ್ಥೆಯ ಶಿಕ್ಷಣ ಸಮಾಲೋಚಕ ಡಾ.ಸೋಮಯಾಜಿ ಹೇಳಿದರು.
ಪಟ್ಟಣದ ಶಿಕ್ಷಕರ ಸದನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶೈಕ್ಷಣಿಕ ಸಮ್ಮೇಳನದಲ್ಲಿ ‘ಶಿಕ್ಷಣದಲ್ಲಿ ತಂತ್ರಜ್ಞಾನದ ಬಳಕೆ’ ವಿಷಯ ಕುರಿತು ಅವರು ಉಪನ್ಯಾಸ ನೀಡಿದರು.
ಇಂದಿಗೂ ನಮ್ಮ ಶೈಕ್ಷಣಿಕ ಕ್ಷೇತ್ರದಲ್ಲಿ ಪಾರಂಪರಿಕ ಪದ್ಧತಿಯನ್ನೇ ಬಳಸಲಾಗುತ್ತಿದೆ.ಸಮಾಜ ಸದಾ ಬದಲಾವಣೆಗಳಿಗೆ ಒಳಗಾಗುತ್ತಿರುತ್ತದೆ. ಪರಿವರ್ತನೆಗೆ ತಕ್ಕಂತೆ ಶಿಕ್ಷಣ ಪದ್ಧತಿಗಳನ್ನೂ ಅಳವಡಿಸಿಕೊಳ್ಳುವುದು ಮುಖ್ಯ. ಶಿಕ್ಷಣದಲ್ಲಿ ತಾಂತ್ರಿಕತೆಯನ್ನು ಅಳವಡಿಸಿಕೊಳ್ಳಲು ಅನೇಕ ಸೌಲಭ್ಯಗಳಿದ್ದು, ಶಿಕ್ಷಕರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಶಿಕ್ಷಣದಲ್ಲಿ ತಾಂತ್ರಿಕತೆಯನ್ನು ಅಳವಡಿಸಿಕೊಳ್ಳುವ ಕುರಿತು ನಮ್ಮ ಸಂಸ್ಥೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಗಣಿತ ಕಲಿಕೆಗಾಗಿ ವೆಬ್‌ಸೈಟ್ ರೂಪಿಸಿದ್ದು, ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾಹಿತಿ ಲಭ್ಯವಿದೆ. ಇದರಲ್ಲಿ ಸಿಬಿಎಸ್‌ಇ, ಐಸಿಎಸ್‌ಇ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ರಾಜ್ಯಗಳ ಪಠ್ಯಕ್ರಮ ಹೊಂದಿರುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲ ಆಗಲಿದೆ. ಇಲ್ಲಿನ ಮಾಹಿತಿಗಳನ್ನು ಉಚಿತವಾಗಿ ಡೌನ್‌ಲೋಡ್ ಮಾಡಿಕೊಳ್ಳ ಬಹುದು. ಅಲ್ಲದೇ, ಕಲಿಕೆಗೆ ಪೂರಕವಾದ ಡಿವಿಡಿ, ಸಿಡಿಗಳು ಲಭ್ಯವಿದ್ದು, ಮಾದರಿ ಪಾಠಗಳನ್ನು ಅಳವಡಿಸಲಾಗಿದೆ ಎಂದರು.

ಚಿತ್ರದುರ್ಗದ ಮಹಾರಾಜ ಕಾಲೇಜಿನ ಪ್ರಾಂಶುಪಾಲ ಡಾ.ಎ. ಬಸಪ್ಪ ‘ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ’ ಕುರಿತು ಉಪನ್ಯಾಸ ನೀಡಿದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎ. ಜಯಪ್ಪ, ಬಿಇಒ ಮಂಜುನಾಥ್, ಸಿ.ಆರ್. ಏಕಾಂತಪ್ಪ, ಎಂ.ಆರ್. ಶಾಂತಪ್ಪ, ಪ್ರಕಾಶ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.