ADVERTISEMENT

ಶೈಕ್ಷಣಿಕ ಸಮ್ಮೇಳನದಲ್ಲಿ ಬಸವರಾಜ ಗುರಿಕಾರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2011, 7:10 IST
Last Updated 4 ಫೆಬ್ರುವರಿ 2011, 7:10 IST

ಹೊಳಲ್ಕೆರೆ: ಕೇಂದ್ರ ಸರ್ಕಾರದ ಆರನೇ ವೇತನ ಆಯೋಗದ ಸೌಲಭ್ಯಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರವನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಸವರಾಜ ಗುರಿಕಾರ ಒತ್ತಾಯಿಸಿದರು.ಪಟ್ಟಣದ ಶಿಕ್ಷಕರ ಸದನದಲ್ಲಿ ಗುರುವಾರ ನಡೆದ ಶೈಕ್ಷಣಿಕ ಸಮ್ಮೇಳನದಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.

ರಾಜ್ಯಾದ್ಯಂತ ಸಮಾನ ಶಿಕ್ಷಣ ನೀತಿ ಜಾರಿಗೊಳಿಸಬೇಕು. ಎಲ್ಲಾ ಮಕ್ಕಳು ಅದೇ ಪ್ರದೇಶದ ಸರ್ಕಾರಿ ಶಾಲೆಯಲ್ಲಿ ಓದುವಂತೆ ನಿಯಮ ರೂಪಿಸಬೇಕು. ಇದರಿಂದ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ನಡುವಿನ ಅಂತರ ಕಡಿಮೆಯಾಗುತ್ತದೆ. ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ನೀಡುವ ಬಡ್ತಿ ಪ್ರಮಾಣವನ್ನು ಶೇ. 75ಕ್ಕೆ ಹೆಚ್ಚಿಸಬೇಕು. ಪ್ರೌಢಶಾಲಾ ಮುಖ್ಯ ಶಿಕ್ಷಕರ ಹುದ್ದೆಯಲ್ಲೂ ಶೇ.10 ರಷ್ಟು ಮೀಸಲಾತಿ ನೀಡಬೇಕು. ಶಿಕ್ಷಕರಿಗೆ ನೀಡುತ್ತಿರುವ ` 200 ವಿಶೇಷ ಭತ್ಯೆಯನ್ನು ಮೂಲ ವೇತನದಲ್ಲಿ ವಿಲೀನಗೊಳಿಸಬೇಕು. ಮನೆಬಾಡಿಗೆ ಭತ್ಯೆ ಪರಿಷ್ಕರಿಸಬೇಕು ಎಂದು ಒತ್ತಾಯಿಸಿದರು.ಸಿಆರ್‌ಪಿ, ಬಿಆರ್‌ಪಿ ಹುದ್ದೆಗಳನ್ನು ಪ್ರೌಢಶಾಲಾ ಮುಖ್ಯ ಶಿಕ್ಷಕರ ಹುದ್ದೆಗಳಾಗಿ ಪರಿವರ್ತಿಸಬೇಕು.

ಕಲಿ-ನಲಿ ಯೋಜನೆಯಿಂದ ಶಾಲೆಗಳಲ್ಲಿ ದಾಖಲಾತಿ ಕಡಿಮೆಯಾಗಿದ್ದು, ಯಾವುದೇ ಕಾರಣಕ್ಕೂ 4ನೇ ತರಗತಿಗೆ ವಿಸ್ತರಿಸಬಾರದು. ಕಲಿ-ನಲಿ ತರಗತಿಗಳಿಗೆ ಪ್ರತ್ಯೇಕ ಶಿಕ್ಷಕರನ್ನು ನೇಮಿಸಬೇಕು. ಕೂಡಲ ಸಂಗಮದಲ್ಲಿ ನಡೆದ ಶೈಕ್ಷಣಿಕ ಸಮ್ಮೇಳನದಲ್ಲಿ ಮುಖ್ಯಮಂತ್ರಿಗಳು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ. ಮಾತಿನಂತೆ ನಡೆದುಕೊಳ್ಳದಿದ್ದರೆ, ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಗುರಿಕಾರ ಎಚ್ಚರಿಸಿದರು.ಸಮ್ಮೇಳನ ಉದ್ಘಾಟಿಸಿದ ಮಾಜಿ ಶಾಸಕ ಎ.ವಿ. ಉಮಾಪತಿ ಮಾತನಾಡಿ, ಶಿಕ್ಷಕರು ಸಮಾಜದ ಮಾರ್ಗದರ್ಶಿಗಳು. ರಾಷ್ಟ್ರ ಕಟ್ಟುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎ. ಜಯಪ್ಪ ಅಧ್ಯಕ್ಷತೆ ವಹಿಸಿದ್ದರು.

ಡಿಡಿಪಿಐ ಶಂಕರಪ್ಪ, ಡಯೆಟ್ ಉಪ ನಿರ್ದೇಶಕ ಮಲ್ಲಣ್ಣ, ಪಿ. ರಮೇಶ್, ಜಿ.ಪಂ. ಸದಸ್ಯರಾದ ಶಿವಕುಮಾರ್, ಇಂದಿರಾ ಕಿರಣ್, ಭಾರತೀ ಕಲ್ಲೇಶ್, ರಂಗಸ್ವಾಮಿ, ಆರ್. ಪಾರ್ವತಮ್ಮ, ಬಿಇಒ ಮಂಜುನಾಥ್, ರಾಮಪ್ಪ, ಏಕಾಂತಪ್ಪ, ಗೀತಾ ಕೃಷ್ಣಮೂರ್ತಿ, ಲಿಂಗರಾಜು, ತಾ.ಪಂ. ಸದಸ್ಯರು, ಸಂಘದ ಪದಾಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.