ಚಿತ್ರದುರ್ಗ: ಕೇಂದ್ರ ಸರ್ಕಾರವೂ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯ ಉತ್ತಮ ಪಡಿಸಲು ಸೌಲಭ್ಯ ಕಲ್ಪಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾಸಲಹೆ ನೀಡಿದರು.
ಇಲ್ಲಿ ಮಂಗಳವಾರ ರಾಜ್ಯ ಪೌರಾಡಳಿತ ನಿರ್ದೇಶನಾಲಯ, ರಾಜ್ಯ ನಗರಾಭಿವೃದ್ಧಿ ಸಂಸ್ಥೆ - ಮೈಸೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ಬೀದಿ ಬದಿ ವ್ಯಾಪಾರಿಗಳಿಗಾಗಿ ಹಮ್ಮಿಕೊಂಡಿದ್ದ ‘ಜಿಲ್ಲಾಮಟ್ಟದ ಒಂದು ದಿನದ ಕಾರ್ಯಾಗಾರ' ಉದ್ಘಾಟಿಸಿ ಅವರು ಮಾತನಾಡಿದರು.
ನಗರದ ಆರ್ಥಿಕ ವ್ಯವಸ್ಥೆಗೆ ಬೀದಿ ಬದಿ ವ್ಯಾಪಾರಿಗಳ ಕೊಡುಗೆ ಅಪಾರ. ಅವರಿಗೆ ಆರ್ಥಿಕ ನೆರವು ನೀಡಲು ದೀನದಯಾಳ್ ಅಂತ್ಯೋದಯ ಯೋಜನೆ ಜಾರಿಗೊಳಿಸಲಾಗಿದ್ದು, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಕಾರ್ಯಕ್ರಮದ ಐದು ಉಪಘಟಕ ಯೋಜನೆಗಳಲ್ಲಿ ಇದು ಕೂಡ ಒಂದಾಗಿದೆ ಎಂದರು.
ಈ ಯೋಜನೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಸಂರಕ್ಷಣೆ, ಜೀವನೋಪಾಯ ಮತ್ತು ನಿಯಂತ್ರಣ ಅಧಿನಿಯಮ 2014 ಹಾಗೂ 2016 ರಡಿ ಬೀದಿ ಬದಿ ವ್ಯಾಪಾರಿಗಳ ಸರ್ವೇ ಕೈಗೊಂಡು, ಗುರುತಿನ ಚೀಟಿ ನೀಡಿ ತರಬೇತಿ ನೀಡಲಾಗುತ್ತದೆ. ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸಂಯೋಜನೆ ಮಾಡುವುದರ ಮೂಲಕ ಮೂಲ ಸೌಕರ್ಯ ಕಲ್ಪಿಸಲು ಕೂಡ ಸಹಕಾರಿಯಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ್ ಎಂ.ಜೋಶಿ ಮಾತನಾಡಿ, ಯಾವುದೇ ವ್ಯಾಪಾರವಾಗಲಿ ನಿಯಮಾನುಸಾರ ಮಾಡಬೇಕು. ಕಾನೂನು ಉಲ್ಲಂಘಿಸಿದರೆ, ಯಾರೇ ಆಗಲಿ ಕ್ರಮ ಕೈಗೊಳ್ಳಬೇಕಾಗುತ್ತದೆ. ಆದ್ದರಿಂದ ಬೀದಿ ಬದಿ ವ್ಯಾಪಾರ ಮಾಡುವವರು ಬೀದಿ ವ್ಯಾಪಾರ ವಲಯಗಳಲ್ಲಿನ ಸಂಚಾರ ನಿಯಮ ಪಾಲಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ನಗರರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಾಜಶೇಖರ್, ರಾಜ್ಯ ನಗರಾಭಿವೃದ್ಧಿ ಸಂಸ್ಥೆ - ಮೈಸೂರು ಸಂಪನ್ಮೂಲ ವ್ಯಕ್ತಿಗಳಾದ ಮಂಜುನಾಥ್, ವಿಶ್ವನಾಥ್, ಸಾಮಾಜಿಕ ತಜ್ಞರಾದ ಸೌಮ್ಯ, ಬಸವರಾಜ್, ಅಧಿಕಾರಿ ವೆಂಕಟೇಶ್, ಪೌರಾಯುಕ್ತರಾದ ಚಂದ್ರಪ್ಪ, ಹನುಮಂತರಾಜ್, ರಮೇಶ್ ಸುಣ್ಣಗಾರ್, ಮುಖ್ಯಾಧಿಕಾರಿಗಳಾದ ಮಹಂತೇಶ್, ರುಕ್ಮಿಣಿ, ಭೂತಣ್ಣ, ಬೀದಿ ಬದಿ ವ್ಯಾಪಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.