ADVERTISEMENT

ಸರ್ವಶಿಕ್ಷಣ ಅಭಿಯಾನದಿಂದ ಗುಣಾತ್ಮಕ ಶಿಕ್ಷಣ ಸಾಧ್ಯ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2012, 10:10 IST
Last Updated 10 ಫೆಬ್ರುವರಿ 2012, 10:10 IST

ಚಿತ್ರದುರ್ಗ: ಸರ್ವ ಶಿಕ್ಷಣ ಅಭಿಯಾನ ಅಡಿ 6ರಿಂದ 14ವರ್ಷದ ಮಕ್ಕಳಿಗೂ ಕಡ್ಡಾಯ ಶಿಕ್ಷಣ ಒದಗಿಸುವ ಜತೆಗೆ ಕಲಿಕೆಗೆ ಅಗತ್ಯವಿರುವ ಬೋಧನಾ ಸಾಮಗ್ರಿ ಕಲ್ಪಿಸಿ ಶಿಕ್ಷಣದಲ್ಲಿ ಗುಣಾತ್ಮಕತೆ ಕಾಪಾಡಲಾಗುತ್ತಿದೆ ಎಂದು ಶಿಕ್ಷಣ ಸಂಯೋಜಕ ಎಚ್. ಸುರೇಶ್ ತಿಳಿಸಿದರು.

ಹೊಸದುರ್ಗ ತಾಲ್ಲೂಕು ದೇವಿಗೆರೆಯಲ್ಲಿ ಗುರುವಾರ ಕೇಂದ್ರ ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ವಾರ್ತಾ ಇಲಾಖೆ ಹಾಗೂ ಶಿಕ್ಷಣ ಇಲಾಖೆ, ಹೊಸದುರ್ಗದ ಶಿಶು ಅಭಿವೃದ್ಧಿ ಯೋಜನೆ, ದೇವಿಗೆರೆ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಸರ್ವ ಶಿಕ್ಷಣ ಅಭಿಯಾನ ಯೋಜನೆ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗುಣಾತ್ಮಕ ಶಿಕ್ಷಣದ ಜೊತೆಗೆ ಎಲ್ಲ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಕಲಿಕಾ ಸಾಮಗ್ರಿ ನೀಡಲಾಗುತ್ತದೆ. ಅಂಗವಿಕಲರಿಗೆ ಬೇಕಾಗುವ ತ್ರಿಚಕ್ರ ವಾಹನ, ಸೈಕಲ್, ಕನ್ನಡಕ ಸೇರಿದಂತೆ ಆರೋಗ್ಯ ರಕ್ಷಣೆ ಒದಗಿಸಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸರ್ವ ಶಿಕ್ಷಣ ಯೋಜನೆ ಅಡಿಯಲ್ಲಿ ಶಾಲೆಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

ಶಾಲೆಗೆ ಅಗತ್ಯವಿರುವ ಹೆಚ್ಚುವರಿ ಕೊಠಡಿಗಳನ್ನು ಸಹ ನಿರ್ಮಾಣ ಮಾಡಲಾಗುತ್ತದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಾ.ಪಂ. ಸದಸ್ಯೆ ಮಂಜುಳಮ್ಮ , ಸರ್ವ ಶಿಕ್ಷಣ ಅಭಿಯಾನ ಆರಂಭದಿಂದ ಖಾಸಗಿ ಶಾಲೆಗಳಿಗೆ ವಲಸೆ ಹೋಗುತ್ತಿದ್ದ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ.
 
ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗಿಂತಲೂ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸರ್ಕಾರಿ ಶಾಲೆಗಳಿಗೆ ಸಾಮರ್ಥ್ಯವಿರುವ ಶಿಕ್ಷಕರ ನೇಮಕ ಮಾಡಲಾಗಿದೆ. ಸುಸಜ್ಜಿತ ಕಟ್ಟಡ, ಕಲಿಕಾ ಸಾಮಗ್ರಿ, ಪ್ರಯೋಗಾಲಯ ಸೇರಿದಂತೆ ಇತರ ಸೌಲಭ್ಯವಿರುವುದರಿಂದ ಗ್ರಾಮಾಂತರ ಪ್ರದೇಶದ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮುಂದುವರಿಸಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಗ್ರಾ.ಪಂ. ಅಧ್ಯಕ್ಷೆ ಕರಿಯಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಈಶ್ವರಪ್ಪ, ಗ್ರಾ.ಪಂ. ಉಪಾಧ್ಯಕ್ಷ ರಾಮಣ್ಣ, ಸದಸ್ಯರಾದ ರೇಣುಕಮ್ಮ, ಮಂಜುನಾಥ್, ಶಿಕ್ಷಣ ಸಂಯೋಜಕ ಮಹೇಶ್ವರಪ್ಪ ಹಾಜರಿದ್ದರು.

ಕ್ಷೇತ್ರ ಪ್ರಚಾರ ಸಹಾಯಕ ರಾಮಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಶಿಕ್ಷಕಿ ಭಾಗೀರಥಮ್ಮ ಸ್ವಾಗತಿಸಿದರು. ಮುಖ್ಯಶಿಕ್ಷಕ ಈ. ಜಗದೀಶ್ ವಂದಿಸಿದರು. ಎಸ್.ಬಿ.ಬಿ. ಹಜರ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.