ADVERTISEMENT

ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಬಹುದಿತ್ತು

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2017, 6:12 IST
Last Updated 27 ಅಕ್ಟೋಬರ್ 2017, 6:12 IST

ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ನಾಲ್ಕೂವರೆ ವರ್ಷದ ಆಡಳಿತದ ಅವಧಿಯಲ್ಲಿ ಇನ್ನೂ ಉತ್ತಮ ಆಡಳಿತ ನೀಡಬಹುದಿತ್ತು ಎಂದು ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.

2000 ರ ನಂತರ ಹೊರಗಿನಿಂದ ಕಾಂಗ್ರೆಸ್‌ಗೆ ಯಾರು ಹೋಗಿದ್ದಾರೆ. ಅವರನ್ನು ಇವತ್ತಿಗೂ ಅನೇಕ ಕಾಂಗ್ರೆಸ್‌ ಮುಖಂಡರು ಹೊರಗಿನವರಂತೆ ನೋಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಅದನ್ನು ನಾನು ಹೇಳುವ ಅಗತ್ಯವಿಲ್ಲ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150 ಸೀಟು ಪಡೆಯಲೇಬೇಕು ಎಂಬುದಾಗಿ ಎಲ್ಲ ಪಕ್ಷದವರು ಪ್ರಯತ್ನ ಪಡುತ್ತಿದ್ದಾರೆ. ಆದರೆ, ರಾಜ್ಯದ ಮತದಾರರು ಬಹಳ ಪ್ರಜ್ಞಾವಂತರು, ಅಲ್ಲದೆ ಅತಿ ಬುದ್ಧಿವಂತರು. ಯಾವ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬುದನ್ನು ಅವರೇ ನಿರ್ಧರಿಸಲಿದ್ದಾರೆ’ ಎಂದು ತಿಳಿಸಿದರು.

ADVERTISEMENT

‘ಜೆಡಿಎಸ್‌ ವರಿಷ್ಠ ದೇವೇಗೌಡರ ಬಗ್ಗೆ ನನಗೆ ಅಪಾರ ಗೌರವವಿದೆ. ರಾಷ್ಟ್ರನಾಯಕ ನಿಜಲಿಂಗಪ್ಪ ಅವರ ನಂತರದ ಪೀಳಿಗೆಯಲ್ಲಿ ದೇವೇಗೌಡರು, ಜೆ.ಎಚ್.ಪಟೇಲರು, ಬೊಮ್ಮಾಯಿ ಒಂದು ಪೀಳಿಗೆಯ ನಾಯಕರು ಎನಿಸಿಕೊಂಡವರು. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ದೀಪಾವಳಿ ಹಬ್ಬದ ದಿನ ಗೌಡರಿಗೆ ಶುಭಾಶಯ ಕೋರಲು ನಾನು ಹೋಗುತ್ತೇನೆ. ಇದೇ ಸಂದರ್ಭದಲ್ಲಿ ಈಚೆಗೆ ನೀವು ಮತ್ತೆ ರಾಜಕೀಯದಲ್ಲಿ ಸಕ್ರಿಯರಾಗಬೇಕು ಎಂದು ಸಲಹೆ ಕೊಟ್ಟಿದ್ದಾರೆ. ಅದನ್ನು ಸ್ವೀಕರಿಸಿದ್ದೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.