ADVERTISEMENT

ಹೊಸದುರ್ಗ: ಸಾಧನೆಗೆ ಶಿಸ್ತು, ಸಂಯಮ, ಛಲ ಅಗತ್ಯ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2011, 8:25 IST
Last Updated 10 ಅಕ್ಟೋಬರ್ 2011, 8:25 IST

ಹೊಸದುರ್ಗ: ಸಾಧನೆಗೆ ಶಿಸ್ತು, ಸಂಯಮ, ಛಲ ಹಾಗೂ ಶಿಕ್ಷಣ ಅತ್ಯಗತ್ಯ ಎಂದು ಭಗೀರಥ ಪೀಠದ ಪುರುಷೋತ್ತಮಾನಂದಪುರಿ  ಸ್ವಾಮೀಜಿ ಹೇಳಿದರು.

ಇಲ್ಲಿನ ವಾಸವಿ ಕಲ್ಯಾಣ ಮಂಟಪದಲ್ಲಿ ಭಗೀರಥ ನೌಕರರ ಸಂಘ ಭಾನುವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭದ ನೇತೃತ್ವ ವಹಿಸಿ ಅವರು ಮಾತನಾಡಿದರು.

ಯಾವುದೇ ಸಮಾಜ ಅಭಿವೃದ್ಧಿ ಕಾಣಬೇಕಾದರೆ ಶಿಕ್ಷಣ ಅತ್ಯಗತ್ಯ. ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಶಿಕ್ಷಣ ನೀಡುವುದರ ಜತೆಗೆ ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

ಪ್ರತಿಭಾನ್ವಿತರನ್ನು ಪುರಸ್ಕರಿಸುವ ಮೂಲಕ ಇನ್ನೂ ಹೆಚ್ಚಿನ ಪ್ರತಿಭೆಗಳು ಹೊರಹೊಮ್ಮಲು ಪ್ರೇರೇಪಣೆ ನೀಡಬೇಕು. ಸಂಘ ಸಂಸ್ಥೆಗಳು ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಮಾತನಾಡಿ, ಯಾವುದೇ ವ್ಯಕ್ತಿಗೆ ಜಾತಿಯಿಂದ ಗೌರವ ಬರುವುದಿಲ್ಲ. ವ್ಯಕ್ತಿಯಿಂದ ಜಾತಿಗೆ ಗೌರವ ಬರುತ್ತದೆ. ಈ ವಿಷಯವನ್ನು ಪ್ರತಿಯೊಬ್ಬರೂ ಗಂಭೀರವಾಗಿ ಪರಿಗಣಿಸಿ ಉತ್ತಮ ವ್ಯಕ್ತಿಗಳಾಗಿ ಜಾತಿ, ಸಮುದಾಯ, ಗ್ರಾಮ, ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತರುವಂತಹ ಕೆಲಸ ಮಾಡಬೇಕು ಎಂದರು.

ಮಂಗಳೂರು ವಾಣಿಜ್ಯ ಇಲಾಖೆ ಉಪಾಯುಕ್ತ ಡಿ. ಜಗನ್ನಾಥ ಸಾಗರ್ 2010-11ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ತಾಲ್ಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕೃರಿಸಿದರು.

ಅಬಕಾರಿ ಜಿಲ್ಲಾಧಿಕಾರಿ ಎನ್. ರಾಮಚಂದ್ರಯ್ಯ ನಿವೃತ್ತ ನೌಕರರನ್ನು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಗೂಳಿಹಟ್ಟಿ ಡಿ. ಶೇಖರ್, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಮುಖ್ಯ ಎಂಜಿನಿಯರ್ ಪ್ರಭಾಕರ್ ಚೇಣಿ, ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ರಾಜ್ಯ ಸರ್ಕಾರದ ನಿರ್ದೇಶಕ ಪಿ. ಶಿವಶಂಕರ್, ವೈದ್ಯಕೀಯ ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿ ಭೀಮಪ್ಪ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ.ಎನ್. ಮಲ್ಲಪ್ಪ, ಉದ್ಯಮಿ ನಾಗೇಂದ್ರಪ್ಪ, ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಆರ್. ಮೂರ್ತಿ, ತಾಲ್ಲೂಕು ಸಂಘದ ಅಧ್ಯಕ್ಷ ಎಂ.ಪಿ. ಶಂಕರ್, ಬೆಸ್ಕಾಂ ಎಇಇ ಜಯಣ್ಣ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.