ಚಳ್ಳಕೆರೆ: ‘ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಭ್ಯಾಸ ಮಾಡುವುದರಿಂದ ಪರೀಕ್ಷೆ ಭಯ ಹೋಗಲಾಡಿಸಬಹುದು’ ಎಂದು ತಹಶೀಲ್ದಾರ್ ಎಚ್.ವಿ. ವಿಜಯರಾಜು ಅಭಿಪ್ರಾಯಪಟ್ಟರು.
ಪಟ್ಟಣದ ವಿಶ್ವಭಾರತಿ ಪ್ರೌಢಶಾಲೆ ಆವರಣದಲ್ಲಿ ಗುರುವಾರ ರಾಜ್ಯ ಬಾಲ ವಿಕಾಸ ಅಕಾಡೆಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರಿಕ್ಷೆ ಪೂರ್ವ ಸಿದ್ದತೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿವಹಿಸಿ ಅಧ್ಯಯನ ಮಾಡಬೇಕು. ಜತೆಗೆ ಪಠ್ಯಕ್ಕೆ ಪೂರಕವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸು ವುದರಿಂದ ಹೆಚ್ಚಿನ ಜ್ಞಾನ ಸಂಪಾದಿಸಲು ಸಹಾಯಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಜಿ.ಟಿ. ತಿಪ್ಪೇಶ್ ಮಾತನಾಡಿ, ಅಧ್ಯಯನ ಕೇವಲ ಹೆಚ್ಚಿನ ಅಂಕಗಳಿಕೆಗೆ ಮಾತ್ರ ಸೀಮಿತವಾಗಿರಬಾರದು. ಹೆಚ್ಚಿನ ಜ್ಞಾನ ಸಂಪಾದನೆಯ ಕಡೆಗೆ ಮನಸ್ಸು ಕೇಂದ್ರಿಕರಿಸಬೇಕು. ಶಿಕ್ಷಣಕ್ಕೆ ಇಂದು ಸಾಕಷ್ಟು ಉತ್ತಮ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ. ವಿದ್ಯಾರ್ಥಿಗಳು ಅವುಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ರಾಜಣ್ಣ ಮಾತನಾಡಿ, ವಿದ್ಯಾರ್ಥಿಗಳು ಗುಂಪುಗೂಡಿ ಶ್ರದ್ಧೆಯಿಂದ ಅಧ್ಯಯನ ನಡೆಸಬೇಕು ಎಂದು ಕಿವಿಮಾತು ಹೇಳಿದರು.
ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಗಿರಿಜಾಂಬ, ಆರ್. ಹನುಮಂತ ರಾಯ, ಜಿ.ಟಿ. ವೀರಭದ್ರಪ್ಪ,
ಕೆ.ಪಿ. ತಿಪ್ಪೇಸ್ವಾಮಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.