ADVERTISEMENT

ಕ್ರೀಡಾಂಗಣದ ಅಭಿವೃದ್ಧಿಗೆ ₹ 2 ಕೋಟಿ

ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2022, 4:07 IST
Last Updated 14 ಜೂನ್ 2022, 4:07 IST
ಹಿರಿಯೂರಿನಲ್ಲಿ ಸೋಮವಾರ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ನಗರಸಭೆ ಅಧಿಕಾರಿಗಳೊಂದಿಗೆ ತಾಲ್ಲೂಕು ಕ್ರೀಡಾಂಗಣ ಹಾಗೂ ನೆಹರು ಮೈದಾನಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಬಗ್ಗೆ ಪರಿಶೀಲನೆ ನಡೆಸಿದರು.
ಹಿರಿಯೂರಿನಲ್ಲಿ ಸೋಮವಾರ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ನಗರಸಭೆ ಅಧಿಕಾರಿಗಳೊಂದಿಗೆ ತಾಲ್ಲೂಕು ಕ್ರೀಡಾಂಗಣ ಹಾಗೂ ನೆಹರು ಮೈದಾನಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಬಗ್ಗೆ ಪರಿಶೀಲನೆ ನಡೆಸಿದರು.   

ಹಿರಿಯೂರು: ‘ನಗರದ ಹುಳಿಯಾರು ರಸ್ತೆಯಲ್ಲಿರುವ ತಾಲ್ಲೂಕು ಕ್ರೀಡಾಂಗಣಕ್ಕೆ ಯುವಜನ ಮತ್ತು ಕ್ರೀಡಾ ಇಲಾಖೆಯಿಂದ ₹ 2 ಕೋಟಿ ಅನುದಾನ ಮಂಜೂರು ಮಾಡಿಸಲಾಗಿದೆ’ ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ತಿಳಿಸಿದರು.

ತಾಲ್ಲೂಕು ಕ್ರೀಡಾಂಗಣ ಹಾಗೂ ನಗರದಲ್ಲಿರುವ ನೆಹರೂ ಮೈದಾನಗಳಿಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ತಾಲ್ಲೂಕು ಕ್ರೀಡಾಂಗಣದಲ್ಲಿ ಡಾರ್ಮೆಟರಿ ಕೊಠಡಿಗಳು, ಶೌಚಾಲಯ, ಸುರಕ್ಷಿತ ಕೊಠಡಿಗಳು, ಕೊಕ್ಕೊ ಅಂಕಣ, ರಸ್ತೆ ಅಭಿವೃದ್ಧಿ, ವಿದ್ಯುತ್ ಸಂಪರ್ಕ, ಹೈಮಾಸ್ಟ್ ದೀಪಗಳನ್ನು ಅಳವಡಿಸುವುದು ಮತ್ತು ನೆಹರೂ ಮೈದಾನದ ಸುತ್ತ ಕಾಂಪೌಂಡ್ ನಿರ್ಮಾಣ, ರಂಗಮಂದಿರದ ಆಧುನೀಕರಣ, ನೀರಿನ ವ್ಯವಸ್ಥೆ, ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಸಲು ಅಂದಾಜು ಪಟ್ಟಿ ತಯಾರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಶೀಘ್ರದಲ್ಲಿಯೇ ಎರಡೂ ಮೈದಾನಗಳ ಕಾಯಕಲ್ಪ ಮಾಡಲಾಗುವುದು’ ಎಂದರು.

ADVERTISEMENT

‘ನಗರದಲ್ಲಿ ಸುಸಜ್ಜಿತ ಕ್ರೀಡಾಂಗಣ ಇಲ್ಲದಿರುವ ಪ್ರಯುಕ್ತ ಕ್ರೀಡಾಪಟುಗಳ ಅಭ್ಯಾಸಕ್ಕೆ ತೊಂದರೆ ಆಗಿದೆ. ಅಥ್ಲೆಟಿಕ್ಸ್ ಹಾಗೂ ಗುಂಪು ಆಟಗಳಿಗೆ ಬೇಕಿರುವ ಅಂಕಣಗಳನ್ನು ನಿರ್ಮಿಸಿ ಕೊಡಲಾಗುವುದು. ಕಬಡ್ಡಿ, ಕೊಕ್ಕೊ ಹಾಗೂ ಅಥ್ಲೆಟಿಕ್ಸ್ ನಲ್ಲಿ ಇಲ್ಲಿನ ಕ್ರೀಡಾಪಟುಗಳು ರಾಷ್ಟ್ರೀಯ–ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಸೌಲಭ್ಯಗಳ ಕೊರತೆಯಿಂದ ಕ್ರೀಡಾಪಟುಗಳು ಬೇರೆ ರಾಜ್ಯಕ್ಕೆ ವಲಸೆ ಹೋಗುವುದನ್ನು ತಪ್ಪಿಸಲು ಒತ್ತು ನೀಡಲಾಗುವುದು’ ಎಂದು ಅವರು ತಿಳಿಸಿದರು.

ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ, ನಗರಸಭೆ ಪೌರಾಯುಕ್ತ ಉಮೇಶ್, ಎಂಜಿನಿಯರ್ ಶಿವಪ್ರಕಾಶ್, ಕ್ರೀಡಾತರಬೇತುದಾರ ಬಾಬು, ನಗರಸಭೆ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್, ಕಬಡ್ಡಿ ಶ್ರೀನಿವಾಸ್, ಚಿರಂಜೀವಿ, ಪಲ್ಲವ, ಸರವಣನ್, ಸಂದೀಪ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.