ಹಿರಿಯೂರು: ‘ದೇಶದಲ್ಲಿ ಕೃಷಿ ಮತ್ತು ತೋಟಗಾರಿಕೆ ಜೀವಂತವಾಗಿ ಉಳಿಯಬೇಕೆಂದರೆ ಯುವ ಪೀಳಿಗೆ ಈ ಕ್ಷೇತ್ರಗಳ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು. ಹೊಸ ಹೊಸ ಆವಿಷ್ಕಾರಗಳಿಗಾಗಿ ಕೃಷಿ ಮತ್ತು ತೋಟಗಾರಿಕೆ ಪದವಿ ವ್ಯಾಸಂಗ ಮಾಡುವಂತೆ’ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ನಗರದ ತುಳಸಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರಿನ ತೋಟಗಾರಿಕಾ ಮಹಾವಿದ್ಯಾಲಯ ಹಾಗೂ ಚಿತ್ರದುರ್ಗದ ಪದವಿ ಪೂರ್ವ ಶಿಕ್ಷಣ ಇಲಾಖೆ ನೇತೃತ್ವದಲ್ಲಿ ಆಯೋಜಿಸಿದ್ದ ಕೃಷಿ ಶಿಕ್ಷಣ ಸುಗ್ಗಿ- 2025 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಕೃಷಿ, ತೋಟಗಾರಿಕೆ ಹಾಗೂ ಸಂಬಂಧಿಸಿದ ಕೋರ್ಸ್ಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಿದ್ದು, ಪ್ರತಿಯೊಬ್ಬರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಗ್ರಾಮೀಣ ಭಾಗದ ರೈತರ ಮಕ್ಕಳಿಗೆ ಹೆಚ್ಚು ಅನುಕೂಲವಾಗಲಿ ಎಂಬ ಕಾರಣಕ್ಕೆ 2010ರಲ್ಲಿ ತೋಟಗಾರಿಕೆ ಕಾಲೇಜು ಆರಂಭಿಸಿದ್ದು, ನನ್ನ ಒತ್ತಾಸೆಯ ಪರಿಣಾಮ ವಿದ್ಯಾಲಯದಲ್ಲಿ 2024ರಿಂದ ಬಿ.ಎಸ್ಸಿ ಕೃಷಿ ಪದವಿ ಆರಂಭಿಸಲಾಗಿದೆ. ಕಾಲೇಜಿನ ಅಭಿವೃದ್ಧಿಗೆ ₹ 50 ಲಕ್ಷ ಅನುದಾನ ನೀಡಿದ್ದು, ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಕ್ರೀಡೆಯಲ್ಲೂ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬೇಕು’ ಎಂದು ಸಚಿವರು ತಿಳಿಸಿದರು.
ಶಿವಮೊಗ್ಗ ಕೆ.ಶಿ.ನಾ.ಕೃ.ತೋ.ವಿ.ವಿ. ಕುಲಪತಿ ಆರ್.ಸಿ.ಜಗದೀಶ್, ವಿ.ವಿ ಆಡಳಿತ ಮಂಡಳಿ ಸದಸ್ಯ ಪಿ.ಕೆ.ಬಸವರಾಜ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ ಸುಮಾರು 1,200 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ತೋಟಗಾರಿಕೆ ಮಹಾವಿದ್ಯಾಲಯದ ಮುಖ್ಯಸ್ಥ ಡಾ.ಸುರೇಶ್ ಡಿ ಏಕಬೋಟೆ, ಡಾ.ಬಿ.ಕೆ.ಕುಮಾರಸ್ವಾಮಿ, ಡಾ.ಕೆ.ಸಿ.ಶಶಿಧರ್, ಪಿಯು ಉಪನಿರ್ದೇಶಕ ಕೆ.ತಿಮ್ಮಯ್ಯ, ಸಹಪ್ರಾಧ್ಯಾಪಕ ಡಾ.ರವೀಶ್, ಡಾ.ಪ್ರೀತಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.