
ಚಿತ್ರದುರ್ಗ: ಬಿಸಿಯೂಟ ತಯಾರಕರಿಗೆ ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ) ಜಿಲ್ಲಾ ಘಟಕ ಸೋಮವಾರ ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 23 ವರ್ಷಗಳಿಂದಲೂ ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ ಬಂಡತನ ಪ್ರದರ್ಶಿಸುತ್ತಿದೆ ಎಂದು ಕಿಡಿಕಾರಿದರು.
ಬಿಸಿಯೂಟ ತಯಾರಕರು ಕನಿಷ್ಟ ವೇತನ, ಜೀವನ ಭದ್ರೆತೆಯಿಲ್ಲದೆ ದುಡಿಯುತ್ತಿದ್ದಾರೆ. ಸಂಜೆ ನಾಲ್ಕು ಗಂಟೆವರೆಗೆ ಕೆಲಸ ಮಾಡಿ ತಿಂಗಳಿಗೆ ₹ 500 ವೇತನ ಹೆಚ್ಚಾಗಿ ನೀಡುತ್ತವೆ ಎಂದು ಹೇಳಿರುವುದು ನಾಚಿಕೆಗೇಡಿನ ಸಂಗತಿ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ತೊಡಗಿದ ಶಿಕ್ಷಕರಿಗೆ ₹ 20 ಸಾವಿರ ನೀಡುತ್ತಿರುವ ಸರ್ಕಾರ ಅವರ ಜತೆಗೇ ಹೋಗುವ ಅಂಗನವಾಡಿ ಕಾರ್ಯಕರ್ತರಿಗೆ ಯಾವುದೇ ಭತ್ಯೆ ನೀಡುತ್ತಿಲ್ಲ ಎಂದು ದೂರಿದರು.
ಜಿಲ್ಲೆಯ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆಯಿದೆ ಎಂದು ಬಿಸಿಯೂಟ ತಯಾರಕರನ್ನು ಕೆಲಸದಿಂದ ತೆಗೆಯಲಾಗುತ್ತಿದೆ. ಹಾಜರಾತಿ ಹೆಚ್ಚಿರುವ ಶಾಲೆಗಳಲ್ಲಿ ಬಿಸಿಯೂಟ ತಯಾರಕರು ಇಬ್ಬರು ಇಲ್ಲವೇ ಮೂವರಿದ್ದಾರೆ. ಕೆಲವು ಶಾಲೆಗಳಲ್ಲಿ ಬಿಸಿಯೂಟ ತಯಾರಕರನ್ನು ಶೌಚಾಲಯ ಸ್ವಚ್ಚಗೊಳಿಸಲು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಜಿ.ಸಿ. ಸುರೇಶ್ ಬಾಬು, ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಆರ್. ಉಮಾಪತಿ, ಮುಖಂಡ ವಿಜಯ ಕುಮಾರ್, ಮುಖಂಡರಾದ ಕೆ.ಈ. ಸತ್ಯಕೀರ್ತಿ, ಫರ್ವಿನ್ ಬಾನು, ಕಾಂತಮ್ಮ, ರಜೀಯಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.