ಮೊಳಕಾಲ್ಮುರು: ಶೈಕ್ಷಣಿಕವಾಗಿ ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಮೊಳಕಾಲ್ಮುರು ತಾಲ್ಲೂಕು ಈಚಿನ ವರ್ಷಗಳಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ಪಡೆಯುತ್ತಿರುವುದು ಶ್ಲಾಘನೀಯ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದರು.
ಮೊರಾರ್ಜಿ ದೇಸಾಯಿ ಶಾಲೆ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಪುರಸ್ಕಾರ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಅನೇಕ ಶೈಕ್ಷಣಿಕ ಯೋಜನೆಗಳನ್ನು ಜಾರಿ ಮಾಡಿದೆ. ಇವುಗಳ ಬಗ್ಗೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಮೂಲಕ ಸದುಪಯೋಗ ಮಾಡಿಕೊಳ್ಳಲು ಸಹಕಾರ ನೀಡಬೇಕು. ಪಟ್ಟಣದಲ್ಲಿ ₹ 1.39 ಕೋಟಿ ವೆಚ್ಚದಲ್ಲಿ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಟ್ಟಡ ಮಂಜೂರಾಗಿದ್ದು ಕಾಮಗಾರಿ ಆರಂಭವಾಗಲಿದೆ ಎಂದರು.
ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಮೊಳಕಾಲ್ಮುರು ತಾಲ್ಲೂಕು ಶೇ 95.9ರಷ್ಟು ಫಲಿತಾಂಶ ಪಡೆಯುವ ಮೂಲಕ ಜಿಲ್ಲೆಯಲ್ಲಿ 2ನೇ ಸ್ಥಾನದಲ್ಲಿದೆ. 79 ವಿದ್ಯಾರ್ಥಿಗಳು 600ಕ್ಕೂ ಹೆಚ್ಚು ಆಂಕಗಳನ್ನು ಗಳಿಸಿದ್ದು ಅವರನ್ನು ಇಂದು ಪುರಸ್ಕರಿಸಲಾಗುತ್ತಿದೆ ಎಂದುಡಿಡಿಪಿಐ ರವಿ ಶಂಕರರೆಡ್ಡಿ ಹೇಳಿದರು.
ಇದೇ ವೇಳೆ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ ಹಾಗೂ ಕೌಶಲಾಭಿವೃದ್ಧಿ ತರಬೇತಿ ನೀಡಲಾಯಿತು. ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನೀಕೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್. ವೆಂಕಟೇಶಪ್ಪ, ಪ್ರಾಂಶುಪಾಲ ನಾಗರಾಜ್, ಉಪ ಪ್ರಾಂಶುಪಾಲ ಎಂ. ಮಲ್ಲಿಕಾರ್ಜುನ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ಈರಣ್ಣ, ಸಂಯೋಜಕ ಓಂಕಾರಪ್ಪ, ಸಮನ್ವಯ ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎತ್ನಟ್ಟಿಗೌಡ, ಸಂಪನ್ಮೂಲ ವ್ಯಕ್ತಿ ವೈ.ಎ. ಪ್ರಶಾಂತ್
ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.