ADVERTISEMENT

ಆಶಾ ಕಾರ್ಯಕರ್ತೆಯರಿಂದ ಮನೆಯಲ್ಲೇ ರೋಗ ಪತ್ತೆ

‘ಗೃಹ ಆರೋಗ್ಯ’ ಯೋಜನೆಗೆ ಚಾಲನೆ; ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಅಭಿಮತ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2025, 5:37 IST
Last Updated 5 ಆಗಸ್ಟ್ 2025, 5:37 IST
ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ‘ಗೃಹ ಆರೋಗ್ಯ’ ತರಬೇತಿ ಕಾರ್ಯಾಗಾರದಲ್ಲಿ  ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು
ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ‘ಗೃಹ ಆರೋಗ್ಯ’ ತರಬೇತಿ ಕಾರ್ಯಾಗಾರದಲ್ಲಿ  ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು   

ಚಿತ್ರದುರ್ಗ: ‘ಮನೆಯ ಹಂತದಲ್ಲೇ ರೋಗ ಪತ್ತೆ ಹೆಚ್ಚುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಗೃಹ ಆರೋಗ್ಯ’ ಯೋಜನೆ ಜಾರಿಗೊಳಿಸಿದೆ. ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡಿ ಪ್ರಾಥಮಿಕ ಹಂತದಲ್ಲಿಯೇ ರೋಗ ಗುರುತಿಸಿ ಶೀಘ್ರ ಚಿಕಿತ್ಸೆ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಗೃಹ ಆರೋಗ್ಯ ಯೋಜನೆ ಕುರಿತಂತೆ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಕೇಂದ್ರದ ಸಹಾಯಕಿಯರಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಕಾಯಿಲೆಗಳನ್ನು ಪ್ರಾಥಮಿಕ ಹಂತದಲ್ಲೇ ಗುರುತಿಸುವ ಕೆಲಸವಾಗಬೇಕು. ಕೈಮೀರಿ ಹೋದನಂತರ ಯಾವುದೇ ಅತ್ಯಾಧುನಿಕ ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗುವುದಿಲ್ಲ. ಜನಸಾಮಾನ್ಯರನ್ನು ರೋಗಗಳಿಂದ ಪಾರುಮಾಡುವ ಸಲುವಾಗಿ ಸರ್ಕಾರ ಉತ್ತಮ ಯೋಜನೆ ಜಾರಿಗೊಳಿಸಿದೆ. ಕಳೆದ ವರ್ಷ ಪ್ರಾಯೋಗಿಕವಾಗಿ ಕೋಲಾರ ಜಿಲ್ಲೆಯಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಅಲ್ಲಿ ಯಶಸ್ವಿಯಾದ ಕಾರಣ ಸರ್ಕಾರ ರಾಜ್ಯದಾದ್ಯಂತ ವಿಸ್ತರಿಸಿದೆ’ ಎಂದರು.

ADVERTISEMENT

‘ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್ ಸೇರಿದಂತೆ 14 ಬಗೆಯ ರೋಗ ಪತ್ತೆಹಚ್ಚುವ ಕಾರ್ಯಕ್ರಮ ಜಾರಿಗೊಳಿಸಿದೆ. ಜಿಲ್ಲೆಯಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳಿಸುವಲ್ಲಿ ಆಶಾ ಕಾರ್ಯಕರ್ತೆಯರ ಜವಾಬ್ದಾರಿ ಹೆಚ್ಚು ಇದೆ. ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡಿ, ಆರೋಗ್ಯ ಇಲಾಖೆ ನಿಗದಿಪಡಿಸಿರುವ ಪ್ರಶ್ನಾವಳಿಗಳು, ರೋಗ ಲಕ್ಷಣಗಳ ಮೂಲಕ ರೋಗಗಳನ್ನು ಪತ್ತೆ ಹಚ್ಚಿ, ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲು ನೆರವಾಗಬೇಕು’ ಎಂದರು.

ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ ‘ಕಾಯಿಲೆ ಉಲ್ಭಣಗೊಳ್ಳುವುದಕ್ಕೂ ಮುನ್ನ ಗುರುತಿಸಬೇಕು. ಗ್ರಾಮಗಳಲ್ಲಿ ಆರೋಗ್ಯ ಸೇವೆ, ತಪಾಸಣೆ, ಚಿಕಿತ್ಸೆ ಪಡೆಯುವ ಬಗ್ಗೆ ಜಾಗೃತಿಯ ಕೊರತೆ ಇದೆ. ಇಂತಹ ಸಂದರ್ಭದಲ್ಲಿ ಗೃಹ ಆರೋಗ್ಯ ಯೋಜನೆ ಜಾರಿಗೊಳಿಸಿರುವುದು ಶ್ಲಾಘನೀಯವಾಗಿದೆ. ರಾಜ್ಯದಲ್ಲಿ ಗೃಹ ಆರೋಗ್ಯ ಯೋಜನೆ ಮೂಲಕ ಲಕ್ಷಾಂತರ ಜನರ ಜೀವ ಉಳಿಸುವ ಕಾರ್ಯ ಈ ಯೋಜನೆಯಿಂದ ಆಗಬೇಕು. ಈ ಯೋಜನೆ ಕೇವಲ ಸಾಂಕೇತಿಕವಾಗಿ, ದಾಖಲೆಗಾಗಿ ಮಾತ್ರ ಆಗದೇ ಪ್ರಾಯೋಗಿಕವಾಗಿ ಯಶಸ್ವಿಯಾಗಬೇಕು’ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ‘ 30 ವರ್ಷ ವಯಸ್ಸಿಗೆ ಮೇಲ್ಪಟ್ಟವರಲ್ಲಿ ಅಧಿಕ ರಕ್ತದೊತ್ತಡ, ಮಧುಮೇಹ, ಮಧುಮೇಹ ಸಂಬಂಧಿತ ಪಾದದ ಸಮಸ್ಯೆ, ಕಣ್ಣಿನ ಸಮಸ್ಯೆ, ಮೂತ್ರಪಿಂಡ ಕಾಯಿಲೆ, ಲಿವರ್, ಯಕೃತ್ತಿನ ಕಾಯಿಲೆ, ಶ್ವಾಸಕೋಶ ಸಂಬಂಧಿತ ಕಾಯಿಲೆ, ನಿದ್ರೆಯಲ್ಲಿ ಉಸಿರುಗಟ್ಟುವಿಕೆ, ಬಾಯಿ, ಸ್ತನ, ಗರ್ಭ ಕಂಠದ ಕ್ಯಾನ್ಸರ್, ರಕ್ತಹೀನತೆ, ಮಾನಸಿಕ ಕಾಯಿಲೆ, ನರವೈಜ್ಞಾನಿಕ ಕಾಯಿಲೆ ಸೇರಿದಂತೆ ಒಟ್ಟು 14 ಬಗೆಯ ರೋಗಗಳನ್ನು ಪತ್ತೆಹಚ್ಚುವ ಕಾರ್ಯ ಈ ಯೋಜನೆಯಲ್ಲಿ ನಡೆಯಲಿದೆ’ ಎಂದರು.

‘ಜಿಲ್ಲೆಯಲ್ಲಿ 30 ವರ್ಷ ಮೇಲ್ಪಟ್ಟ ಸುಮಾರು 6.59 ಲಕ್ಷ ಜನರ ಆರೋಗ್ಯ ತಪಾಸಣೆ ಮಾಡುವ ಗುರಿ ಹೊಂದಲಾಗಿದೆ. ರಾಜ್ಯದಲ್ಲಿ ಶೇ. 25 ರಷ್ಟು ಜನರಲ್ಲಿ ರಕ್ತದೊತ್ತಡ, ಶೇ. 14 ರಷ್ಟು ಜನರಲ್ಲಿ ಮಧುಮೇಹ ಇರುವುದು ಅಂಕಿ ಅಂಶಗಳಿಂದ ತಿಳಿದುಬಂದಿದೆ. ಜಿಲ್ಲೆಯಲ್ಲಿ ರೋಗಗಳ ಪತ್ತೆಗಾಗಿ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ತರಬೇತಿ ನೀಡಲಾಗುತ್ತಿದೆ’ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್‍ಪೀರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಆರ್. ಶಿವಣ್ಣ, ಜಿ.ಪಂ ಸಿಇಒ ಎಸ್.ಆಕಾಶ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾದ್ಯಕ್ಷ ಡಿ.ಎನ್. ಮೈಲಾರಪ್ಪ, ಜಿ.ಪಂ. ಉಪಕಾರ್ಯದರ್ಶಿ ರಂಗಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಂಬಾಳಿಮಠ ಇದ್ದರು.

ಜಿ.ಪಂ ಆವರಣದಲ್ಲಿ ಅಕ್ಕ ಕೆಫೆ ಉದ್ಘಾಟಿಸಿದ ನಂತರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಅವರು ಉಪ್ಪಿಟ್ಟು ಸವಿದರು

ಅಕ್ಕಾ ಕೆಫೆ; ಉಪ್ಪಿಟ್ಟು ಸವಿದ ಸಚಿವ

ಚಿತ್ರದುರ್ಗ: ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್‍ಆರ್‍ಎಲ್‍ಎಂ)-ಸಂಜೀವಿನಿ ವತಿಯಿಂದ ನೂತನವಾಗಿ ಆರಂಭಿಸಲಾಗಿರುವ ‘ಅಕ್ಕ ಕೆಫೆ’ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಚಾಲನೆ ನೀಡಿದರು. ಸಚಿವರು ಕೆಫೆಯಲ್ಲಿ ಉಪ್ಪಿಟ್ಟು ಸಿರಿಧಾನ್ಯಗಳ ಬಾತ್ ಕಾಫಿ ಸವಿದು ರುಚಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಅವರು ‘ಮುಖ್ಯಮಂತ್ರಿಗಳು ಬಜೆಟ್‍ನಲ್ಲಿ ಅಕ್ಕ ಕೆಫೆ ಆರಂಭಿಸುವ ಯೋಜನೆ ಘೋಷಿಸಿದ್ದರು. 2024 ಮಾರ್ಚ್‌ 8ರಂದು ರಾಜ್ಯದಲ್ಲಿ ಮೊದಲ ಅಕ್ಕ ಕೆಫೆಗೆ ಚಾಲನೆ ನೀಡಲಾಗಿತ್ತು. ನಂತರ ರಾಜ್ಯದ ಇತರೆಡೆ ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳ ನಿರ್ವಹಣೆಯಲ್ಲಿ ಆರಂಭಿಸಿದ ಅಕ್ಕ ಕೆಫೆಗಳು ಯಶಸ್ವಿಯಾಗಿವೆ. ಸಂಪೂರ್ಣವಾಗಿ ಮಹಿಳೆಯರಿಂದಲೇ ಅಕ್ಕ ಕೆಫೆ ಕಾರ್ಯನಿರ್ವಹಿಸುತ್ತವೆ. ಶುಚಿ ಮತ್ತು ರುಚಿಯಾದ ಆಹಾರವನ್ನು ಸಾರ್ವಜನಿಕರು ಅಕ್ಕ ಕೆಫೆಯಲ್ಲಿ ಸವಿಯಬಹುದು. ಮುಂದಿನ ದಿನಗಳಲ್ಲಿ ಜಿಲ್ಲೆಯ ಇತರೆಡೆ ಅಕ್ಕ ಕೆಫೆಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ’ ಎಂದರು. ಜಿ.ಪಂ ಸಿಇಒ ಆಕಾಶ್ ಮಾತನಾಡಿ ‘ಕಡಿಮೆ ಬೆಲೆಯಲ್ಲಿ ಜನರಿಗೆ ಮನೆ ರುಚಿಯ ಅನುಭೂತಿ ದೊರೆಯಲಿದೆ. ರಾಸಾಯನಿಕ ಬಣ್ಣ ಕೃತಕ ರುಚಿಕಾರಕಗಳನ್ನು ಅಕ್ಕ ಕೆಫೆಯಲ್ಲಿ ಬಳಸುವುದಿಲ್ಲ. ಶುಚಿ ಮತ್ತು ಆರೋಗ್ಯಕರ ಆಹಾರ ನೀಡುವುದು ಅಕ್ಕ ಕೆಫೆ ಉದ್ದೇಶವಾಗಿದೆ. ಜಿಲ್ಲೆಯಲ್ಲಿ ಸಿರಿಧಾನ್ಯಗಳನ್ನು ಹೆಚ್ಚಾಗಿ ಬೆಳೆಯುತ್ತಿದ್ದು ಪ್ರತಿದಿನವು ಸಿರಿಧಾನ್ಯಗಳ ಖಾದ್ಯ ಅಕ್ಕ ಕೆಫೆಯಲ್ಲಿ ದೊರೆಯುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.