ಚಳ್ಳಕೆರೆ: ‘ರಾಜ್ಯ, ಕೇಂದ್ರದಲ್ಲಿ ಬಿಜೆಪಿ ಆಡಳಿತದಲ್ಲಿ ಇರುವ ಕಾರಣ ಕೋವಿಡ್ನಿಂದ ದೇಶ ಸುರಕ್ಷಿತವಾಗಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಆಡಳಿತ ಇದ್ದಿದ್ದರೆ ದೇಶ ಅಧೋಗತಿಗೆ ಇಳಿಯುತ್ತಿತ್ತು’ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಆರೋಪಿಸಿದರು.
ನಗರದ ಬಸವೇಶ್ವರ ಕಲ್ಯಾಣಮಂಟಪದಲ್ಲಿ ಸೋಮವಾರ ನಡೆದ ವಿಧಾನಪರಿಷತ್ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಇದನ್ನು ಪ್ರತಿಯೊಬ್ಬರೂ ಸರಿಯಾಗಿ ಅರ್ಥ ಮಾಡಿಕೊಳ್ಳುವುದರ ಮೂಲಕ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಬೇಕು’ಎಂದು ಮನವಿ ಮಾಡಿದರು.
ಬಿಟ್ ಕಾಯಿನ್ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಆಡಳಿತದಿಂದ ನಡೆಯಲಿರುವ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಕಾಂಗ್ರೆಸ್ ದೂಳಿಪಟ ಆಗಲಿದೆ’ ಎಂದರು.
ಪಕ್ಷದ ನಿಷ್ಠೆ, ಹಿಂದುಳಿದ ಸಮುದಾಯಗಳ ಪರ ಹೋರಾಟ ನಡೆಸಿಕೊಂಡು ಧರ್ಮದ ಹಾದಿಯಲ್ಲಿ ನಡೆಯುತ್ತಿರುವ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ಕಟೀಲ್ ಅವರ ಬಗ್ಗೆ ಲಘುವಾಗಿ ಮಾತನಾಡುವ ಪ್ರವೃತ್ತಿಯನ್ನು ಸಿದ್ದರಾಮಯ್ಯಕೈ ಬಿಡಬೇಕು.ಕೆಲವರನ್ನು ರಾಜಕೀಯವಾಗಿ ತುಳಿಯಲು ಮತ್ತು ಯಾರದ್ದೋ ಮತ ಓಲೈಕೆಗಾಗಿ ಬಿಜೆಪಿಯನ್ನು ದೂರುವುದರ ಮೂಲಕ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಸರಿಯಲ್ಲ ಎಂದು ಹೇಳಿದರು.
ಬಿಜೆಪಿ ಅಭ್ಯರ್ಥಿ ಕೆ.ಎಸ್. ನವೀನ್, ಶಾಸಕರಾದ ಪೂರ್ಣಿಮಾ ಶ್ರೀನಿವಾಸ್, ಎನ್.ವೈ. ಗೋಪಾಲಕೃಷ್ಣ, ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿದರು.
ನಗರಸಭೆ ಸದಸ್ಯ ಜಯಣ್ಣ, ಮೋಹನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಲುವೆಹಳ್ಳಿ ಜಯಪಾಲಯ್ಯ, ಕಾಲುವೆಹಳ್ಳಿ ಶ್ರೀನಿವಾಸ್, ಬಿ.ಎಸ್.ಶಿವಪುತ್ರಪ್ಪ, ಬಾಳೆಹಣ್ಣಿನ ಮಂಡಿ ರಾಮದಾಸ್, ಸೂರನಹಳ್ಳಿ ಶ್ರೀನಿವಾಸ್, ಪಕ್ಷದ ಮುಖಂಡ ಮಾತೃಶ್ರೀ ಮಂಜುನಾಥ್, ಜಿ.ಕೆ.ಈರಣ್ಣ, ತಿಪ್ಪೇಸ್ವಾಮಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.