
ಹೊಳಲ್ಕೆರೆ: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ತ್ವರಿತವಾಗಿ ಕಾರ್ಯಗತಗೊಳಿಸಲು ಸರ್ಕಾರದ ಮೇಲೆ ಒತ್ತಡ ತರುವಂತೆ ಫೆ. 16 ರಂದು ಸಿರಿಗೆರೆಯ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ರೈತಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಎಸ್. ಹಳ್ಳಿ ಮಲ್ಲಿಕಾರ್ಜುನ್ ತಿಳಿಸಿದರು.
ಪಟ್ಟಣದಲ್ಲಿ ನಡೆದ ರೈತಸಂಘದ ಸಭೆಯಲ್ಲಿ ಮಾತನಾಡಿದರು.
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ₹ 60,000 ಕೋಟಿ ವ್ಯಯ ಮಾಡುತ್ತಿದೆ. ಆದರೆ ಭದ್ರಾ ಮೇಲ್ದಂಡೆ ಯೋಜನೆಗೆ ಯಾವುದೇ ಅನುದಾನ ನೀಡುತ್ತಿಲ್ಲ. ಮಾರ್ಚ್ 1 ರಂದು ನಡೆಯಲಿರುವ ರಾಜ್ಯ ಬಜೆಟ್ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ₹ 5,000 ಕೋಟಿ ಮೀಸಲಿಡಬೇಕು. ತಾಲ್ಲೂಕಿನ ಜಮೀನುಗಳಿಗೆ ಹನಿ ನೀರಾವರಿ ಯೋಜನೆಯನ್ನು ಜಾರಿಗೊಳಬೇಕು ಎಂದು ಸರ್ಕಾರವನ್ನು ಆಗ್ರಹಿಸುವಂತೆ ಮನವಿ ಮಾಡಲಾಗುವುದು ಎಂದರು.
‘ಚಿತ್ರದುರ್ಗ ಜಿಲ್ಲೆಗೆ ಸಮಗ್ರ ನೀರಾವರಿ ಜಾರಿಯಾದರೆ ರೈತರ ಬದುಕು ಹಸನಾಗುತ್ತದೆ. ಬರದ ನಾಡು ಹಸಿರಿನಿಂದ ಕಂಗೊಳಿಸುತ್ತದೆ. ರಾಜಕಾರಣಿಗಳಿಗೆ ಇಚ್ಛಾಶಕ್ತಿ ಇದ್ದರೆ ಯೋಜನೆ ಶೀಘ್ರ ಜಾರಿಯಾಗುತ್ತದೆ’ ಎಂದು ರೈತಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ನಿಜಲಿಂಗಪ್ಪ ತಿಳಿಸಿದರು.
ಜಿಲ್ಲೆಯಲ್ಲಿ 2025ನೇ ಸಾಲಿನಲ್ಲಿ ನಷ್ಟ ಅನುಭವಿಸಿರುವ ರೈತರಿಗೆ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಹಣ ಇದುವರೆಗೆ ಬಂದಿಲ್ಲ. 2022 ರಿಂದ ಅಕ್ರಮ–ಸಕ್ರಮ ಯೋಜನೆಯಡಿ ಹಣ ಪಾವತಿಸಿರುವ ರೈತರಿಗೆ ಟ್ರಾನ್ಸ್ ಫಾರ್ಮರ್ ನೀಡಿಲ್ಲ. ತಾಲ್ಲೂಕು ಕಚೇರಿಯಲ್ಲಿ ಹಣ ನೀಡದೆ ಯಾವುದೇ ಕೆಲಸ ನಡೆಯುತ್ತಿಲ್ಲ. ಈ ಬಗ್ಗೆ ಮುಂದಿನ ದಿನಗಳಲ್ಲಿ ಹೋರಾಟ ಮಾಡುವ ಕುರಿತು ಚರ್ಚಿಸಲಾಯಿತು.
ರೈತಸಂಘದ ಜಿಲ್ಲಾ ಕಾರ್ಯದರ್ಶಿ ಬಾಗೇನಾಳ ತಿಪ್ಪೇಸ್ವಾಮಿ, ತಾಲ್ಲೂಕು ಘಟಕದ ಅಧ್ಯಕ್ಷ ಶಿವಕುಮಾರ್ ಆಡನೂರು, ಗೌರವಾಧ್ಯಕ್ಷ ಮೋಹನ್, ಕಾರ್ಯದರ್ಶಿ ನವೀನ್, ಕಾಂತರಾಜ, ನಗರ ಘಟಕದ ಅಧ್ಯಕ್ಷ ಎಸ್. ಸಿದ್ದರಾಮಪ್ಪ, ಚಿತ್ರದುರ್ಗ ತಾಲ್ಲೂಕು ಘಟಕದ ಅಧ್ಯಕ್ಷ ರಮೇಶ್, ರುದ್ರೇಶ್, ಮಲ್ಲಿಕಾರ್ಜುನ, ಡಿ.ಕಲ್ಲವ್ವ ನಾಗತಿಹಳ್ಳಿ, ಬಗರ್ ಹುಕುಂ ತಾಲ್ಲೂಕು ಘಟಕದ ಅಧ್ಯಕ್ಷ ರಾಮಚಂದ್ರಪ್ಪ, ಸಂತೋಷ್ ಮಲ್ಲಾಡಿಹಳ್ಳಿ, ಸಿದ್ದರಾಮಪ್ಪ, ಅಣ್ಣಪ್ಪ, ಸನಾವುಲ್ಲ, ಕುಮಾರಚಾರಿ, ಶಿವಮೂರ್ತಿ, ಕಲ್ಯಾಣಿ ಲೋಕಪ್ಪ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.