
ಚಿತ್ರದುರ್ಗ: ‘ಜಿಲ್ಲೆಯ ಜನರ ಕನಸಾಗಿರುವ ಭದ್ರಾ ನೀರನ್ನು ಮಾರ್ಚ್ ಅಂತ್ಯದೊಳಗೆ ಪ್ರಾಯೋಗಿಕವಾಗಿ ಹರಿಸಲಾಗುತ್ತದೆ. ಜೊತೆಗೆ ಯೋಜನೆಗೆ ಅಗತ್ಯ ಅನುದಾನ ಬಿಡುಗಡೆಗೆ ಕೋರಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗಿದೆ’ ಎಂದು ಶಾಸಕ ಟಿ. ರಘುಮೂರ್ತಿ ತಿಳಿಸಿದರು.
ಇಲ್ಲಿನ ಜಿಲ್ಲಾ ತೋಟಗಾರಿಕೆ ಕಚೇರಿ ಆವರಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಫಲ–ಪುಷ್ಪ ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
‘ಭದ್ರಾ ಯೋಜನೆಯಿಂದ ಕೆರೆಗಳಿಗೆ ನೀರು ಹರಿಯುವುದರಿಂದ ರೈತರಿಗೆ ಉತ್ತಮ ಬೆಳೆ ಬೆಳೆಯಲು ಸಹಕಾರಿಯಾಗಲಿದೆ. ಶೀಘ್ರ ಬರದ ನಾಡಿಗೆ ಭದ್ರೆ ಹರಿಯಲಿದೆ’ ಎಂದರು.
‘ಜಿಲ್ಲೆಯ ಇತಿಹಾಸ, ಸಂಸ್ಕೃತಿ ಹಾಗೂ ಸಾಹಿತ್ಯ ಪರಂಪರೆಯನ್ನು ಸಾರುವಲ್ಲಿ ಫಲಪುಷ್ಪ ಪ್ರದರ್ಶನ ಯಶಸ್ವಿಯಾಗಿದೆ. ರಾಜ್ಯದ ಮತ್ತು ಜಿಲ್ಲೆಯ ಸಾಧಕರ ಪರಿಚಯವನ್ನು ಮಾಡಿಕೊಡಲಾಗಿದೆ. ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಹೊರ ಮಠ, ಒಳ ಮಠ ಸುಂದರವಾಗಿದೆ. ಇನ್ನೂ ಐತಿಹಾಸಿಕ ಒನಕೆ ಓಬವ್ವ, ಸಾಲುಮರದ ತಿಮ್ಮಕ್ಕನ ಚಿತ್ರಗಳು ಗಿಡ ಮರಗಳನ್ನು ಪ್ರೀತಿಯನ್ನು ತೋರಿಸುತ್ತಿದೆ’ ಎಂದು ತಿಳಿಸಿದರು.
‘ಮೇಳಗಳಿಂದ ರೈತರಿಗೆ ಹೊಸ ಪ್ರಯೋಗ ಮಾಡಲು ಅನುಕೂಲವಾಗಲಿದೆ. ಜಿಲ್ಲೆಯ ವಿವಿಧ ಭಾಗಗಳಿಂದ ರೈತರು, ಮಹಿಳೆಯರು, ಮಕ್ಕಳು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಫಲ ಪುಷ್ಪ ಪ್ರದರ್ಶನ ಕಣ್ತುಂಬಿಕೊಂಡಿದ್ದಾರೆ’ ಎಂದು ಹೇಳಿದರು.
‘ಒತ್ತಡದ ಬದುಕಿನಲ್ಲಿ ಇಂತಹ ಫಲಪುಷ್ಪ ಪ್ರದರ್ಶನ ಜನರ ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಜನರಲ್ಲಿ ಫಲಪುಷ್ಪ ಪ್ರದರ್ಶನ ಸಂತಸ ಉಂಟು ಮಾಡಿದೆ’ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ತಿಳಿಸಿದರು.
ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಜಿ. ಸವಿತಾ, ಜಂಟಿ ಕಾರ್ಯದರ್ಶಿ ಗಿರೀಶ್, ಹಿರಿಯ ಸಹಾಯಕ ನಿರ್ದೇಶಕ ತೋಟಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ತಿಪ್ಪೇಸ್ವಾಮಿ, ಬಾಬುರೆಡ್ಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.