
ಭದ್ರಾ ಮೇಲ್ದಂಡೆ ಯೋಜನೆ
ಚಳ್ಳಕೆರೆ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ₹ 5,300 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಫೆ.23 ರಂದು ಸಂಸದ ಗೋವಿಂದ ಕಾರಜೋಳ ಅವರ ನಿವಾಸದ ಮುಂದೆ ಧರಣಿ ನಡೆಸಲಾಗುವುದು ಎಂದು ರೈತ ಸಂಘದ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಹೇಳಿದರು.
ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಬಜೆಟ್ನಲ್ಲಿ ಘೋಷಣೆ ಮಾಡಿದಂತೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಸಂಸದರು ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಕೂಡಲೇ ಕೇಂದ್ರ ಸರ್ಕಾರದ ಜೊತೆ ಸಂಸದ ಗೋವಿಂದ ಕಾರಜೋಳ ಮಾತನಾಡಿ ಅನುದಾನ ಬಿಡುಗಡೆಗೆ ಒತ್ತಾಯಿಸಬೇಕು. ಇಲ್ಲವೇ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಜಿಲ್ಲೆಯ ಶಾಸಕರು ರಾಜ್ಯ ಸರ್ಕಾರ ಬಜೆಟ್ನಲ್ಲಿ ₹ 5,000 ಕೋಟಿ ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸುವ ನಾಟಕ ಆಡುತ್ತಿದ್ದಾರೆ. ಶಾಸಕರು ಬರೀ ಪ್ರಚಾರ ಪಡೆದರೆ ಸಾಲದು ಅನುದಾನ ಬಿಡುಗಡೆ ಮಾಡಿಸುವ ಬದ್ದತೆ ಇರಬೇಕು ಎಂದು ಕಿಡಿ ಕಾರಿದರು.
ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ, ತಾಲ್ಲೂಕು ಘಟಕದ ಅಧ್ಯಕ್ಷ ರಾಜಣ್ಣ, ಸದಸ್ಯರಾದ ಶ್ರೀಕಂಠಮೂರ್ತಿ, ಮಹೇಶ್, ಜಿ.ಎಚ್. ಹನುಮಂತಪ್ಪ, ಸಣ್ಣ ಪಾಲಯ್ಯ, ಮೈರಾಡ ಚಂದ್ರಣ್ಣ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.