ನಾಯಕನಹಟ್ಟಿ: ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.13ರಂದು ನಡೆಯಲಿರುವ ನಾಯಕನಹಟ್ಟಿ ಬಂದ್ಗೆ ಹೋಬಳಿಯ 32 ಸಂಘಟನೆಗಳು ಬೆಂಬಲ ಸೂಚಿಸಿವೆ.
ಬುಧವಾರ ಹಟ್ಟಿಮಲ್ಲಪ್ಪನಾಯಕ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹಲವು ಸಂಘಟನೆಗಳು ಬೆಂಬಲ ಸೂಚಿಸಿದವು.
‘ಭದ್ರಾ ಮೇಲ್ದಂಡೆ ಯೋಜನೆಯು ಜಿಲ್ಲೆಯ ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕುಗಳ ಬರದ ಹಣೆಪಟ್ಟಿಯನ್ನು ಅಳಿಸಿ ಹಾಕುವ ಏಕೈಕ ಯೋಜನೆ. ಯೋಜನೆಯ ಅನುಷ್ಠಾನಕ್ಕೆ ಮತ್ತು ತುರ್ತಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೀನಮೇಷ ಎಣಿಸುತ್ತಿವೆ. ಇದನ್ನು ಖಂಡಿಸಿ ತಾಲ್ಲೂಕು ಕೇಂದ್ರಗಳಲ್ಲೂ ಬಂದ್ ನಡೆಸಲು ಯೋಜನೆಗಳು ರೂಪಿಸಲಾಗಿದೆ. 32 ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿವೆ’ ಎಂದು ನಾಯಕನಹಟ್ಟಿ ಹೋಬಳಿ ನೀರಾವರಿ ಮತ್ತು ಸಾಮಾಜಿಕ ಹೋರಾಟ ಸಮಿತಿ ಅಧ್ಯಕ್ಷ ಜಿ.ಬಿ. ಮುದಿಯಪ್ಪ ಹೇಳಿದರು.
‘ಬಂದ್ ನಂತರ ಸಿರಿಗೆರೆಯ ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಹೋಬಳಿಯ ಕೆರೆಗಳ ಸ್ಥಿತಿಯನ್ನು ತಿಳಿಸುವ ಕಾರ್ಯವಾಗಬೇಕಿದೆ. ಸ್ವಾಮೀಜಿ ಅವರನ್ನು ಭೇಟಿಯಾಗೋಣ’ ಎಂದು ಹಟ್ಟಿಮಲ್ಲಪ್ಪ ನಾಯಕ ಸಂಘದ ಅಧ್ಯಕ್ಷ ಪಟೇಲ್ ಜಿ.ಎಂ. ತಿಪ್ಪೇಸ್ವಾಮಿ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ. ಶಿವಸ್ವಾಮಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಸೈಯದ್ ಅನ್ವರ್, ಪಿ.ಓಬಯ್ಯ, ಎಸ್.ಟಿ.ಎಸ್.ಆರ್ ವಿದ್ಯಾಸಂಸ್ಥೆಯ ಅಧ್ಯಕ್ಷ ಜಿ.ಎಸ್. ಪ್ರಭುಸ್ವಾಮಿ, ಮುಖಂಡರಾದ ಬಿ.ಕಾಟಯ್ಯ, ದೊಡ್ಡಬೋರಯ್ಯ, ಗ್ರಾಮಸ್ಥರಾದ ಬಿ.ಟಿ. ಪ್ರಕಾಶ್, ಎಸ್.ಟಿ. ಬೋರಸ್ವಾಮಿ, ಎ.ಟಿ. ಚನ್ನಕೇಶವಯ್ಯ, ಪಾಲಯ್ಯ, ಮಂಜುನಾಥ್, ಟಿ. ಬಸಣ್ಣ, ದೀಪುರಾಂ, ಪುನಾರಾಂ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.