
ಚಿತ್ರದುರ್ಗ: ‘ಭೋವಿ ಅಭಿವೃದ್ಧಿ ನಿಗಮದಲ್ಲಿ ಪಾರದರ್ಶಕ ವ್ಯವಸ್ಥೆಗೆ ಕ್ರಮ ವಹಿಸಲಾಗುತ್ತಿದೆ. ಇದರ ಮೊದಲ ಹೆಜ್ಜೆಯಾಗಿ ಮಧ್ಯವರ್ತಿಗಳ ಹಾವಳಿಗೆ ಸಂಪೂರ್ಣ ಕಡಿವಾಣ ಹಾಕಲಾಗಿದೆ’ ಎಂದು ನಿಗಮದ ಅಧ್ಯಕ್ಷ ಬಿ.ರಾಮಪ್ಪ ತಿಳಿಸಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ‘ನಿಗಮದ ಯೋಜನೆಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸಲು ವ್ಯಾಪಕ ಪ್ರಚಾರ ಕೈಗೊಳ್ಳಲಾಗುತ್ತಿದೆ’ ಎಂದರು.
‘ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗುತ್ತಿದೆ. ಆಯ್ಕೆಯಾದ ಫಲಾನುಭವಿಗಳ ಖಾತೆಗೆ ನೇರವಾಗಿ ಖಜಾನೆ-2 ಮೂಲಕ ಸಹಾಯಧನ ಬಿಡುಗಡೆ ಮಾಡಲಾಗುತ್ತಿದೆ. ಎಲ್ಲಿಯೂ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ. ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಟ್ಟರೆ ನೇರವಾಗಿ ನನಗೆ ಅಥವಾ ನಿಗಮದ ವ್ಯವಸ್ಥಾಪಕರಿಗೆ ಕರೆ ಮಾಡಿ’ ಎಂದು ತಿಳಿಸಿದರು.
‘ಜಿಲ್ಲೆಯಲ್ಲಿ 2022-23ನೇ ಸಾಲಿನಿಂದ ವಿವಿಧ ಯೋಜನೆಗಳಡಿ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಬಾಕಿಯಿದೆ. ಅಧಿಕಾರಿಗಳು 15 ದಿನದ ಒಳಗಾಗಿ ಸಂಬಂಧಪಟ್ಟ ಶಾಸಕರ ಅಧ್ಯಕ್ಷತೆಯ ಸಮಿತಿಯಲ್ಲಿ ಫಲಾನುಭವಿಗಳ ಆಯ್ಕೆಗೆ ಕ್ರಮ ಕೈಗೊಳ್ಳಬೇಕು. ಫಲಾನುಭವಿಗಳ ಆಯ್ಕೆ ಬಗ್ಗೆ ನಿರ್ಲಕ್ಷ ವಹಿಸಬಾರದು. ಫಲಾನುಭವಿಗಳನ್ನು ಆಯ್ಕೆ ಮಾಡಿ ಕಲ್ಯಾಣ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಬೇಕು’ ಎಂದು ಸೂಚಿಸಿದರು.
‘ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರ 20,000 ಚದರ ಅಡಿ ಜಾಗವನ್ನು ಭೋವಿ ಅಭಿವೃದ್ಧಿ ನಿಗಮಕ್ಕೆ ನೀಡಲು ಒಪ್ಪಿದೆ. ಇದೇ ಮಾದರಿಯಲ್ಲಿ ರಾಜ್ಯದ ಇತರೆ ಜಿಲ್ಲಾ ಕೇಂದ್ರದಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ನಿಗಮಕ್ಕೆ ಜಾಗ ನೀಡುವಂತೆ ಪತ್ರ ಬರೆಯಲಾಗುವುದು. ಈ ಜಾಗದಲ್ಲಿ ಸಮುದಾಯ ಭವನ ಹಾಗೂ ನಿಗಮದ ಕಚೇರಿಗಳನ್ನು ನಿರ್ಮಾಣ ಮಾಡಲು ಚಿಂತಿಸಲಾಗಿದೆ’ ಎಂದು ಹೇಳಿದರು.
‘ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಭೋವಿ ಕಾಲೊನಿಗಳಲ್ಲಿನ ಮಹಿಳೆಯರನ್ನು ಒಗ್ಗೂಡಿಸಿ ಸ್ವ ಸಹಾಯ ಗುಂಪುಗಳನ್ನು ರಚಿಸಲು ಯೋಜನೆ ರೂಪಿಸಲಾಗಿದೆ. 10 ಜನರು ಇರುವ ಸ್ವ ಸಹಾಯ ಗುಂಪುಗಳಿಗೆ ಪ್ರೇರಣಾ ಯೋಜನೆಯಡಿ ಕಿರುಸಾಲ ನೀಡಲಾಗುವುದು’ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಂದ್ರಾನಾಯ್ಕ್ ತಿಳಿಸಿದರು.
ಸಭೆಯಲ್ಲಿ ನಿಗಮದ ಯೋಜನೆಗಳ ಅನುಷ್ಠಾನದಲ್ಲಿನ ತೊಂದರೆ ಹಾಗೂ ಸಮಸ್ಯೆಗಳ ಕುರಿತು ಫಲಾನುಭವಿಗಳೊಂದಿಗೆ ಸಂವಾದ ನಡೆಸಲಾಯಿತು. ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ನೀಡಲು ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಭೋವಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚಿಕ್ಕಂದವಾಡಿ ತಿಪ್ಪೇಸ್ವಾಮಿ ಇದ್ದರು.
ನಿಗಮದಲ್ಲಿ ಸದ್ಯ ₹ 200 ಕೋಟಿ ಹಣವಿದೆ. ಅನುದಾನ ಕೊರತೆ ಇದೆ ಎನ್ನುವುದು ಊಹಾಪೋಹದ ಮಾತು. ಸರ್ಕಾರ ಕಾಲಕಾಲಕ್ಕೆ ಆಯವ್ಯಯದಲ್ಲಿ ಅನುದಾನ ಮಂಜೂರು ಮಾಡುತ್ತಿದೆ.ಎಂ.ರಾಮಪ್ಪ ಅಧ್ಯಕ್ಷರು ಭೋವಿ ಅಭಿವೃದ್ಧಿ ನಿಗಮ
ಬ್ಯಾಂಕ್ಗಳು ಸಿಬಿಲ್ ಸ್ಕೋರ್ ಕಾರಣದಿಂದ ಫಲಾನುಭವಿಗಳ ಆಯ್ಕೆಯನ್ನು ತಿರಸ್ಕರಿಸಿದರೆ ಕೂಡಲೇ ಬೇರೆ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಗುರಿ ಸಾಧಿಸದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗುತ್ತದೆ.ಚಂದ್ರಾನಾಯ್ಕ್ ವ್ಯವಸ್ಥಾಪಕ ನಿರ್ದೇಶಕ ಭೋವಿ ನಿಗಮ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.