ಚಿತ್ರದುರ್ಗ: ‘ತಾಯಿ ಎದೆ ಹಾಲು ಶಿಶುಗಳಿಗೆ ಅಮೃತವಿದ್ದಂತೆ. ಇದು ಬಾಲ್ಯದಲ್ಲಿ ಕಾಣಿಸಿಕೊಳ್ಳುವ ಕಾಯಿಲೆಗಳಿಂದ ಶಿಶುಗಳನ್ನು ರಕ್ಷಿಸಲು ಸಹಾಯ ಮಾಡುವ ಪ್ರತಿಕಾಯಕ ಹೊಂದಿರುತ್ತದೆ’ ಎಂದು ಬಸವೇಶ್ವರ ವೈದ್ಯಕೀಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸ್ತ್ರೀ ಮತ್ತು ಪ್ರಸೂತಿ ವಿಭಾಗದ ಮುಖ್ಯಸ್ಥೆ ಡಾ.ಲತಾ ರಮೇಶ್ ತಿಳಿಸಿದರು.
ತಾಲ್ಲೂಕಿನ ಗುತ್ತಿನಾಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್ಜೆಎಂ ಫಾರ್ಮಸಿ ಕಾಲೇಜಿನಿಂದ ಶುಕ್ರವಾರ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಎದೆಹಾಲು ಮಗುವಿಗೆ ಅತ್ಯುತ್ತಮವಾದ ಪೋಷಣೆ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಜತೆಗೆ ತಾಯಿ ಮತ್ತು ಮಗುವಿನ ನಡುವಿನ ವಾತ್ಸಲ್ಯ, ಬಾಂಧವ್ಯ ಮತ್ತು ಪ್ರೀತಿ ಸಹ ಹೆಚ್ಚಾಗುತ್ತದೆ’ ಎಂದು ತಿಳಿಸಿದರು.
‘ತಾಯಿಯ ಎದೆಹಾಲನ್ನು ಜೀವಾಮೃತ ಎಂದೇ ಹೇಳಬಹುದು. ಶಿಶು ಆರೋಗ್ಯಕರವಾಗಿರಬೇಕೆಂದರೆ ಎದೆಹಾಲನ್ನು ಕಡ್ಡಾಯವಾಗಿ ಕುಡಿಸಲೇಬೇಕು. ಅಲ್ಲದೆ ಶಿಶುವಿನ ಬೆಳವಣಿಗೆಯ ಪ್ರಯಾಣದಲ್ಲಿ ಸ್ತನ್ಯಪಾನವು ಅತ್ಯಂತ ಅವಶ್ಯಕ ಭಾಗವಾಗಿದೆ’ ಎಂದು ಪ್ರಾಂಶುಪಾಲ ಡಾ.ಟಿ.ಎಸ್.ನಾಗರಾಜ್ ಹೇಳಿದರು.
ಆಸ್ಪತ್ರೆಯ ಡಾ.ಆರ್.ಯೋಗಾನಂದ, ಡಾ.ಮಾರುತಿ ಟಿ.ಏಕ್ಬೋಟೆ, ಮಲ್ಲಿಕಾರ್ಜುನಯ್ಯ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.